Saturday, July 27, 2024
Homeರಾಜ್ಯ14 ಬಜೆಟ್ ಮಂಡಿಸಿದ ಸಿಎಂಗೆ ಶಾಸಕ ಆರ್ಥಿಕ ಸಲಹೆಗಾರನಂತೆ : ಕುಮಾರಸ್ವಾಮಿ ವ್ಯಂಗ್ಯ

14 ಬಜೆಟ್ ಮಂಡಿಸಿದ ಸಿಎಂಗೆ ಶಾಸಕ ಆರ್ಥಿಕ ಸಲಹೆಗಾರನಂತೆ : ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು,ಡಿ.30- ಹದಿನಾಲ್ಕು ಬಾರಿ ದಾಖಲೆಯ ಆಯವ್ಯಯ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಶಾಸಕರನ್ನು ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅನುಭವಿ ಆರ್ಥಿಕ ಸಲಹೆಗಾರರನ್ನಾಗಿ ಮಾಡಿಕೊಂಡಿದ್ದರೆ ಅಭಿನಂದಿಸಬಹುದಿತ್ತು. ಆದರೆ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಅಲ್ಲದೆ ಆಡಳಿತ ಸುಧಾರಣಾ ಆಯೋಗಕ್ಕೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರನ್ನು ಹಾಗೂ ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅವರನ್ನು ನೇಮಕ ಮಾಡಿಕೊಂಡಿದ್ದಾರೆ. ಇವು ಗಂಜಿ ಕೇಂದ್ರಗಳೇ ಎಂದು ವಾಗ್ದಾಳಿ ನಡೆಸಿದರು.

ಈ ಹಿಂದೆ ಹಾರ್ನಹಳ್ಳಿ ರಾಮಸ್ವಾಮಿ ಅವರು ಇತ್ತೀಚೆಗೆ ನಿವೃತ್ತ ಐಎಎಸ್ ಅಧಿಕಾರಿ ವಿಜಯಭಾಸ್ಕರ್ ಅವರು ಆಡಳಿತ ಸುಧಾರಣಾ ಆಯೋಗದ ವರದಿಯನ್ನು ನೀಡಿದ್ದಾರೆ. ಅವುಗಳ ಅನುಷ್ಠಾನ ಎಷ್ಟರಮಟ್ಟಿಗೆ ಆಗಿದೆ ಎಂದರು. ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರ ನೇತೃತ್ವದ ಸದನದ ಸಮಿತಿ ಬಿಎಂಐಸಿ ಯೋಜನೆಗೆ ಸಂಬಂಧಿಸಿದಂತೆ ನೀಡಿದ ವರದಿ ಅನುಷ್ಠಾನ ಏಕೆ ಆಗಲಿಲ್ಲ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷಾ ವರದಿ ಸ್ವೀಕರಿಸಲಿಲ್ಲ ಎಂದು ಆರೋಪಿಸಿರುವ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದು ಏಳು ತಿಂಗಳು ಕಳೆದಿದೆ. ಇನ್ನೂ ಏಕೆ ವರದಿ ಸ್ವೀಕರಿಸಿಲ್ಲ ಎಂದು ಪ್ರಶ್ನಿಸಿದರು.

ಹೊಸ ವರ್ಷದಲ್ಲೂ ಮುಂದುವರೆಯಲಿದೆಯಂತೆ ಇಸ್ರೇಲ್-ಹಮಾಸ್ ಯುದ್ಧ

ಖಾಲಿ ಇರುವ ಹುದ್ದೆ ಭರ್ತಿ ಮಾಡಿ:
ಖಾಸಗಿ ಸಂಸ್ಥೆಗಳ ಮುಖ್ಯಸ್ಥರನ್ನು ಕರೆದು ರಾಜ್ಯ ಮಟ್ಟದ ಉದ್ಯೋಗ ಮಾಡುವ ಬದಲು ಖಾಲಿ ಇರುವ ಎರಡೂವರೆ ಸಾವಿರ ವಿವಿಧ ಇಲಾಖೆಗಳ ಹುದ್ದೆಗಳನ್ನು ಭರ್ತಿ ಮಾಡಿ. ಕೌಶಲ್ಯ ಅಭಿವೃದ್ಧಿ ಹೆಸರಿನಲ್ಲಿ ಹಣ ತಿನ್ನುವ ಬದಲು ಯುವ ಸಮುದಾಯಕ್ಕೆ ಸೂಕ್ತ ಉದ್ಯೋಗ ತರಬೇತಿ ನೀಡಿ ಎಂದು ಆಗ್ರಹಿಸಿದರು. ವಿದೇಶಿ ಬಂಡವಾಳ ಹೂಡಿಕೆ ಶೇ.44ರಷ್ಟು ಕಡಿಮೆಯಾಗಿದೆ. 2022ರಲ್ಲಿ 5,20,000 ಕೋಟಿ ರೂ. ಬಂಡವಾಳ ಹೂಡಿಕೆಗೆ ಒಪ್ಪಂದವಾಗಿತ್ತು ಎಂದು ಹೇಳಿದರು. ಅದರಲ್ಲಿ ಎಷ್ಟು ಹೂಡಿಕೆಯಾಗಿದೆ. ದಾವೋಸ್‍ಗೆ ಹೋಗಲು 9 ಕೋಟಿ ರೂ.ಗೆ ಒಪ್ಪಿಗೆ ಪಡೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಳೆದ ಏಳು ತಿಂಗಳಲ್ಲಿ 5 ಗ್ಯಾರಂಟಿ ಯೋಜನೆಗಳ ಭಜತೆ ಬಿಟ್ಟರೆ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಬೆಂಗಳೂರಿನಲ್ಲಿ 196 ಕಿ.ಮೀ ಸುರಂಗ ರಸ್ತೆ ನಿರ್ಮಾಣ ಮಾಡಲು ಎರಡು ಇಲಾಖೆಗಳ ನಡುವೆ ಜಟಾಪಟಿ ನಡೆಯುತ್ತಿದೆ. ರಾಜ್ಯದಲ್ಲಿ ತೀವ್ರ ಸ್ವರೂಪದ ಬರವಿದ್ದರೂ ರೈತರಿಗೆ ನೀಡಿದ್ದ 2000 ಪರಿಹಾರ ಧನವನ್ನು ಇನ್ನು ನೀಡಿಲ್ಲ. ನೀಡಲು ಶಕ್ತಿಯೂ ಇಲ್ಲ. ಆದರೂ ನುಡಿದಂತೆ ನಡೆದಿದ್ದೇವೆ ಎಂದು ನಿತ್ಯ ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು. ಸರ್ಕಾರದ ವೈಫಲ್ಯಗಳನ್ನು ಮುಂದಿನ ಜಂಟಿ ಹಾಗೂ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪ ಮಾಡುವುದಾಗಿ ಹೇಳಿದರು.

ತನಿಖೆಗೆ ಆಗ್ರಹ:
ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಹಿಂದಿನ ಸರ್ಕಾರದ ಕೋವಿಡ್ ಅವಧಿಯಲ್ಲಿ 40 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸಿರುವುದು ನಂಬಲಾಗುತ್ತದೆಯೇ? ಎಂದು ಪ್ರಶ್ನಿಸಿದ ಅವರು, ಈ ವಿಚಾರದ ಸತ್ಯಾಸತ್ಯತೆಯನ್ನು ಹೊರಗೆ ತರಲು ಸರ್ಕಾರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ನಕಲಿ ಎಂಬಿಎ ಕೋರ್ಸ್ ಬಗ್ಗೆ ಇರಲಿ ಎಚ್ಚರ

ಸರ್ಕಾರದ ಬಳಿ ಅಂಕಿಅಂಶಗಳಿವೆ, ಕೋವಿಡ್ ಅವಧಿಯಲ್ಲಿ ಎಷ್ಟು ಹಣ ಬಿಡುಗಡೆಯಾಯ್ತು ಎಂಬುದನ್ನು ಹೇಳಬೇಕಲ್ಲವೇ? ಅದನ್ನು ಬಿಟ್ಟು ರಾಜಕೀಯಕ್ಕಾಗಿ ಬಳಕೆ ಮಾಡಿಕೊಳ್ಳುವುದಾದರೆ ಮಾಜಿ ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಅವರು ಮೂರು ತಲೆಮಾರಿಗೆ ಆಗುವಷ್ಟು ಆಸ್ತಿ ಮಾಡಿದ್ದೇವೆ ಎಂದು ಹೇಳಿದ್ದರಲ್ಲವೇ, ಆ ವಿಚಾರವನ್ನು ನಾವು ಬಳಸಿಕೊಳ್ಳುತ್ತೇವೆ ಎಂದು ತಿಳಿಸಿದರು.

ಹಿಂದಿನ ಸರ್ಕಾರದಲ್ಲಿ ಲೋಪದೋಷಗಳು ನಡೆದಿಲ್ಲ ಎಂದಲ್ಲ. ಆದರೆ ಯತ್ನಾಳ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದು ಆ ಪಕ್ಷಕ್ಕೆ ಸೇರಿದ ವಿಚಾರವಾಗಿದ್ದು, ನಾವು ಮೂಗು ತೂರಿಸುವುದಿಲ್ಲ ಎಂದರು. ಪಾರದರ್ಶಕವಾಗಿರುವ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಯತ್ನಾಳ್ ಅವರ ಹೇಳಿಕೆಯನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

RELATED ARTICLES

Latest News