ತ್ರಿಶೂರ್, ಸೆ.5 (ಪಿಟಿಐ)- ಮಧ್ಯ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡಿನ ಎಂಜಿನಿಯರಿಂಗ್ ಕಾಲೇಜಿನ ಎಂಟು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ತಮಿಳುನಾಡಿನ ದಿಂಡಿಗಲ್ನಲ್ಲಿರುವ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಗುರುವಾಯೂರಿನಿಂದ ಕೊಡುಂಗಲ್ಲೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ಮೃತರಲ್ಲಿ ಆರು ಮಂದಿಯನ್ನು ಗುರುತಿಸಲಾಗಿದೆ. ದಿಂಡಿಗಲ್ನ ಸೂರ್ಯ, ಯುವಸಂಜಿತ್, ವಿಶ್ವ ಮತ್ತು ಜೋಹುವಾ ಹಾಗೂ ಮಧುರೈನ ಸಂತೋಷ್ ಮತ್ತು ಪ್ರಸನ್ನ ಮೃತಪಟ್ಟವರು. ಇನ್ನಿಬ್ಬರ ಗುರುತು ಪತ್ತೆಯಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾತ್ರಿ 11.40ರ ಸುಮಾರಿಗೆ ಕೈಪಮಂಗಲಂ ಸಮೀಪದ ಪಣಂಬಿಕ್ಕುನ್ನುವಿನಲ್ಲಿ ಅಪಘಾತ ಸಂಭವಿಸಿದೆ. ತಮಿಳುನಾಡು ನೋಂದಣಿಯ ಕಾರು, ಹೆದ್ದಾರಿಯಲ್ಲಿ ನಿಂತಿದ್ದ ಮಹಾರಾಷ್ಟ್ರ ನೋಂದಣಿಯ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಆರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾರಿನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಹೊರತೆಗೆದರು. ಮೃತದೇಹಗಳನ್ನು ತ್ರಿಶೂರ್ ವೈದ್ಯಕೀಯ ಕಾಲೇಜಿನ ಶವಾಗಾರಕ್ಕೆ ರವಾನಿಸಲಾಗಿದೆ.
ಈ ಸಂಬಂಧ ಕೈಪಮಂಗಲಂ ಪೊಲೀಸರು ಲಾರಿ ಚಾಲಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 105ರ ಅಡಿಯಲ್ಲಿ ಅಪರಾಧಿಕ ನರಹತ್ಯೆ ಪ್ರಕರಣ ದಾಖಲಿಸಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಫ್ಐಆರ್ ಪ್ರಕಾರ, ಲಾರಿ ಹೆದ್ದಾರಿಯ ಬಲಭಾಗದಲ್ಲಿ ಅಕ್ರಮವಾಗಿ ನಿಲ್ಲಿಸಲಾಗಿತ್ತು. ನಿರ್ಮಾಣ ಕಾಮಗಾರಿಯ ಹಿನ್ನೆಲೆಯಲ್ಲಿ ಸಂಚಾರವನ್ನು ಬೇರೆಡೆಗೆ ತಿರುಗಿಸಿದ್ದ ಬ್ಯಾರಿಕೇಡ್ಗಳ ಸಮೀಪ ಲಾರಿ ನಿಂತಿತ್ತು. ಅತಿವೇಗವಾಗಿ ಬರುತ್ತಿದ್ದ ಕಾರಿನ ಚಾಲಕ ಡೈವರ್ಷನ್ ಬ್ಯಾರಿಕೇಡ್ ಗಮನಿಸದೆ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಂದ ವಶಪಡಿಸಿಕೊಂಡ ಗುರುತಿನ ಚೀಟಿಗಳ ಆಧಾರದ ಮೇಲೆ ಪೊಲೀಸರು ಅವರ ಕುಟುಂಬ ಸದಸ್ಯರನ್ನು ಸಂಪರ್ಕಿಸಿದ್ದಾರೆ. ಕೆಲವು ಕುಟುಂಬಗಳಿಗೆ ತಮ್ಮ ಮಕ್ಕಳು ಕೇರಳಕ್ಕೆ ಪ್ರಯಾಣಿಸಿರುವ ಮಾಹಿತಿ ಕೂಡ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಕುಟುಂಬಸ್ಥರು ತ್ರಿಶೂರ್ ವೈದ್ಯಕೀಯ ಕಾಲೇಜಿಗೆ ಆಗಮಿಸಿದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
