Thursday, May 2, 2024
Homeಜಿಲ್ಲಾ ಸುದ್ದಿಗಳುಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸುವ ನಾಟಕವಾಡಿದ್ದ ಪತಿ ಅರೆಸ್ಟ್

ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸುವ ನಾಟಕವಾಡಿದ್ದ ಪತಿ ಅರೆಸ್ಟ್

ಹಾಸನ,ಮಾ.20- ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿ ನಾಟಕವಾಡಿದ್ದ ಪತಿ ಪೊಲೀಸರ ಅತಿಥಿಯಾಗಿದ್ದಾನೆ. ಮಾ.14 ರಂದು ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಗೊಲ್ಲರಟ್ಟಿ ಗ್ರಾಮದ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಚೈತ್ರಳ ಶವ ಪತ್ತೆಯಾಗಿತ್ತು.

ಮದ್ಯವ್ಯಸನಿಯಾಗಿದ್ದ ಚೈತ್ರಳ ಪತಿ ಶಂಕರಲಿಂಗಪ್ಪ ಸಾಲ ಮಾಡಿಕೊಂಡಿದ್ದು, ಈ ವಿಚಾರವಾಗಿ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಇದರಿಂದ ಮನನೊಂದು ಚೈತ್ರ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೋಷಕರು ಅನುಮಾನ ವ್ಯಕ್ತಪಡಿಸಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಅಸ್ವಾಭಾವಿಕ ಪ್ರಕರಣದಡಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಚೈತ್ರಳ ಮರಣೋತ್ತರ ಪರೀಕ್ಷೆ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಶಂಕರಲಿಂಗಪ್ಪನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ. 12 ವರ್ಷಗಳ ಹಿಂದೆ ಮದುವೆಯಾಗಿದ್ದ ಶಂಕರಲಿಂಗಪ್ಪ ಮಾ.14 ರ ಸಂಜೆ ಕಂಠಪೂರ್ತಿ ಕುಡಿದು ಬಂದು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಪತ್ನಿಗೆ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ಸೀರೆಯಿಂದ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಿ ನಾಟಕವಾಡಿದ್ದ.

ಆದರೆ ಮರಣೋತ್ತರ ಪರೀಕ್ಷೆಯಿಂದ ಕೊಲೆ ರಹಸ್ಯ ಬಯಲಾಗಿದ್ದು, ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರು ಶಂಕರಲಿಂಗಪ್ಪನನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News