Tuesday, June 3, 2025
Homeರಾಷ್ಟ್ರೀಯ | Nationalಈಶಾನ್ಯ ಭಾರತದಲ್ಲಿ ಭಾರೀ ಮಳೆ, 25 ಮಂದಿ ದುರ್ಮರಣ

ಈಶಾನ್ಯ ಭಾರತದಲ್ಲಿ ಭಾರೀ ಮಳೆ, 25 ಮಂದಿ ದುರ್ಮರಣ

Heavy rains in Northeast India, 25 people died

ನವದೆಹಲಿ,ಜೂ.1- ಈಶಾನ್ಯ ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಮತ್ತು ಪ್ರವಾಹ ಉಂಟಾಗಿ ಕನಿಷ್ಠ 25 ಜನರು ಸಾವನ್ನಪ್ಪಿ ಅನೇಕರು ನಿರಾಶ್ರಿತರಾಗಿದ್ದಾರೆ.

ಅಸ್ಸಾಂನ ರಾಜಧಾನಿ ಗುವಾಹಟಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಣ್ಣು ಕುಸಿತದಿಂದ ಹಲವಾರು ಮನೆಗಳು ಸಮಾಧಿಯಾಗಿವೆ. ಇದರಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಸೇರಿದಂತೆ ಐದು ಮಂದಿ ಸಾವನ್ನಪ್ಪಿದ್ದಾರೆ. ಇಳಿಜಾರುಗಳು ದುರ್ಬಲಗೊಂಡಿವೆ.ಗೋಲಾಘಾಟ್‌ನಲ್ಲಿ ಇಬ್ಬರು ಮತ್ತು ಲಖಿಂಪುರದಲ್ಲಿ ಒಬ್ಬರು ಸೇರಿದಂತೆ ಪ್ರವಾಹವು ಇನ್ನೂ ಮೂರು ಜೀವಗಳನ್ನು ಬಲಿ ತೆಗೆದುಕೊಂಡಿದೆ.

ಚೀನಾದೊಂದಿಗೆ ಗಡಿ ಹಂಚಿಕೊಂಡಿರುವ ನೆರೆಯ ಅರುಣಾಚಲ ಪ್ರದೇಶದಲ್ಲಿ, ಪ್ರವಾಹದ ನೀರಿನ ಹರಿವಿನಲ್ಲಿ ವಾಹನವೊಂದು ಕೊಚ್ಚಿಹೋಗಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ, ಇಬ್ಬರು ಮುಳುಗಿ ಸಾವನ್ನಪ್ಪಿದ್ದು, ರಾಜ್ಯದ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.ಕಳೆದ 24 ಗಂಟೆಗಳಲ್ಲಿ ಮಿಜೋರಾಂ, ತ್ರಿಪುರ ಮತ್ತು ಮೇಘಾಲಯದಲ್ಲಿ ಎಂಟು ಸಾವುಗಳು ವರದಿಯಾಗಿವೆ. ನಿರಂತರ ಮಳೆಯಿಂದ ಉಂಟಾದ ಹಠಾತ್‌ ಪ್ರವಾಹ ಮತ್ತು ಭೂಕುಸಿತಗಳಿಂದ ಸಾವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಣಿಪುರದಲ್ಲಿ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಾಜಧಾನಿ ಇಂಫಾಲದಲ್ಲಿ ದೈನಂದಿನ ಜೀವನ ಸ್ತಬ್ದಗೊಂಡಿದೆ. ಹಲವಾರು ಭಾಗಗಳಿಂದ ನೀರು ನಿಂತಿದ್ದು, ಪ್ರವಾಹದ ಸಾಧ್ಯತೆ ಎದುರಾಗಿದೆ. ಈ ಕುರಿತು ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಇಂಫಾಲ್‌ ನದಿಯ ಪ್ರವಾಹ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳನ್ನು ಸ್ಥಳಾಂತರಿಸುವಂತೆ ತಿಳಿಸಿದ್ದಾರೆ.

ನಿರಂತರ ಮಳೆಯಿಂದಾಗಿ ಉಂಟಾದ ಭೂಕುಸಿತದಿಂದಾಗಿ ಮುಖ್ಯ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ವಿವಿಧ ಭಾಗಗಳಲ್ಲಿ ಸುಮಾರು 1,500 ಪ್ರವಾಸಿಗರು ಸಿಲುಕಿಕೊಂಡಿದ್ದರು. ಈ ವಾರದ ಆರಂಭದಲ್ಲಿ ಮಂಗನ್‌ ಜಿಲ್ಲೆಯ ತೀಸ್ತಾ ನದಿಗೆ 11 ಪ್ರವಾಸಿಗರು ಪ್ರಯಾಣಿಸುತ್ತಿದ್ದ ವಾಹನವೊಂದು ಉರುಳಿಬಿದ್ದ ಪರಿಣಾಮ ಒಬ್ಬರು ಸಾವನ್ನಪ್ಪಿದರು, ಇಬ್ಬರು ಗಾಯಗೊಂಡರು ಮತ್ತು ಎಂಟು ಮಂದಿ ನಾಪತ್ತೆಯಾಗಿದ್ದಾರೆ.

ಏತನಧೆ ಭಾರತ ಹವಾಮಾನ ಇಲಾಖೆ (ಐಎಂಡಿ) ಮುಂಬರುವ ದಿನಗಳಲ್ಲಿ ಈ ಪ್ರದೇಶದಾದ್ಯಂತ ಭಾರೀ ಮಳೆಯಾಗುವ ಬಗ್ಗೆ ಎಚ್ಚರಿಕೆ ನೀಡಿದೆ. ಅಸ್ಸಾಂನ ಕೆಲವು ಭಾಗಗಳಿಗೆ ಕೆಂಪು ಮತ್ತು ಕಿತ್ತಳೆ ಎಚ್ಚರಿಕೆಗಳನ್ನು ನೀಡಲಾಗಿದೆ. ಈಶಾನ್ಯ ಪ್ರದೇಶದ ಉಳಿದ ಭಾಗಗಳಿಗೆ ಕಿತ್ತಳೆ ಮತ್ತು ಹಳದಿ ಎಚ್ಚರಿಕೆಗಳನ್ನು ನೀಡಲಾಗಿದೆ.

ಅಸ್ಸಾಂನಲ್ಲಿ ಒಟ್ಟು 17 ಜಿಲ್ಲೆಗಳು ಪ್ರವಾಹ ಮತ್ತು ಭೂಕುಸಿತದಿಂದ ತತ್ತರಿಸಿದ್ದು , 78,000ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ, 1,200ಕ್ಕೂ ಹೆಚ್ಚು ಜನರು ಐದು ವಿಭಿನ್ನ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಲಖಿಂಪುರವು ಅತ್ಯಂತ ಹೆಚ್ಚು ಹಾನಿಗೊಳಗಾದ ಜಿಲ್ಲೆಯಾಗಿದ್ದು, 41,600 ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ.

ಪ್ರವಾಹ ಪೀಡಿತ ಅಸ್ಸಾಂನಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗಿದ್ದು, ಎನ್‌ಡಿಆರೆಫ್‌, ಎಸ್‌‍ಡಿಆರೆಫ್‌, ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿವೆ. ಎರಡು ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳು ಮುಚ್ಚಿಹೋಗಿದ್ದು, ಭಾರೀ ಮಳೆ ಮತ್ತು ಬಿರುಗಾಳಿಯ ಕಾರಣ ಗುವಾಹಟಿ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ.

ಅರುಣಾಚಲ ಪ್ರದೇಶದಲ್ಲಿಯೂ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಆಡಳಿತ ಮತ್ತು ವಿಪತ್ತು ನಿರ್ವಹಣಾ ಇಲಾಖೆಯು ಹಾನಿಯ ಮೌಲ್ಯಮಾಪನಗಳನ್ನು ನಡೆಸುತ್ತಿದ್ದು, ಸಂತ್ರಸ್ತ ಕುಟುಂಬಗಳಿಗೆ ತಕ್ಷಣದ ನೆರವು ನೀಡುತ್ತಿದೆ.

RELATED ARTICLES

Latest News