ನವದೆಹಲಿ,ಫೆ.1-ಪ್ರಧಾನಮಂತ್ರಿ ಗತಿ ಶಕ್ತಿ ಯೋಜನೆಯಡಿ ಪ್ರಸಕ್ತ ಹಣಕಾಸಿನ ವರ್ಷದಲ್ಲಿ 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ್ದಾರೆ.
ಸಂಸತ್ನಲ್ಲಿಂದು 2022-23ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಕೋವಿಡ್ ಸಂಕಷ್ಟದಲ್ಲಿಯೂ ದೇಶದ ಆರ್ಥಿಕ ಪರಿಸ್ಥಿತಿ ಚೇತರಿಸಿಕೊಳ್ಳುತ್ತಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಪ್ರಧಾನಮಂತ್ರಿ ಗತಿ ಶಕ್ತಿ ಯೋಜನೆಯಡಿ 60 ಲಕ್ಷ ಉದ್ಯೋಗಗಳನ್ನು ಸೃಷ್ಟಿ ಯುವಕರಿಗೆ ನೀಡುತ್ತೇವೆ ಎಂದು ಪ್ರಕಟಿಸಿದರು.
ಯುವಕರು ಮತ್ತು ಮಹಿಳೆಯರ ಸಬಲೀಕರಣ ಮಾಡುವುದೇ ನಮ್ಮ ಸರ್ಕಾರದ ಮುಂದಿರುವ ಗುರಿಯಾಗಿದೆ. ಬಡತನದಿಂದ ಮೇಲೆತ್ತಲು ಈ ಉದ್ಯೋಗಗಳು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಆತ್ಮ ನಿರ್ಭರ್ ಭಾರತ್ ಯೋಜನೆಗೆ ದೇಶಾದ್ಯಂತ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗಿದೆ.
ಉದ್ಯೋಗ ಸೃಷ್ಟಿಗೆ ಪಿಎಲ್ಐ ಯೋಜನೆಯನ್ನು ಸೇರ್ಪಡೆ ಮಾಡಲಿದ್ದೇವೆ. 60 ಲಕ್ಷ ಹೊಸ ಉದ್ಯೋಗಗಳ ಸೃಷ್ಟಿಗೆ ಮುಂದಿನ ಐದು ವರ್ಷಗಳಲ್ಲಿ 30 ಲಕ್ಷ ಕೋಟಿ ಬಂಡವಾಳ ಇದರಲ್ಲಿ ಹೂಡಿಕೆಯಾಗಲಿದೆ ಎಂದು ಹೇಳಿದರು.
ವಿಶೇಷವೆಂದರೆ ಫೆ.10ರಂದು ಉತ್ತರಪ್ರದೇಶ ಮೊದಲ ಹಂತದಲ್ಲಿ ಹಾಗೂ ನಾಲ್ಕು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಮತದಾರರನ್ನು ಓಲೈಸಲು ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಯ ಆಶ್ವಾಸನೆಯನ್ನು ನೀಡಿದೆ ಎಂದು ಹೇಳಲಾಗುತ್ತಿದೆ.
