ಬೆಂಗಳೂರು, ಜು.27- ಕನ್ನಡಿಗರಿಗೇ ಹೆಚ್ಚಿನ ಉದ್ಯೋಗ ದಕ್ಕಿಸಲು ಕರ್ನಾಟಕ ಉದ್ಯೋಗ ನೀತಿ 2022-25ಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿರುವ ಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತಿಸಿದೆ. ಖಾಸಗಿ ವಲಯಗಳಲ್ಲೂ ಕನ್ನಡಿಗರಿಗೆ ಕೆಲಸದ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕನ್ನಡಿಗರ ಬಹುದಿನದ ಬೇಡಿಕೆಗೆ ಸರಕಾರ ಸ್ಪಂದಿಸಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ ಹೇಳಿದ್ದಾರೆ.
ನಮ್ಮ ನಾಡಿನಲ್ಲಿ ನಮ್ಮವರೇ ನಿರುದ್ಯೋಗದ ಪಿಡುಗಿನಲ್ಲಿ ಸಿಲುಕಿಕೊಂಡಿದ್ದಾರೆ. ಸರ್ಕಾರ ಖಾಸಗಿ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕನ್ನಡಿಗರಿಗೆ ಅವಕಾಶ ನೀಡಬೇಕು ಎನ್ನುವ ಕುರಿತು ಬಹುಸಮಯದಿಂದ ಕನ್ನಡ ಸಾಹಿತ್ಯ ಪರಿಷತ್ತು ಒತ್ತಾಯಿಸುತ್ತಲೇ ಬಂದಿತ್ತು.
ಕಾಲಕಾಲಕ್ಕೆ ಕನ್ನಡಿಗರ ಅಭ್ಯುದಯಕ್ಕೆ ಧ್ವನಿ ಮಾಡುತ್ತಿದ್ದ ಪರಿಷತ್, ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸಾಕಷ್ಟು ಚಿಂತನ-ಮಂಥನ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಇದರೊಂದಿಗೆ ಸರ್ಕಾರಕ್ಕೆ ಕನ್ನಡಿಗರಿಗೆ ಕೆಲಸದ ಅವಶ್ಯಕತೆ ಕುರಿತು ಮನದಟ್ಟು ಮಾಡುವ ಹಿನ್ನೆಲೆಯಲ್ಲಿಯೂ ಪರಿಷತ್ತು ತೊಡಗಿಸಿಕೊಂಡಿತ್ತು.
ಸದ್ಯ ರಾಜ್ಯ ಸರ್ಕಾರ ಕಳೆದ ಸಂಪುಟ ಸಭೆಯಲ್ಲಿ ರಾಜ್ಯ ಉದ್ಯೋಗ ನೀತಿ-2022-25ಕ್ಕೆ ಒಪ್ಪಿಗೆ ನೀಡಿರುವುದು ಕನ್ನಡಿಗರ ಪಾಲಿಗೆ ಆಶಾಕಿರಣ ಸಿಕ್ಕಂತಾಗಿದೆ. ಎಲ್ಲಾ ಉದ್ಯಮಗಳಲ್ಲಿ ಬಂಡವಾಳ ಹೂಡಿಕೆ ಮಾಡಿ ಉದ್ಯಮಗಳನ್ನು ವಿಸ್ತರಿಸುವ ಸಂದರ್ಭದಲ್ಲಿ ಹೆಚ್ಚುವರಿಯಾಗಿ ಶೇ.2.5 ರಿಂದ ಶೆ.3ರಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.
ಬಂಡವಾಳದ ಹೂಡಿಕೆಯನ್ನು ಆಧರಿಸಿ ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳು ಎಂದು ವರ್ಗೀಕರಿಸಲಾಗಿದೆ. ಇವುಗಳಲ್ಲಿ ಶೇ.3ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಅಥವಾ ಸ್ಥಳೀಯರಿಗೆ ಕೆಲಸ ನೀಡಬೇಕು ಎನ್ನುವುದನ್ನು ಕಡ್ಡಾಯ ಮಾಡಲಾಗಿದೆ.
ಆ ಪೈಕಿ ಕನ್ನಡಿಗರಿಗೆ ಪ್ರಾಧಾನ್ಯ ನೀಡಬೇಕು ಎಂಬ ಸರ್ಕಾರದ ನಿರ್ಧಾರ ಅಭಿನಂದನೀಯ. ಇನ್ನೂ ಹೆಚ್ಚು ಹೆಚ್ಚು ಉದ್ಯೋಗ ಸೃಷ್ಟಿಸಲು ಕೈಗಾರಿಕೆಗಳಿಗೆ ಹೆಚ್ಚುವರಿ ಪ್ರೋತ್ಸಾಹಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜವಳಿ, ಆಟಿಕೆ ತಯಾರಿಕೆ, ಎಫ್ಎಂಸಿಜಿ, ಚರ್ಮ ಉತ್ಪನ್ನಗಳು, ಆಹಾರ ಸಂಸ್ಕರಣೆ ಹಾಗೂ ಆಭರಣ ಕ್ಷೇತ್ರಗಳಿಗೆ ಒತ್ತು ನೀಡುವ ನಿರ್ಧಾರ, ಉದ್ಯೋಗಕ್ಕಾಗಿ ನಿರಂತರ ಬೇಡಿಕೆ ಮತ್ತು ರಾಜ್ಯದಲ್ಲಿ ನುರಿತ ಕಾರ್ಮಿಕರ ಲಭ್ಯತೆ ಖಚಿತಪಡಿಸಿಕೊಂಡು ಮೊದಲು ನಮ್ಮ ಕನ್ನಡಿಗರಿಗೆ ಆದ್ಯತೆ ನೀಡುವ ಕ್ರಮ ಆಗಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಹಿಂದೆ ಸಿ ಮತ್ತು ಡಿ ದರ್ಜೆಯ ನೌಕರರನ್ನು ಮಾತ್ರ ಕನ್ನಡಿಗರಿಗೆ ಆಯ್ಕೆ ಮಾಡಲಾಗುತ್ತಿತ್ತು. ಆದರೆ ಇನ್ನು ಮುಂದೆ ಎ ಮತ್ತು ಬಿ ದರ್ಜೆಯ ಉದ್ಯೋಗ ಕನ್ನಡಿಗರಿಗೆ ನೀಡುವುದು ಕಡ್ಡಾಯ ಎನ್ನುವ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು.
ಇದನ್ನು ಸರ್ಕಾರವೇ ಪಾಲನೆ ಮಾಡಲಿದೆ.
ಅಲ್ಟ್ರಾ ಮೆಗಾ ಉದ್ಯಮದಲ್ಲಿ ಕನಿಷ್ಠ ಉದ್ಯೋಗ ಮಿತಿಯನ್ನು 400 ರಿಂದ 510ಕ್ಕೆ ಹೆಚ್ಚಿಸಿದ್ದು, ಪ್ರತಿ 50 ಕೋಟಿ ರೂ. ಹೂಡಿಕೆ ಮಾಡಿದರೆ 50 ಉದ್ಯೋಗ ಸೃಷ್ಟಿಯಾಗಬೇಕು. ಸೂಪರ್ ಮೆಗಾ ಉದ್ಯಮದಲ್ಲಿ ಕನಿಷ್ಠ ಉದ್ಯೋಗಮಿತಿಯನ್ನು 750 ರಿಂದ 1000ಕ್ಕೆ ಏರಿಸಲಾಗಿದೆ. ಈ ಹೆಚ್ಚುವರಿ ಉದ್ಯೋಗಾವಕಾಶವನ್ನು ಕನ್ನಡಿಗರಿಗೆ ನೀಡಬೇಕು ಎನ್ನುವ ದೃಷ್ಟಿಯಿಂದ ಯೋಜನೆ ರೂಪಿಸಿದ್ದು ಉತ್ತಮ ಬೆಳವಣಿಗೆಯಾಗಿದೆ.
ಮೈಸೂರು ವಿಮಾನ ನಿಲ್ದಾಣಕ್ಕೆ ಕನ್ನಡ ನಾಡಿನ ಜನಾನುರಾಗಿ ದೊರೆ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರಿಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಕನ್ನಡಿಗರ ಅಸ್ಮಿತೆಯ ಪ್ರತೀಕವಾಗಿರುವ ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸುವ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ಹಾಗೂ ಕನ್ನಡ ನಾಡಿಗೆ ಅಪಾರ ಕೊಡುಗೆ ನೀಡಿದ ಮಹಾನ್ ಚೇತನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಅಂತಹ ಮಹಾನುಭಾವರ ಹೆಸರು ಮೈಸೂರು ವಿಮಾನ ನಿಲ್ದಾಣಕ್ಕೆ ಶೋಭೆ ತರುವ ಸಂಗತಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.