Wednesday, April 16, 2025
Homeರಾಜ್ಯಲಾರಿ ಮುಷ್ಕರ : ಸರಕು ಸಾಗಾಣಿಕೆ ಅಸ್ತವ್ಯಸ್ಥ, ಬೆಲೆ ಏರಿಕೆ ಭೀತಿ

ಲಾರಿ ಮುಷ್ಕರ : ಸರಕು ಸಾಗಾಣಿಕೆ ಅಸ್ತವ್ಯಸ್ಥ, ಬೆಲೆ ಏರಿಕೆ ಭೀತಿ

ಬೆಂಗಳೂರು, ಏ.15- ರಾಜ್ಯದಲ್ಲಿ ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ, ಟ್ರಕ್ ಹಾಗೂ ಗೂಡ್ಸ್ ವಾಹನಗಳು ನಿನ್ನೆ ಮಧ್ಯರಾತ್ರಿಯಿಂದಲೇ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಿರುವುದರಿಂದ ಸರಕು ಸಾಗಾಣಿಕೆಯಲ್ಲಿ ವ್ಯತ್ಯಯವಾಗಿದೆ.

ರಾಜ್ಯಾದ್ಯಂತ ಸರಕು ಸಾಗಾಣಿಕೆ ವಾಹನಗಳ ಸಂಚಾರ ಸ್ಥಗಿತಗೊಂಡಿರುವುದರಿಂದ ಹೊರರಾಜ್ಯಗಳಿಂದ ಯಾವುದೇ ರೀತಿಯ ಸರಕು ಸಾಗಾಣಿಕೆಯ ಲಾರಿಗಳು ಕರ್ನಾಟಕಕ್ಕೆ ಆಗಮಿಸುತ್ತಿಲ್ಲ.

ನಿರಂತರ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನಸಾಮಾನ್ಯರಿಗೆ ಲಾರಿ ಮುಷ್ಕರದಿಂದ ಉಂಟಾಗಿರುವ ಸರಕು ಸಾಗಾಣಿಕೆ ವ್ಯತ್ಯಯದಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಜಲ್ಲಿ, ಮರಳು, ಕಲ್ಲು, ಸಿಮೆಂಟು, ಕಬ್ಬಿಣ ಮತ್ತಿತರೆ ವಸ್ತುಗಳ ಸಾಗಾಟ ಸ್ಥಗಿತಗೊಂಡಿದೆ. ಹಾಲು, ಔಷಧಿ, ತರಕಾರಿ ಹೊರತುಪಡಿಸಿ ಎಲ್ಲಾ ವಸ್ತುಗಳ ಸಾಗಾಟ ನಿಂತುಹೋಗಿದೆ. ಮಾರುಕಟ್ಟೆ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಎಲ್ಲೆಡೆ ಲಾರಿಗಳು, ಗೂಡ್ಸ್ ವಾಹನಗಳು ನಿಂತಲ್ಲೇ ನಿಂತಿವೆ.

ಮುಷ್ಕರಕ್ಕೆ ಸುಮಾರು 69 ಸಂಘಟನೆಗಳು ಬೆಂಬಲ ನೀಡಿದ್ದು 6 ಲಕ್ಷ ಲಾರಿಗಳು ಸಂಚಾರ ಸ್ತಬ್ದಗೊಳಿಸಿವೆ ಎಂದು ಲಾರಿ ಮಾಲೀಕರ ಹಾಗೂ ಏಜೆಂಟರ ಸಂಘದ ಅಧ್ಯಕ್ಷ ಜಿ.ಆ‌ರ್.ಷಣ್ಮುಗಪ್ಪ ತಿಳಿಸಿದ್ದಾರೆ.

ಡೀಸೆಲ್ ಮೇಲೆ ಹೆಚ್ಚು ತೆರಿಗೆ ವಿಧಿಸಿದ್ದರಿಂದ ನಮ್ಮ ಉದ್ಯಮ ತೀವ್ರ ಸಂಕಷ್ಟಕ್ಕೆ ಈಡಾಗಿದೆ. ಕೂಡಲೇ ಡೀಸೆಲ್ ದರ ಇಳಿಸಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು, ಟೋಲ್‌ಗಳಲ್ಲಿ ಪೊಲೀಸರು ಲಾರಿ ಚಾಲಕರಿಗೆ ನೀಡುವ ಕಿರುಕುಳ ತಪ್ಪಿಸಬೇಕು, ವಾಹನ ವಿಮೆಯ ದರ ಕಡಿತಗೊಳಿಸುವುದು, ಎಫ್‌ಸಿ ದರ ಕಡಿಮೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತಾದರೂ ಸರ್ಕಾರ ನಮ್ಮ ಮನವಿಯನ್ನು ಪರಿಗಣಿಸಿಲ್ಲ. ಹೀಗಾಗಿ ಅನಿವಾರ್ಯವಾಗಿ ನಾವು ಮುಷ್ಕರಕ್ಕೆ ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.

ಮುಷ್ಕರದ ಹಿನ್ನೆಲೆಯಲ್ಲಿ ಬೆಂಗಳೂರಿನ ಯಶವಂತಪುರ ಎಪಿಎಂಸಿ ಸೇರಿದಂತೆ ರಾಜ್ಯದ ಹಲವೆಡೆ ಟ್ರಕ್ ನಿಲ್ದಾಣಗಳಲ್ಲಿ ವಾಹನಗಳು ನಿಂತಿವೆ. ಕೆಲವು ಸರಕು ಸಾಗಾಣಿಕೆ ಲಾರಿ ನಿಲ್ದಾಣಗಳು ಬಿಕೋ ಎನ್ನುತ್ತಿವೆ. ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮೈಸೂರು, ದಾವಣಗೆರೆ ಸೇರಿದಂತೆ ಪ್ರಮುಖ ನಗರಗಳಲ್ಲಿ ಸರಕು ಸಾಗಣೆ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದಾಗಿ ವ್ಯಾಪಾರ ವಹಿವಾಟಿನ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದ್ದು, ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು ಮತ್ತಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.

ನಿನ್ನೆ ರಾತ್ರಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರೊಂದಿಗೆ ಮಾತುಕತೆ ನಡೆಸಿ ಮುಷ್ಕರ ಕೈಬಿಡುವಂತೆ ಮನವಿ ಮಾಡಿದ್ದರಾದರೂ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಷ್ಕರ ಹಿಂಪಡೆಯುವುದಿಲ್ಲ ಎಂದು ಸಂಘದ ಪದಾಧಿಕಾರಿಗಳು ಕಡ್ಡಿ ಮುರಿದಂತೆ ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಮುಷ್ಕರ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕು. ಅಗತ್ಯವಸ್ತುಗಳ ಪೂರೈಕೆಯಲ್ಲಿ ಸಾಕಷ್ಟು ವ್ಯತ್ಯಯ ಉಂಟಾಗುವುದರಿಂದ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

RELATED ARTICLES

Latest News