ಬೆಂಗಳೂರು, ಏ.6- ಹಳೆ ಮೈಸೂರು ಭಾಗದ 15 ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಗಾಗಿ ಪ್ರವಾಸ ಕೈಗೊಳ್ಳುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಪ್ರತಿ ಜಿಲ್ಲೆಗೂ ಒಂದೊಂದು ದಿನ ಭೇಟಿ ನೀಡುತ್ತೇನೆ. ಕಾರ್ಯಕರ್ತರು, ಮುಖಂಡರ ಜತೆ ಆ ದಿನವನ್ನು ಕಳೆಯುತ್ತೇನೆ. ಅವರ ಅಹವಾಲು, ಸಮಸ್ಯೆ ಖುದ್ದು ಆಲಿಸುತ್ತೇನೆ. ಅವರ ಸಮಸ್ಯೆಗಳನ್ನು ಸರಿ ಮಾಡುತ್ತೇನೆ. ಶೀಘ್ರವೇ ಪ್ರವಾಸದ ದಿನಾಂಕ ನಿಗದಿ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು ಮಹಾ ನಗರದಲ್ಲಿ ಜೆಡಿಎಸ್ ಪಕ್ಷವನ್ನು ಬಲಗೊಳಿಸುವುದೂ ಸೇರಿದಂತೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ತಯಾರಿ, ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರ ಜನಾಂದೋಲನ ರೂಪಿಸುವ ಬಗ್ಗೆ ತಮ್ಮ ನಿವಾಸದಲ್ಲಿ ಆಹ್ವಾನಿತ ಮುಖಂಡರ ಜತೆ ಸಭೆ ನಡೆಸಿ ಈ ಮಾಹಿತಿ ನೀಡಿದ್ದಾರೆ.
ಕ್ರಿಯಾಶೀಲವಲ್ಲದ ಜಿಲ್ಲಾಧ್ಯಕ್ಷರ ಬದಲಾವಣೆ, ಖಾಲಿ ಇರುವ ಜಿಲ್ಲಾಧ್ಯಕ್ಷರ ಸ್ಥಾನಗಳ ಭರ್ತಿ, ಸದಸ್ಯತ್ವ ನೋಂದಣಿಯ ಪ್ರಗತಿ ಬಗ್ಗೆಯೂ ಮುಖಂಡರ ಜತೆ ಮಹತ್ವದ ಚರ್ಚೆ ನಡೆಸಿದ್ದಾರೆ.
ಅಲ್ಲದೆ, ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದ ಬಗ್ಗೆ ರಾಜ್ಯ ವ್ಯಾಪಿ ಹೋರಾಟಗಳನ್ನು ಹಮ್ಮಿಕೊಳ್ಳುವಂತೆ ಅವರು ಪಕ್ಷದ ಮುಖಂಡರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ವಿದ್ಯುತ್, ನೀರು, ಬಸ್ ಪ್ರಯಾಣ ದರ, ಹಾಲು, ಮೊಸರು, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಜನರ ಪರವಾಗಿ ಪಕ್ಷ ಹೋರಾಟಗಳನ್ನು ನಡೆಸಬೇಕು. ಜನರ ಕಷ್ಟಕ್ಕೆ ಸ್ಪಂದಿಸುವುದು ನಮ್ಮ ಆದ್ಯ ಕರ್ತವ್ಯ. ಇದನ್ನು ಯಾರೂ ಮರೆಯಬಾರದು ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಿಕ್ಕಿರುವ ಅವಕಾಶ ಬಳಸಿಕೊಂಡು ಪ್ರಧಾನಿಗಳ ನಿರೀಕ್ಷೆಗೆ ಅನುಗುಣವಾಗಿ ಕೆಲಸ ಮಾಡುವ ಪ್ರಯತ್ನ ಮಾಡುತ್ತಿದ್ದೇನೆ. ನನ್ನ ಕೈಲಾದ ಮಟ್ಟಿಗೆ ಒಳ್ಳೆಯ ಕೆಲಸ ಮಾಡಲು ಶ್ರಮ ವಹಿಸುತ್ತಿದ್ದೇನೆ. ಕೇಂದ್ರದಲ್ಲಿ ಕೆಲಸ ಮಾಡಿಕೊಂಡೇ ಪಕ್ಷ ಸಂಘಟನೆಗೆ ಸಮಯ ನಿಗದಿ ಮಾಡುತ್ತೇನೆ. ಪ್ರತಿ ಕಾರ್ಯಕರ್ತ, ಮುಖಂಡನಿಗೂ ಸಿಗುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಕಳೆದ ಚುನಾವಣೆಯಲ್ಲಿ 40-50 ಸಾವಿರ ಮತ ಪಡೆದಿರುವ ಅಭ್ಯರ್ಥಿಗಳಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ. ಮುಂದಿನ ಚುನಾವಣೆಗೆ ಅವರನ್ನು ಸಜ್ಜು ಮಾಡುತ್ತೇನೆ. ತಳಮಟ್ಟದಿಂದ ಸಂಘಟನೆ ಬಲಗೊಳಿಸಲು ಶ್ರಮಿಸುತ್ತೇನೆ ಎಂದಿದ್ದಾರೆ.
ಕೂಡಲೇ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯಿತಿ ಚುನಾವಣೆಗೆ ಸಜ್ಜಾಗಿ, ಎಲ್ಲೆಲ್ಲಿ ಗೆಲ್ಲುತ್ತೇವೆಯೋ ಆ ಕ್ಷೇತ್ರಗಳನ್ನು ಪಟ್ಟಿ ಮಾಡಿ. ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಬಗ್ಗೆ ಹೆಚ್ಚು ಮುತುವರ್ಜಿ ಕೊಟ್ಟು ಕೆಲಸ ಮಾಡಿ. ಹಗಲು ರಾತ್ರಿ ನಾನು ಕೆಲಸ ಮಾಡಲು ಸಿದ್ದ. ನನ್ನ ಹಾಗೆಯೇ ನೀವು ಕೆಲಸ ಮಾಡಲೇಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಯುವಕರಿಗೆ ಆದ್ಯತೆ ಕೊಡಿ:
ಸಂಘಟನೆಯಲ್ಲಿ ಯುವಕರಿಗೆ ಹೆಚ್ಚು ಮನ್ನಣೆ ಕೊಡಿ, ಯುವಕರು ಇಲ್ಲದೆ ಪಕ್ಷ ಹೇಗೆ ಕಟ್ಟುತ್ತೀರಿ. ಅವರಿಗೆ ಮಾರ್ಗದರ್ಶನ ಮಾಡಿ. ಸಂಘಟನೆಯಲ್ಲಿ ತೊಡಗಿಸಿ ಎಂದು ಅವರು ಮು ಖಂಡರಿಗೆ ಸೂಚನೆ ನೀಡಿದ್ದಾರೆ.