Friday, October 24, 2025
Homeಬೆಂಗಳೂರುನ.17 ರಿಂದ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರೀಷೆ

ನ.17 ರಿಂದ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರೀಷೆ

Groundnut Fair Bengaluru: Kadlekai Parishe Set for Nov 17

ಬೆಂಗಳೂರು,ಅ.24– ಐತಿಹಾಸಿಕ ಬಸವನಗುಡಿಯ ಕಡಲೆಕಾಯಿ ಪರೀಷೆ ನ.17ರಿಂದ ಆರಂಭವಾಲಿದ್ದು, ಈ ಬಾರಿ ಐದು ದಿನಗಳ ಕಾಲ ಅದ್ಧೂರಿಯಾಗಿ ಪರೀಷೆ ನಡೆಯಲಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಕಡಲೆಕಾಯಿ ಪರಿಷೆ – 2025 ರ ಪೂರ್ವಾಭಾವಿ ಸಿದ್ದತಾ ಸಭೆಯಲ್ಲಿ ಮಾತನಾಡಿದ ಅವರು, ಮೊದಲ ಬಾರಿಗೆ 2 ದಿನಗಳ ಪರೀಷೆ 5 ದಿನಗಳವರೆಗೆ ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ. ಕಳೆದ ವರ್ಷ ಸುಮಾರು 5 ಲಕ್ಷ ಭಕ್ತಾದಿಗಳು ಭಾಗವಹಿಸಿದ್ದು, ಯಶಸ್ವಿಯಾಗಿ ನಡೆದಿತ್ತು. ಜೊತೆಗೆ ಪ್ಲಾಸ್ಟಿಕ್‌ ಮುಕ್ತ ಕಡಲೆಕಾಯಿ ಪರೀಷೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು ಎಂದರು.

ಪ್ರತಿ ವರ್ಷದಂತೆ ಕಡೇ ಕಾರ್ತಿಕ ಮಾಸದಲ್ಲಿ ಬಸವನಗುಡಿಯ ಶ್ರೀ ಬಸವಣ್ಣ ದೇವಾಲಯದಲ್ಲಿ ನ.17ರಂದು ಬೆಳಗ್ಗೆ 10 ಗಂಟೆಗೆ ಆರಂಭವಾಗುವ ಕಡಲೆಕಾಯಿ ಪರೀಷೆ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

ಉದ್ಘಾಟನೆಯನ್ನು 21 ಬಸವಣ್ಣಗಳನ್ನು ದೇವಸ್ಥಾನಕ್ಕೆ ಆಹ್ವಾನಿಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಗುವುದು. ವಿಜೃಂಭಣೆಯ ದೀಪಾಲಂಕಾರ ವ್ಯವಸ್ಥೆ ಬುಲ್‌ ಟೆಂಪಲ್‌ ರಸ್ತೆ, ಗಾಂಧಿ ಬಜಾರ್‌ ಮತ್ತು ಎನ್‌. ಆರ್‌ ರಸ್ತೆಗಳಿಗೂ ಸೇರಿ ದೀಪಾಂಲಕಾರ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದರು.

ಎನ್‌ಜಿಓಗಳ ಸಹಕಾರದೊಂದಿಗೆ ಪ್ಲಾಸ್ಟಿಕ್‌ ಕವರ್‌ ಗಳನ್ನು ಬಳಸದಂತೆ ಬಟ್ಟೆ ಬ್ಯಾಗ್‌ ಗಳನ್ನು ಬಳಸಲು ಅಂಗಡಿಯವರಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸಲು ಪರಿಷೆಗೆ ಬನ್ನಿ ಕೈ ಚೀಲ ತನ್ನಿ ಎಂದು ಘೋಷಣೆ ಹಾಗೂ ಪ್ಲಾಸ್ಟಿಕ್‌ ಸಂಪೂರ್ಣ ನಿಷೇದಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಸುಂಕ ವಸೂಲಾತಿ ರದ್ದು ಮುಂದುವರಿಕೆ
ಬುಲ್‌ಟೆಂಪಲ್‌ ರಸ್ತೆಯಲ್ಲಿ ಬೀದಿಬದಿ ವ್ಯಾಪಾರಿಗಳಿಂದ ಸುಂಕ ವಸೂಲಾತಿಗೆ ಪ್ರತಿ ವರ್ಷ ಟೆಂಡರ್‌ ಮಾಡಲಾಗುತ್ತಿದ್ದು, ಟೆಂಡರ್‌ ದಾರರು ಅಂಗಡಿಯವರಿಂದ ಬಲವಂತವಾಗಿ ಹೆಚ್ಚು ಸುಂಕ ವಸೂಲಿ ಮಾಡುತ್ತಿರುವುದಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ಸುಂಕ ವಸೂಲಾತಿ ಟೆಂಡರ್‌ ಅನ್ನು ಕೈಬಿಡಲು ಹಾಗೂ ವ್ಯಾಪಾರಸ್ಥರಿಂದ ಸುಂಕವನ್ನು ಕಳೆದ ವರ್ಷದಂತೆ ಈ ವರ್ಷವೂ ವಸೂಲಿ ಮಾಡದಂತೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಕಡಲೆಕಾಯಿ ಪರಿಷೆ ದಿನಗಳಂದು ಆರೋಗ್ಯ ಸ್ವಚ್ಛತೆ ನೈರ್ಮಲ್ಯಕ್ಕೆ ಒತ್ತು ಮತ್ತು ನೂಕು ನುಗ್ಗಲು ಉಂಟಾಗದಂತೆ ತಡೆಯಲು ಪೊಲೀಸ್‌‍ ಇಲಾಖೆಯ ಸಹಕಾರದೊಂದಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ನಿರಂತರ ವಿದ್ಯುತ್‌, ಕುಡಿಯುವ ನೀರು, ಸಾರ್ವಜನಿಕ ಶೌಚಾಲಯದ ವ್ಯವಸ್ಥೆ ಮಾಡಲಾಗುವುದು ಎಂದರು.

ಬೀದಿದೀಪಗಳ ಅಳವಡಿಕೆ ಮತ್ತು ದುರಸ್ಥಿ, ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಸಿ.ಸಿ.ಟಿ.ವಿಗಳನ್ನು ಪ್ರಮುಖ ಸ್ಥಳಗಳಲ್ಲಿ ಅಳವಡಿಕೆ, ಅಗ್ನಿ ಶಾಮಕ ವಾಹನ ನಿಯೋಜನೆ ಸೇರಿದಂತೆ ತುರ್ತು ಚಿಕಿತ್ಸೆ ವಾಹನದ ವ್ಯವಸ್ಥೆ, ಮಾರ್ಷಲ್‌ಗಳನ್ನಿ ನಿಯೋಜಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಶಾಸಕರಾದ ರವಿಸುಬ್ರಹಣ್ಯ, ಉದಯ ಗರುಡಾಚಾರ್‌, ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯರಾದ ಕೆ.ಎಂ .ನಾಗರಾಜ್‌, ದ್ವಾರಕಾನಾಥ್‌, ದಕ್ಷಿಣ ಪಾಲಿಕೆಯ ಹಿರಿಯ ಅಧಿಕಾರಿ ದಿಗ್ವಿಜಯ ಬೋಡ್ಸೆ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

Latest News