ಬೆಂಗಳೂರು, ಜ.27- ಮುಸ್ಲಿಂ ಸಮುದಾಯ 2018ರಲ್ಲೂ ಕಾಂಗ್ರೆಸ್ ಜೊತೆಗಿತ್ತು, ಮುಂದೆಯೂ ಇರಲಿದೆ. ಅಲ್ಪಸಂಖ್ಯಾತ ನಾಯಕರಿಗೆ ಪಕ್ಷದಲ್ಲಿ ಸಾಕಷ್ಟು ಸ್ಥಾನ ನೀಡಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ತೊರೆಯುವುದಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.
ಪಕ್ಷ ತಮಗೆ ಜವಾಬ್ದಾರಿ ನೀಡಿದೆ. ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಎಲ್ಲಾ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಟ್ಟಾಗಿ ಕೆಲಸ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಅಕಾರಕ್ಕೆ ತರಲು ಪ್ರಯತ್ನಿಸುತ್ತೇವೆ ಎಂದರು.
ಸಿ.ಎಂ.ಇಬ್ರಾಹಿಂ ಅವರು ಪಕ್ಷ ತೊರೆಯುತ್ತಿರುವ ಬಗ್ಗೆ ಹೇಳಿಕೆ ನೀಡಲು ನಾನೀನ್ನು ಚಿಕ್ಕವನು. ಪಕ್ಷದ ಹೈಕಮಾಂಡ್ ನಿರ್ಧಾರದ ಬಗ್ಗೆ ನಾನು ಮಾತನಾಡುವುದಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಕುರಿತು ಹೇಳಿಕೆ ನೀಡುತ್ತಾರೆ ಎಂದು ಅವರು ಹೇಳಿದರು.
ರಾಜ್ಯದ ಜನ ಪ್ರಭುದ್ಧರಿದ್ದಾರೆ, ಮುಸ್ಲಿಂ ಸಮುದಾಯ ಮೊದಲಿನಿಂದಲೂ ನಮ್ಮ ಜೊತೆಗಿದೆ. ಈಗಲೂ ನಮ್ಮೊಂದಿಗೆ ಅಲ್ಪಸಂಖ್ಯಾತರಿದ್ದಾರೆ. ಪಕ್ಷದಲ್ಲಿ ಯು.ಟಿ.ಖಾದರ್, ಜಮೀರ್ ಅಹಮ್ಮದ್ ಖಾನ್ ಸೇರಿದಂತೆ ಹಲವು ನಾಯಕರಿದ್ದಾರೆ. ಅವರಿಗೆಲ್ಲಾ ಸೂಕ್ತ ಸ್ಥಾನ ನೀಡಲಾಗಿದೆ ಎಂದು ಪ್ರತಿಕ್ರಿಯಿಸಿದರು.
