ಕೊಡಗು/ದಕ್ಷಿಣ ಕನ್ನಡ,ಮೇ 26– ಮುಂದುವರೆದ ವರುಣನ ಆರ್ಭಟಕ್ಕೆ ಜನಜೀವನ ತತ್ತರಿಸಿದೆ. ಕೊಡಗು, ಮಲೆನಾಡು, ಕರಾವಳಿ ಒಳನಾಡು, ಉತ್ತರ ಕನ್ನಡದಲ್ಲಿ ಭಾರೀ ಮಳೆಯ ಆರ್ಭಟಕ್ಕೆ ಹಲವೆಡೆ ಗುಡ್ಡ ಕುಸಿತದಿಂದಾಗಿ ರಸ್ತೆ ಸಂಚಾರ ಸಂಪರ್ಕ ಕಡಿತಗೊಂಡಿದೆ. ನದಿಗಳು, ಹಳ್ಳ-ಕೊಳ್ಳಗಳು ಭರ್ತಿಯಾಗಿ ಹರಿಯತೊಡಗಿವೆ.’
ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಮತ್ತೆ ಕೆಲವೆಡೆ ಭೂಕೂಸಿತದ ಆತಂಕ ಎದುರಾಗಿದೆ. ಎಡಬಿಡದೆ ಮಳೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿಯಲ್ಲಿ ಮಳೆಯಿಂದ ಈವರೆಗೆ ಮೂವರು ಮೃತಪಟ್ಟಿರುವುದು ವರದಿಯಾಗಿದೆ.
ಆರಂಭದಲ್ಲೇ ಮುಂಗಾರು ಅಬ್ಬರಿಸುತ್ತಿದ್ದು, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜೀವಜೀವನ ಅಸ್ತವ್ಯಸ್ತಗೊಂಡಿದೆ.
ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಜಲಾಶಯಗಳಿಂದ ನದಿಗಳಿಗೆ ನೀರು ಬಿಡಲಾಗುತ್ತಿದೆ. ರಾಜ್ಯದ ಕೆಲವೆಡೆ ಜಿಟಿಜಿಟಿ ಮಳೆಯಾಗುತ್ತಿದ್ದರೆ, ಮತ್ತೆ ಕೆಲವೆಡೆ ಅಬ್ಬರದ ಮಳೆಯಾಗುತ್ತಿದೆ. ರಸ್ತೆಗಳು, ಸೇತುವೆಗಳು ಜಲಾವೃತಗೊಂಡಿವೆ. ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದೆ.
ಮೈಸೂರು ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ನಿನ್ನೆ ಮತ್ತು ಇಂದು ಸುರಿದ ಭಾರೀ ಮಳೆಗೆ ಹಲವು ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಚಾಮರಾಜನಗರ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಕಳೆದೆರಡು ದಿನಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕೂಟಹೊಳೆ ಸಂಪೂರ್ಣ ಭರ್ತಿಯಾಗಿ ಕೋಡಿ ಬಿದ್ದಿದೆ. ಹಲವು ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ.
ಮಡಿಕೇರಿ ತಾಲ್ಲೂಕಿನ ಬಲಮುರಿಯಲ್ಲಿರುವ ಕಿರು ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಸೋಮವಾರಪೇಟೆ ತಾಲ್ಲೂಕಿನ ಮಲ್ಲಳ್ಳಿ ಜಲಪಾತ ಧುಮುಕ್ಕಿ ಹರಿಯುತ್ತಿದೆ. ಹಾಸನ, ಮಂಗಳೂರು, ರಾಯಚೂರು, ಕೊಪ್ಪಳದಲ್ಲೂ ಭಾರೀ ಮಳೆ ಸುರಿಯುತ್ತಿದೆ.
ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪ ಮೂರು ಕಾರುಗಳು ಹೇಮಾವತಿ ಉಪನದಿಗೆ ಉರುಳಿಬಿದ್ದಿದ್ದವು. ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡದ ಪುತ್ತೂರಿನ ನಗರಸಭೆ ಆವರಣ ಗೋಡೆ ಕುಸಿದುಬಿದ್ದು, ಹಲವು ವಾಹನಗಳು ಜಖಂಗೊಂಡಿವೆ.
ಶಿವಮೊಗ್ಗದಲ್ಲಿ ಭಾರೀ ಮಳೆಯಾಗುತ್ತಿದ್ದು, ತುಂಗಾ ಜಲಾಶಯ ಭರ್ತಿಯಾಗಿದೆ. ನಿನ್ನೆ 5 ಕ್ರಶ್ಗೇಟ್ಗಳ ಮೂಲಕ 2,500 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ. ಇನ್ನೂ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಲಾಗಿದ್ದು, ಹಲವೆಡೆ ಕಟ್ಟೆಚ್ಚರ ವಹಿಸಲಾಗಿದೆ.
ಉತ್ತರ ಕನ್ನಡ, ಕಾರವಾರ, ಶಿರೂರು ಭಾಗದಲ್ಲಿ ಗುಡ್ಡ ಕುಸಿತದ ಆತಂಕ ಎದುರಾಗಿದೆ. ಗುಡ್ಡದ ಭಾಗದಲ್ಲಿ ಯಾವುದೇ ವಾಹನಗಳನ್ನು ನಿಲ್ಲಿಸದಂತೆ ಸೂಚನೆ ನೀಡಲಾಗಿದೆ. ಕಳೆದ ಬಾರಿ ಶಿರೂರು ಬಳಿ ಗುಡ್ಡ ಕುಸಿತ ಉಂಟಾಗಿ ಸಾವು-ನೋವು ಸಂಭವಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.ಕರಾವಳಿ ತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಜೋರಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರಲ್ಲಿ ಧರೆಗುರುಳಿದ ಬೃಹತ್ ಮರಗಳು
ನೆನ್ನೆ ಸುರಿದ ಸಣ್ಣ ಪ್ರಮಾಣದ ಮಳೆಗೂ ನಗರದಲ್ಲಿ ಹಲವಾರು ಬೃಹತ್ ಮರಗಳು ಧರೆಗುರುಳಿ ಬಿದ್ದಿರುವ ಘಟನೆಗಳು ನಡೆದಿದೆ.ಜಯನಗರದ 4 ಬ್ಲಾಕ್ ನಲ್ಲಿ ಬೃಹತ್ ಮರವೊಂದು ಏಕಾಏಕಿ ಧರೆಗುರುಳಿತ್ತು. ಈ ಸಂದರ್ಭದಲ್ಲಿ ರಸ್ತೆ ಬದಿ ಪಾರ್ಕ್ ಮಾಡಿದ್ದ 2 ಕಾರು, 2 ಬೈಕ್ ಜಖಂಗೊಂಡಿವೆ. ಅದೃಷ್ಟವಶಾತ್ ಸ್ಥಳದಲ್ಲಿ ಯಾವುದೇ ಅನಾಹುತವಾಗಿಲ್ಲ.
ಅದೇ ರೀತಿ ಸಂಜಯನಗರ ಮುಖ್ಯ ರಸ್ತೆಯಲ್ಲೂ ಬೃಹತ್ ಮರವೊಂದು ಮಧ್ಯ ರಾತ್ರಿ ಉರುಳಿಬಿದ್ದಿದೆ. ಮರ ಬಿದ್ದ ಪರಿಣಾಮ ಸಂಜಯನಗರ ಸುತ್ತಮುತ್ತ ಇಂದು ಮುಂಜಾನೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇನ್ನು ಹಲವು ಪ್ರದೇಶಗಳಲ್ಲೂ ಭಾರಿ ಪ್ರಮಾಣದ ಮರಗಳು ಉರುಳಿಬಿದ್ದಿರುವ ಘಟನೆಗಳು ನಡೆದಿದ್ದು, ಒಂದು ವೇಳೆ ಜನಸಂದಣಿ ಪ್ರದೇಶಗಳಲ್ಲಿರುವ ಮರಗಳು ಉರುಳಿಬಿದ್ದರೆ ಗತಿಯೇನೂ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.
ಗೋಡೆ ಕುಸಿದು ಮಗು ಸಾವು
ಎಡಬಿಡದೆ ಸುರದ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಮಹಲಿಂಗೇಶ್ವರ ಕಾಲೋನಿಯಲ್ಲಿ ಇಂದು ಮುಂಜಾನೆ ನಡೆದಿದೆ.ಕೀರ್ತಿ ನಾಗೇಶ್ ಪೂಜಾರಿ (3) ಎಂದು ಮೃತ ಮಗುವಾಗಿದೆ.
ಘಟನೆಯಲ್ಲಿ ನಾಲ್ಕು ವರ್ಷದ ಬಾಲಕಿ ಗಾಯಗೊಂಡಿದ್ದು,. ಅಕ್ಕ ತಂಗಿ ರೂಮ್ನಲ್ಲಿ ಮಲಗಿದ್ದ ವೇಳೆ ಗೋಡೆ ಕುಸಿದಿದೆ. ಘಟನೆಯ ವೇಳೆ ಮನೆಯ ಮತ್ತೊಂದು ರೂಮ್ನಲ್ಲಿ ಮಗುವಿನ ತಂದೆ ತಾಯಿ ಮಲಗಿದ್ದರು ಎಂದು ಪೋಲಿಸರು ತಿಳಿಸಿದ್ದಾರೆ.
ಗಾಯಗೊಂಡ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆನೀಡಲಾಗುತ್ತಿದೆ.ಮೃತ ಬಾಲಕಿಯ ಶವ ಗೋಕಾಕ್ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ . ಸ್ಥಳಕ್ಕೆ ಗೋಕಾಕ್ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ,ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.