ಬೆಂಗಳೂರು,ಜೂ.16- ರಾಜ್ಯದ ವಿವಿಧೆಡೆ ವರುಣನ ಆರ್ಭಟ ಮುಂದುವರೆದಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಚಿಕ್ಕಮಗಳೂರು, ಮಡಿಕೇರಿ, ಮಂಗೂಳೂರು, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆ ನಿರಂತರವಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭೂ ಕುಸಿತ ಉಂಟಾಗಿ ಹಲವೆಡೆ ಸಂಪರ್ಕ ಕಡಿತಗೊಂಡಿದೆ. ಹಳ್ಳಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಭಟ್ಕಳ ತಾಲ್ಲೂಕಿನ ಜಾಲಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಮಗು ಹಳ್ಳಕ್ಕೆ ಬಿದ್ದು ಮೃತಪಟ್ಟಿದೆ. ಅದೇ ರೀತಿ ತಾಲ್ಲೂಕಿನ ಬೆಳಲತಂಡದ ಮಾದೇವ ನಾರಾಯಣ ಎಂಬ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಉಡುಪಿ ಜಿಲ್ಲೆಯ ಉದ್ಯಾವರ ನಿವಾಸಿ ರೊನಾಲ್್ಡ ಫರ್ನಾಂಡೀಶ್ ಗುಂಡಿಗೆ ಬಿದ್ದು ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ದೇವಿಮನೆ ಬಳಿ ಭೂ ಕುಸಿತ ಉಂಟಾಗಿ ಸಂಚಾರ ಅಸ್ತವ್ಯಸ್ತಗೊಂಡು ಸವಾರರು ಪರದಾಡುವಂತಾಯಿತು.
ಕಾಫಿನಾಡು ಚಿಕ್ಕಮಗಳೂರಿನಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು, ಶೃಂಗೇರಿಯ ಸಾಲುಮರದಲ್ಲಿ ಗುಡ್ಡ ಕುಸಿತವಾಗಿ ಮಂಗಳೂರು-ಶಂಗೇರಿ ಮಾರ್ಗ ಬಂದ್ ಆಗಿದೆ. ಮಂಗಳೂರಿನ ಹೊರವಲಯದ ವಾಮಂಜೂರಿನ ಕೆತಿಕಲ್ನಲ್ಲಿ ಗುಡ್ಡ ಕುಸಿದಿದೆ. ಧರ್ಮಸ್ಥಳದ ನೇತ್ರಾವತಿ ಸ್ಥಾನಘಟ್ಟದಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಕುಕ್ಕೆ ಸುಬ್ರಹಣ್ಯದ ಕುಮಾರದ್ವಾರ ನದಿ ಉಕ್ಕಿ ಹರಿಯುತ್ತಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ಬಳಿ ಸೇತುವೆ ಕುಸಿತಗೊಂಡಿದ್ದು, ಬೆಳಗಾವಿ-ಗೋವಾ ಸಂಪರ್ಕ ಕಡಿತಗೊಂಡಿದೆ.
ಎಲ್ಲೆಲ್ಲಿ ರಜೆ?:
ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜ್ ತಿಳಿಸಿದ್ದಾರೆ. ಮಂಗಳೂರಿನ ಉಲ್ಲಾಳ, ಭಂಟ್ವಾಳ, ಮುಲ್ಕಿ, ಮೂಡಿಬಿದರೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಲೈಮುಗಿಲನ್ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ಸಹ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ರಜೆ ಘೋಷಿಸಲಾಗಿದೆ.
ರೆಡ್ ಅಲರ್ಟ್:
ಕರಾವಳಿ ಭಾಗದ ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳಿಗೆ ಇಂದಿನಿಂದ 18ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡುಗು, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದರೆ ತುಮಕೂರು, ಶಿವಮೊಗ್ಗ , ವಿಜಯನಗರ, ಬಳ್ಳಾರಿ, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾ ಇಲಾಖೆ ಮುನ್ಸೂಚನೆ ನೀಡಿದೆ.