ಲಕ್ನೋ,ಜು.26- ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ಅರ್ಪಿಸಿದ ಕಾಣಿಕೆಗಳು ಹಾಗೂ ದೇಣಿಗೆಯ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ, ಉತ್ತರ ಪ್ರದೇಶ ಸರ್ಕಾರವು ವಿಶೇಷ ತನಿಖಾ ತಂಡವನ್ನು ಪುನರ್ ರಚಿಸಿದೆ. ಸುಪ್ರೀಂ ಕೋರ್ಟ್ನ ಕಟ್ಟುನಿಟ್ಟಿನ ನಿರ್ದೇಶನದ ಮೇರೆಗೆ ಈ ಮಹತ್ವದ ಬದಲಾವಣೆ ಮಾಡಲಾಗಿದ್ದು, ಪ್ರಕರಣದ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಲಾಗಿದೆ.
ಸುಪ್ರೀಂ ಕೋರ್ಟ್ನ ಆದೇಶದಂತೆ, ಈ ಬಾರಿ ತನಿಖೆಯ ಜವಾಬ್ದಾರಿಯನ್ನು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ.
ಇನ್ಸ್ಪೆಕ್ಟರ್ ಜನರಲ್ ಕಿರಣ್ ಎಸ್. ಅವರು ನೂತನ ಎಸ್ಐಟಿ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಅಯೋಧ್ಯೆಯ ಡಿಐಜಿ ಸೋಮೆನ್ ವರ್ಮಾ ಮತ್ತು ಅಯೋಧ್ಯೆಯ ಎಸ್ಎಸ್ಪಿ ಡಾ. ಗೌರವ್ ಗ್ರೋವರ್ ಅವರು ತಂಡದ ಪ್ರಮುಖ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇದಕ್ಕೂ ಮುನ್ನ ಈ ತನಿಖೆಯನ್ನು ಲಕ್ನೋ ಕಮಿಷನರ್ ವಿಜಯ್ ವಿಶ್ವಾಸ್ ಪಂತ್, ವಿಶೇಷ ಕಾರ್ಯದರ್ಶಿ (ಹಣಕಾಸು) ನೀಲ್ ರತನ್ ಕುಮಾರ್ ಮತ್ತಿತರ ಅಧಿಕಾರಿಗಳನ್ನೊಳಗೊಂಡ ತಂಡ ನಡೆಸುತ್ತಿತ್ತು. ಆದರೆ, ನ್ಯಾಯಯುತ ಹಾಗೂ ಪಾರದರ್ಶಕ ತನಿಖೆಯನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಹೊಸ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು.
ಜುಲೈ 13 ರಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯಾಲ್ಯ ಬಾಗ್ಚಿ ಮತ್ತು ವಿ. ಮೋಹನ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತ್ತು.ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್, ಪ್ರಕರಣದಲ್ಲಿ ಸಂಜ್ಞೇಯ ಅಪರಾಧ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.
ಈ ವೇಳೆ ಪ್ರತಿಕ್ರಿಯಿಸಿದ್ದ ಸರ್ವೋಚ್ಚ ನ್ಯಾಯಾಲಯವು, ಐಎಎಸ್ ಅಧಿಕಾರಿಗಳ ಬದಲಿಗೆ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ಹೊಸ ಎಸ್ಐಟಿ ರಚಿಸುವಂತೆ ತಾಕೀತು ಮಾಡಿತ್ತು. ಅಲ್ಲದೆ, ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದು ಒತ್ತಿ ಹೇಳಿದ್ದ ಪೀಠವು, ಜುಲೈ 27ರೊಳಗೆ ಪ್ರಕರಣದ ಪ್ರಸ್ತುತ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು.
ನ್ಯಾಯಾಲಯದ ಈ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಎಸ್ಐಟಿಯನ್ನು ಪುನರ್ ರಚಿಸಿ ಯುಪಿ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ನೂತನ ತಂಡವು ಈಗಾಗಲೇ ತನ್ನ ಕಾರ್ಯಚಟುವಟಿಕೆಗಳನ್ನು ಆರಂಭಿಸಿದೆ. ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆ ಸಂಗ್ರಹದಲ್ಲಿ ಅಕ್ರಮ ನಡೆದಿರುವ ಕುರಿತು ಹಲವು ಆರೋಪಗಳು ಕೇಳಿಬಂದಿದ್ದವು.
ಈ ಬಗ್ಗೆ ಕೂಲಂಕಷ ತನಿಖೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ವೇಳೆ, ಶ್ರೀ ರಾಮ ಜನಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೂ ನ್ಯಾಯಾಲಯವು ನೋಟಿಸ್ ಜಾರಿ ಮಾಡಿತ್ತು. ಈ ಹಿಂದೆ ಪ್ರಾಥಮಿಕ ತನಿಖೆ ಕಾರ್ಯಾಚರಣೆ ನಡೆಸಿದ್ದ ಎಸ್ಐಟಿ ತಂಡವು ಸಿಸಿಟಿವಿ ದೃಶ್ಯಾವಳಿಗಳು, ದೇಣಿಗೆ ದಾಖಲೆ ಪುಸ್ತಕಗಳು, ನಗದು ನಿರ್ವಹಣಾ ವಿಧಾನಗಳು ಹಾಗೂ ಸಮಗ್ರ ಆರ್ಥಿಕ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿತ್ತು. ಮಂದಿರದ ಹಲವು ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿ ಪ್ರಾಥಮಿಕ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಲಾಗಿತ್ತು.
ತನಿಖೆಯ ಭಾಗವಾಗಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದು, ದುರುಪಯೋಗಪಡಿಸಿಕೊಂಡ ಹಣದಿಂದ ಮಾಡಲಾದ ಹೂಡಿಕೆಗಳು, ವಾಹನಗಳು, ನಗದು ಹಾಗೂ ಇತರ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರು. ಡಿಜಿಟಲ್ ಸಾಕ್ಷ್ಯಗಳ ಶೋಧ ಕಾರ್ಯವೂ ತೀವ್ರಗೊಂಡಿತ್ತು. ಪ್ರಸ್ತುತ ನೂತನವಾಗಿ ರಚನೆಯಾಗಿರುವ ವಿಶೇಷ ತನಿಖಾ ತಂಡವು ಬಾಕಿ ಉಳಿದಿರುವ ಎಲ್ಲ ಆಯಾಮಗಳ ತನಿಖೆಯನ್ನು ಪೂರ್ಣಗೊಳಿಸಿ, ನಿಗದಿತ ದಿನಾಂಕದೊಳಗೆ ಸರ್ವೋಚ್ಚ ನ್ಯಾಯಾಲಯಕ್ಕೆ ತನ್ನ ಪ್ರಗತಿ ವರದಿಯನ್ನು ಸಲ್ಲಿಸಲು ಸಜ್ಜಾಗಿದೆ.
