ಬೆಂಗಳೂರು, ಆ.23- ಕೊಡಗಿನಲ್ಲಿ ಶೀಘ್ರದಲ್ಲೇ ಶಾಂತಿಸಭೆ ನಡೆಸಲು ಜೆಡಿಎಸ್ ನಿರ್ಧರಿಸಿದೆ. ಜೆಪಿ ಭವನದಲ್ಲಿಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ನೇತೃತ್ವದಲ್ಲಿ ನಡೆದ ಕೊಡಗು ಜಿಲ್ಲಾ ಜೆಡಿಎಸ್ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಕಾಂಗ್ರೆಸ್ ಮತ್ತು ಬಿಜೆಪಿಯ ರಾಜಕೀಯಕ್ಕೆ ಅಶಾಂತಿ ಉಂಟಾಗಬಾರದು, ರಾಜ ಕಾರಣ ದಿಂದ ಜನರ ಜೀವನಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಶಾಂತಿ ಸಭೆ ನಡೆಸಲಾಗುತ್ತಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣದ ಬಳಿಕ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಪರಸ್ಪರ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿವೆ.
ಸಾವರ್ಕರ್ ವಿಚಾರ ಮುಂದಿಟ್ಟು ಕೊಂಡು ಉಭಯ ಪಕ್ಷಗಳ ನಾಯಕರು ಪರಸ್ಪರ ಆರೋಪದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಕೊಡಗು ಚಲೋ ಪ್ರತಿಭಟನೆಗೆ ಮುಂದಾಗಿದೆ. ಈ ನಡುವೆ ಯಾವುದೇ ಪ್ರತಿಭಟನೆ ನಡೆಸದಂತೆ ನಿಷೇಧಾಜ್ಞಾ ವಿಧಿಸಲಾಗಿದೆ.
ಕೊಡಗಿನ ಜೆಡಿಎಸ್ ಅಧ್ಯಕ್ಷ ಗಣೇಶ್, ಹಲವು ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.