ಹುಬ್ಬಳ್ಳಿ (Hubballi), ಡಿ. 22- ಅನ್ಯ ಜಾತಿಯ ಯುವಕನ ಜೊತೆ ಮಗಳು ಮದುವೆಯಾಗಿದ್ದಾಳೆಂಬ ಕೋಪಕ್ಕೆ ಮಗಳು ಗರ್ಭಿಣಿ ಎಂಬುವುದನ್ನೂ ಲೆಕ್ಕಿಸದೇ ಪಾಲಕರು ಮಗಳ ಮೇಲೆ ಮಾರಕಾಸಗಳಿಂದ ಹೊಡೆದು ಕೊಲೆ ಮಾಡಿದ್ದಲ್ಲದೆ, ಯುವಕನ ಕುಟುಂಬದವರ ಮೇಲೂ ಹಲ್ಲೆ ನಡೆಸಿದ್ದರಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬೆಳಗಲಿಯ ಇನಾಂ ವೀರಾಪುರ ಗ್ರಾಮದಲ್ಲಿ ನಡೆದಿದೆ.
ತಲೆ ಹಾಗೂ ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದರಿಂದ ಆರು ತಿಂಗಳ ಗರ್ಭಿಣಿ ಮಾನ್ಯಾ ದೊಡ್ಡಮನಿ (19) ಅವರನ್ನು ಚಿಕಿತ್ಸೆಗಾಗಿ ನಗರದ ವಿವೇಕಾನಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಮಾನ್ಯಾ ಹಾಗೂ ಹೊಟ್ಟೆಯಲ್ಲಿದ್ದ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಹುಡುಗನ ತಾಯಿ ರೇಣವ್ವ ಹಾಗೂ ದೊಡ್ಡಪ್ಪ ಅವರ ಸ್ಥಿತಿ ಚಿಂತಾಜನಕವಾಗಿದ್ದು,ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸುದ್ದಿ ತಿಳಿದು ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಡಿವೈಎಸ್ಪಿ ಕಟಗಿ, ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಗಾಯಾಳುಗಳ ಮಾಹಿತಿ ಪಡೆದರು. ಆಸ್ಪತ್ರೆ ಸುತ್ತ ಹಾಗೂ ಇನಾಂ ವೀರಾಪುರ ಗ್ರಾಮದಲ್ಲಿ ಪೊಲೀಸ್ ಬಿಗಿ ಭದ್ರತೆ ಹಾಕಲಾಗಿದೆ.
ಮೂವರ ಬಂಧನ:
ಮಾಧ್ಯಮದವರೊಂದಿಗೆ ಮಾತನಾಡಿದ ಎಸ್ಪಿ ಗುಂಜನ್ ಆರ್ಯ, ಗರ್ಭಿಣಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕಾಶಗೌಡ ಪಾಟೀಲ, ವೀರನಗೌಡ ಪಾಟೀಲ ಮತ್ತು ಅರುಣಗೌಡ ಪಾಟೀಲ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು. ಮುಂಜಾಗ್ರತಾ ಕ್ರಮವಾಗಿ ಏಳೆಂಟು ಮಂದಿ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಮಾನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.
ಕಳೆದ ಮೇ ತಿಂಗಳಲ್ಲಿ ಮಾನ್ಯಾ ಪಾಟೀಲ ಅವರು, ತನ್ನದೇ ಗ್ರಾಮದ ಅನ್ಯ ಜಾತಿಯ ಹುಡುಗನೊಂದಿಗೆ ಮದುವೆಯಾಗಿದ್ದರು. ಅದಕ್ಕೆ ಅವರ ಕುಟುಂಬದಿಂದ ವಿರೋಧ ವ್ಯಕ್ತವಾಗಿತ್ತು. ಆದರೆ, ಯಾವ ಕಾರಣಕ್ಕೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎನ್ನುವುದು ಸ್ಪಷ್ಟವಾಗಿಲ್ಲ. ತನಿಖೆ ನಂತರವೇ ತಿಳಿದು ಬರಲಿದೆ ಎಂದು ಎಸ್ಪಿ ತಿಳಿಸಿದರು.
ಏನಿದು ಪ್ರಕರಣ:
ಯುವತಿ ಮಾನ್ಯಾ, ತನ್ನದೇ ಗ್ರಾಮದ ಅನ್ಯ ಜಾತಿಯ ಯುವಕ ವಿವೇಕಾನಂದ ದೊಡ್ಡಮನಿ ಅವರ ಜೊತೆ ಮದುವೆಯಾಗಿದ್ದರು. ಯುವತಿ ಕುಟುಂಬದವರು ವಿರೋಧಿಸಿದ್ದಕ್ಕೆ ತಹಶೀಲ್ದಾರ್ ಹಾಗೂ ಪೊಲೀಸರು ಎರಡು ಕುಟುಂಬದವರನ್ನು ಕರೆಸಿ ಬುದ್ಧಿ ಹೇಳಿ, ಮುಂಜಾಗ್ರತ ಕ್ರಮವಾಗಿ ಪ್ರಕರಣ ದಾಖಲಿಸಿದ್ದರು. ನಂತರ ಪ್ರಾಣ ಭಯದಿಂದ ದಂಪತಿ ಹಾವೇರಿಗೆ ಹೋಗಿ ವಾಸವಿದ್ದರು.
ಡಿ. 8ರಂದು ಇನಾಂ ವೀರಾಪುರಕ್ಕೆ ದಂಪತಿ ಮರಳಿದ್ದರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವಿವೇಕಾನಂದ ಹಾಗೂ ಅವರ ತಂದೆ ಮೇಲೆ ನಿನ್ನೆ ಯುವತಿಯ ಕುಟುಂಬದವರು ಹಲ್ಲೆ ನಡೆಸಿದ್ದಾರೆ. ನಂತರ ಅವರ ಮನೆಗೆ ತೆರಳಿ ಮಾನ್ಯಾ, ರೇಣವ್ವ ಹಾಗೂ ಕುಟುಂಬದವರ ಮೇಲೆ ಮಾರಕಾಸಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಕರ್ನಾಟಕ ದಲಿತ ವಿಮೋಚನ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.
ಮೃತದೇಹ ಹಸ್ತಾಂತರ:
ಕೊಲೆಯಾದ ಮಾನ್ಯಾ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಂತರ ಪತಿ ವಿವೇಕಾನಂದ ಸಂಬಂಧಿಕರಿಗೆ ಹಸ್ತಾಂತರ ಮಾಡಲಾಗಿದೆ.
ಯುವಕನ ಮನೆ ಮುಂದೆ ರಕ್ತದೋಕಳಿ :
ಈ ಘಟನೆಯಿಂದ ಇನಾಂ ವೀರಾಪುರದಲ್ಲಿ ನೀರವ ಮೌನ ಆವರಿಸಿದೆ. ಪ್ರೀತಿಸಿ ಮದುವೆಯಾಗಿದ್ದಾಳೆಂಬ ಕಾರಣಕ್ಕೆ ಯುವಕನ ಮನೆಯ ಮುಂದೆ ರಕ್ತದ ಕೋಡಿಯೇ ಹರಿದು ಇಡೀ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
Read This : ಗೃಹಲಕ್ಷ್ಮಿ ಯೋಜನೆ ಕಂತುಗಳ ಪಾವತಿ ಕುರಿತು ತಪ್ಪು ಮಾಹಿತಿ ನೀಡಿದ್ದಕ್ಕೆ ಕ್ಷಮೆ ಕೇಳಿದ ಲಕ್ಷ್ಮಿ ಹೆಬ್ಬಾಳ್ಕರ್
