ಬೆಂಗಳೂರು,ಜೂ.17- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಗಂಗ ಸಾಮ್ರಾಟ ಶ್ರೀ ಪುರುಷ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಎಚ್.ಡಿ.ದೇವೇಗೌಡ ಅಭಿನಂದನಾ ಸಮಿತಿ ವತಿಯಿಂದ ಜೂ.22ರಂದು ಮಧ್ಯಾಹ್ನ 2 ಗಂಟೆಗೆ ಡಾ.ಬಾಬುಜಗಜೀವನ್ರಾಮ್ ಭವನದಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಪ್ರಶಸ್ತಿ ಪ್ರದಾನದ ಜೊತೆಗೆ ಎಚ್.ಡಿ.ದೇವೇಗೌಡ ಅವರ ಬದುಕು ಮತ್ತು ಸಾಧನೆ ಪುಸ್ತಕದ ಜನಾರ್ಪಣೆ ಮಾಡಲಾಗುತ್ತದೆ ಮತ್ತು 93 ವಿವಿಧ ಸಾಧಕರಿಗೆ ಎಚ್.ಡಿ.ದೇವೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ದಗಂಗಾ ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಸ್ಪಟಿಕಪುರಿ ಮಹಾಸಂಸ್ಥಾನದ ಶ್ರೀ ನಂಜಾವಧೂತ ಸ್ವಾಮೀಜಿ, ತುಮಕೂರಿನ ರಾಮಕೃಷ್ಣಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ, ಆದಿಚುಂಚನಗಿರಿ ಮಠದ ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಡಾ.ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅವರುಗಳು ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ.
ಇದೇ ಸಂದರ್ಭದಲ್ಲಿ ಎಚ್.ಡಿ.ದೇವೇಗೌಡರು ಹಾಗೂ ಚನ್ನಮ ದೇವೇಗೌಡ ಅವರನ್ನು ಸನಾನಿಸಲಾಗುತ್ತದೆ. ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಾಧೀಶರಾದ ಎಂ.ಎನ್.ವೆಂಕಟಾಚಲಯ್ಯ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಎಚ್.ಡಿ.ದೇವೇಗೌಡ ಅಭಿನಂದನಾ ಸಮಿತಿ ಪ್ರಕಟಣೆ ತಿಳಿಸಿದೆ.