ಬೆಂಗಳೂರು,ಆ.17- ತಮ್ಮ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಎರಡನೆ ದಿನಕ್ಕೆ ಕಾಲಿಟ್ಟಿದೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿರುವ ಸಾವಿರಾರು ಕಾರ್ಯಕರ್ತೆಯರು ನಿನ್ನೆಯಿಂದ ನಗರದ ಫ್ರೀಡಂ ಪಾರ್ಕ್ನಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿದ್ದರೂ ಪ್ರತಿಭಟನಾ ಸ್ಥಳಕ್ಕೆ ಸರ್ಕಾರದ ಯಾವೊಬ್ಬ ಪ್ರತಿನಿಧಿಯೂ ಧಾವಿಸದಿರುವುದು ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ.
ನಿನ್ನೆಯಿಂದ ನಾವು ಹೋರಾಟ ನಡೆಸುತ್ತಿದ್ದರೂ ನಮ್ಮತ್ತ ತಿರುಗಿ ನೋಡದ ಸಚಿವರು ಹಾಗೂ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗುತ್ತ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 6500 ಕಾರ್ಯಕರ್ತೆಯರನ್ನು ಕೆಲಸ ದಿಂದ ವಜಾಗೊಳಿಸಿರುವ ಕ್ರಮ ಹಾಗೂ ನಿವೃತ್ತರಿಗೆ ಪಿಂಚಣಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸ್ಥಳಕ್ಕೆ ಸಚಿವರಾಗಲಿ, ಅಧಿಕಾರಿಗಳಾಗಲಿ ಬಾರದಿರುವುದರಿಂದ ಹೋರಾಟ ತೀವ್ರಗೊಳಿಸಲು ಬಿಸಿಯೂಟ ಕಾರ್ಯಕರ್ತೆಯರು ತೀರ್ಮಾನಿಸಿದ್ದಾರೆ.
65 ವರ್ಷ ತುಂಬಿರುವ ಬಿಸಿಯೂಟ ಕಾರ್ಯಕರ್ತೆಯರನ್ನು ಏಕಾಏಕಿ ಕೆಲಸದಿಂದ ವಜಾ ಮಾಡಲಾಗಿದೆ. ಇದರ ಜತೆಗೆ ಅವರಿಗೆ ನೀಡಬೇಕಾದ ಯಾವುದೇ ಸವಲತ್ತುಗಳನ್ನು ನೀಡದೆ ವಂಚಿಸಲಾಗಿದೆ.
ಬಿಸಿಯೂಟ ಕಾರ್ಯಕರ್ತೆಯರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ನಾವು ಎಷ್ಟೇ ಮನವಿ ಮಾಡಿಕೊಂಡರೂ ಸರ್ಕಾರ ಕಿವಿಮೇಲೇ ಹಾಕಿಕೊಳ್ಳುತ್ತಿಲ್ಲ. ಹೀಗಾಗಿ ಪ್ರತಿಭಟನೆ ಹಾದಿ ಹಿಡಿದಿದ್ದೇವೆ ಎಂದು ಬಿಸಿಯೂಟ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಬೇಡಿಕೆ ಈಡೇರುವವರೆಗೆ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿರುವುದರಿಂದ ರಾಜ್ಯದ ಸುಮಾರು 50 ಲಕ್ಷ ಶಾಲಾ ಮಕ್ಕಳು ಬಿಸಿಯೂಟ ಯೋಜನೆಯಿಂದ ವಂಚಿತರಾಗಿದ್ದಾರೆ.