ನವದೆಹಲಿ, ಸೆ 28- ಹಿಮಾಚಲ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹರ್ಷ್ ಮಹಾಜನ್ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಳೆದ ವರ್ಷ ನಿಧನರಾದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ನಿಕಟವರ್ತಿಯಾಗಿದ್ದ ಮಹಾಜನ್ ಮಾಜಿ ಸಚಿವರು ಆಗಿದ್ದಾರೆ.
ರಾಜ್ಯ ಕಾಂಗ್ರೆಸ್ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ದೆಹಲಿಯಲ್ಲಿರುವಂತೆ ಮಾ- ಬೇಟಾ ಹಿಡಿತ ಹೆಚ್ಚಾಗಿದೆ. ವಿರೋಧ ಪಕ್ಷವು ದೃಷ್ಟಿಹೀನ, ದಿಕ್ಕಿಲ್ಲದ ನಾಯಕತ್ವದ ಪಕ್ಷವಾಗಿದೆ ಎಂದು ಕಿಡಿಕಾರಿದ್ದಾರೆ.
ವೀರಭದ್ರ ಸಿಂಗ್ ಅವರ ಪತ್ನಿ ಪ್ರತಿಭಾ ಸಿಂಗ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಅವರ ಮಗ ವಿಕ್ರಮಾದಿತ್ಯ ಸಿಂಗ್ ಪಕ್ಷದ ಶಾಸಕರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ನಿಧನದ ನಂತರ ಕಾಂಗ್ರೆಸ್ನಲ್ಲಿ ಏನೂ ಉಳಿದಿಲ್ಲ ಎಂದು ಸುದ್ದಿಗಾರರೊಂದಿಗೆ ಅವರು ದೂರಿದರು. ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡ ಅವರು, ಸದೃಢ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಅಗತ್ಯ ಎಂದಿದ್ದಾರೆ.
ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳುವ ಮೂಲಕ ರಾಜ್ಯದಲ್ಲಿ ಹೊಸ ಇತಿಹಾಸವನ್ನು ಬರೆಯಲಿದೆ ಎಂದು ಗೋಯಲ್ ಇದೇ ಸಂದರ್ಭದಲ್ಲಿ ಹೇಳಿದರು. ಮಹಾಜನ್ ನಾಲ್ಕು ದಶಕಗಳಿಂದ ಕಾಂಗ್ರೆಸ್ನಲ್ಲಿದ್ದರು. ಹಲವು ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದರು. ಸ್ವಚ್ಚ ವರ್ಚಸ್ಸು ಉಳಿಸಿಕೊಂಡಿದ್ದಾರೆ ಎಂದು ಪಿಯೂಷ್ ಹೇಳಿದ್ದಾರೆ.