Sunday, October 6, 2024
Homeರಾಜಕೀಯ | Politicsಸಿಎಂ ರಾಜಿನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರಿಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಸಿಎಂ ರಾಜಿನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರಿಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

Minister Madhu Bangarappa hits back at BJP leaders who are demanding CM's resignation

ಮೈಸೂರು,ಅ.6- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಬಾಯಿ ಬಡಿದುಕೊಳ್ಳುತ್ತಿರುವ ಬಿಜೆಪಿ ಪಕ್ಷದ ಹಲವು ನಾಯಕರ ಮೇಲೆ ಪ್ರಕರಣಗಳಿವೆ, ಅವರು ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಅವರ ಟೀಕೆಗಳಿಗೆ ಉತ್ತರಿಸುವ ಅಗತ್ಯವೇ ಇಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಎಂದು ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ದ್ವೇಷಕ್ಕಾಗಿ 12 ವರ್ಷಗಳ ಪ್ರಕರಣವನ್ನು ಮುನ್ನೆಲೆಗೆ ತಂದು ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಕಿಡಿಕಾರಿದರು.
ಪ್ರಜಾಪ್ರಭುತ್ವದ ಮಾರ್ಗದಲ್ಲಿ 136 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಿರುವ ಕಾಂಗ್ರೆಸ್‌‍ ಅನ್ನು ನೋಡಿ ಬಿಜೆಪಿಯಿಂದ ಸಹಿಸಲಾಗುತ್ತಿಲ್ಲ. ಅವರು ಎಂದೂ ನೇರವಾಗಿ ಚುನಾಯಿತರಾಗಿ ಸರ್ಕಾರ ರಚಿಸಿಲ್ಲ. ವಾಮಮಾರ್ಗದ ಮೂಲಕವೇ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಜಾಪ್ರಭುತ್ವದ ಅರ್ಥವೇ ಗೊತ್ತಿಲ್ಲದ ಬಿಜೆಪಿಗೆ ಉತ್ತರ ನೀಡುವ ಅಗತ್ಯವಿಲ್ಲ ಎಂದರು.

12 ವರ್ಷಗಳಲ್ಲಿ ಯಡಿಯೂರಪ್ಪನವರು ಸೇರಿದಂತೆ ಹಲವರು ಮುಖ್ಯಮಂತ್ರಿಯಾಗಿದ್ದರು. ಆಗೆಲ್ಲಾ ಮುಡಾ ಹಗರಣಗಳ ಬಗ್ಗೆ ಏಕೆ ಮಾತನಾಡಲಿಲ್ಲ. ಯಡಿಯೂರಪ್ಪ ಅವರು ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಗೆ ಬಂದ ಮೇಲೆ ಬಿಜೆಪಿಯವರು ಮತ್ತೆ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಇಂತವರು ಕಾಂಗ್ರೆಸ್‌‍ ಪಕ್ಷದ ಬಗ್ಗೆ ಟೀಕೆ ಮಾಡುತ್ತಾರೆ.

ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಪ್ರಕರಣ ದಾಖಲಾದ ತಕ್ಷಣ ರಾಜೀನೆಮ ನೀಡಬೇಕು ಎಂದು ಯಾವ ಕಾನೂನಲ್ಲಿದೆ. ಸಿದ್ದರಾಮಯ್ಯ ನೆಲದ ಕಾನೂನನ್ನು ಪಾಲನೆ ಮಾಡುತ್ತಿದ್ದಾರೆ. ಬಿಜೆಪಿಗೆ ಇದೇ ಉತ್ತರ. ಮಿಕ್ಕ ವಿಚಾರಗಳನ್ನು ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.

ಯಾರೇ ತಪ್ಪು ಮಾಡಿರಲಿ, ಹಗರಣ ಮಾಡಿರಲಿ, ಕ್ರಮ ಕೈಗೊಳ್ಳುವುದು ಸರ್ಕಾರದ ಕರ್ತವ್ಯ. ಆದರೆ ಸಿದ್ದರಾಮಯ್ಯನವರ ಪ್ರಕರಣದಲ್ಲಿ ಲೋಪವೇ ಆಗಿಲ್ಲ. ಮುಡಾ ಪ್ರಕರಣದಲ್ಲಿ ಈಗಷ್ಟೇ ಎಫ್‌ಐಆರ್‌ ದಾಖಲಾಗಿದೆ. ಇನ್ನು ತನಿಖೆಯ ವರದಿ ಬಂದಿಲ್ಲ. ಒಂದು ವೇಳೆ ವರದಿ ಬಂದ ಬಳಿಕ ತಪ್ಪುಗಳು ಸಾಬೀತಾದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

ಒಂದು ವೇಳೆ ನಿರಪರಾಧಿ ಎಂದಾದರೆ ಬಿಜೆಪಿಯವರೆಲ್ಲರೂ ರಾಜೀನಾಮೆ ನೀಡಲು ಸಿದ್ದಾರಿದ್ದಾರೆಯೇ? ಎಂದು ಪ್ರತಿ ಸವಾಲು ಹಾಕಿದರು.ಮುಡಾ ಪ್ರಕರಣದ ಬಗ್ಗೆ ಕೆಳಹಂತದ ನ್ಯಾಯಾಲಯಗಳಲ್ಲಿನ ತೀರ್ಪುಗಳನ್ನು ಮೇಲಿ ನ್ಯಾಯಾಲಯಗಳಲ್ಲಿ ಪ್ರಶ್ನಿಸುವ ಅಧಿಕಾರವೂ ಇದೆ. ಆರಂಭ ಹಂತದಲ್ಲೇ ಬಿಜೆಪಿಯವರು ರಾಜೀನಾಮೆ ಕೇಳುತ್ತಿರುವುದು ಹಾಸ್ಯಾಸ್ಪದ. ಮುಂದಿನ ನಾಲ್ಕೈದು ವರ್ಷ ಇಂತಹುದೇ ಕೆಲಸಗಳನ್ನು ವಿಪಕ್ಷಗಳು ಮಾಡಿಕೊಂಡಿರಲಿ ಎಂದರು.

ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಇದರಲ್ಲಿ ವಿಶೇಷವೇನಿಲ್ಲ. ಯಾರೇ ಆದರೂ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ನಮಗೆ ಅವಕಾಶ ಕೊಡಿ ಎಂದು ಮನವಿ ಮಾಡುವುದು ಸಾಮಾನ್ಯ. ಆದರೆ ಹೈಕಮಾಂಡ್‌ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌‍ ಯಾರಿಗೇ ಟಿಕೆಟ್‌ ಕೊಟ್ಟರೂ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ನಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುತ್ತೇವೆ ಎಂದರು.
ಶಿಕ್ಷಣ ಇಲಾಖೆಯ ಸುಧಾರಣೆಗೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ಬೇರೆಬೇರೆ ಮೂಲಗಳಿಂದ ಸಂಪನೂಲ ಸಂಗ್ರಹಿಸಲಾಗಿದೆ. ಈಗಾಗಲೇ 12,500 ಶಿಕ್ಷಕರ ನೇಮಕಾತಿಯಾಗಿದೆ. ಇತ್ತೀಚೆಗೆ 1,500 ಶಿಕ್ಷಕರ ನೇಮಕಾತಿ ಪೂರ್ಣಗೊಂಡಿದೆ. ಪಿಯುಸಿ ಕಾಲೇಜುಗಳಿಗೆ 900 ಅಧ್ಯಾಪಕರನ್ನು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇದ್ದ 6,000 ಹುದ್ದೆಗಳಿಗೆ 5,800 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.ಒಂದು ವರ್ಷದಲ್ಲಿ 500 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಪ್ರಾರಂಭಿಸಲಾಗಿದ್ದು, ದ್ವಿಭಾಷಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಎಲ್‌ಕೆಜಿ, ಯುಕೆಜಿ ಶಾಲೆಗಳಲ್ಲಿ 43,000 ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ ಎಂದು ವಿವರಿಸಿದರು.

ಪ್ರಯೋಗಾಲಯ ಪರೀಕ್ಷೆಗಾಗಿ ಹೊರಡಿಸಲಾಗಿರುವ ಸುತ್ತೋಲೆಯಲ್ಲಿ ವಿದ್ಯಾರ್ಥಿಗಳಿಗೆ ಲೋಪವಾಗುವಂತಿದ್ದರೆ ಅದನ್ನು ಸರಿಪಡಿಸಲು ಸರ್ಕಾರ ಸಿದ್ಧವಿದೆ ಎಂದ ಸಚಿವರು, ಪೋಷಕರು ಮಕ್ಕಳನ್ನು ಪೂರ್ಣಾವಧಿಗೆ ಶಾಲೆಗೆ ಕಳುಹಿಸಿ ಎಂದು ಮನವಿ ಮಾಡಿದರು.

RELATED ARTICLES

Latest News