ಬೆಂಗಳೂರು, ಜೂ.14– ನೈರುತ್ಯ ಮುಂಗಾರು ಮಳೆ ಕರಾವಳಿ. ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಆರ್ಭಟಿಸುತ್ತಿದ್ದು, ಹಲವೆಡೆ ಭಾರಿ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಮಳೆ ಬಿದ್ದಿದ್ದು, ಇನ್ನೂ ಮೂರು ದಿನಗಳ ಕಾಲ ಇದೇ ರೀತಿ ಮಳೆ ಮುಂದುವರೆಯಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಿದ್ದು, ಮುನ್ನೆಚ್ಚರಿಕೆ ವಹಿಸಲು ಸಲಹೆ ಮಾಡಿದೆ.
ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಮಳೆಯ ಪ್ರಮಾಣ ಹೆಚ್ಚಾಗಿದೆ. ನಿನ್ನೆ ಆಗುಂಬೆಯಲ್ಲಿ 11 ಸೆಂ.ಮೀ.ನಷ್ಟು ಭಾರಿ ಮಳೆಯಾಗಿದೆ.ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ಮಾಹಿತಿ ಪ್ರಕಾರ ಮಂಗಳೂರಿನಲ್ಲಿ 9 ಸೆಂ.ಮೀ., ಉಡುಪಿ 8 ಸೆಂ.ಮೀ., ಉಪ್ಪಿನಂಗಡಿ, ಗೇರುಸೊಪ್ಪ,ಭಟ್ಕಳ, ಪಣಂಬೂರು, ಬಸವನ ಬಾಗೇವಾಡಿ, ಬೆಳ್ತಂಗಡಿಗಳಲ್ಲಿ ತಲಾ 7 ಸೆಂ.ಮೀ.. ಸಿದ್ದಾಪುರ, ಮಾಣಿ, ಕುಂದಾಪುರ, ಗೋಕರ್ಣ. ಪುತ್ತೂರುಗಳಲ್ಲಿ ತಲಾ 6 ಸೆಂ.ಮೀ.. ಕೋಟಾ. ಮೂಡುಬಿದರೆ, ಕಾರ್ಕಳದಲ್ಲಿ ತಲಾ 5 ಸೆಂ.ಮೀ.ನಷ್ಟು ಮಳೆಯಾಗಿದೆ.
ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.ಮೇಲ್ವೆ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ.
ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಆಗಾಗ್ಗೆ ತಂಪಾದ ಬಲವಾದ ಮೇಲೆ ಗಾಳಿ ಬೀಸಲಿದೆ. ಕೆಲವೆಡೆ ಆಗಾಗ್ಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.