ಬೆಂಗಳೂರು, ಅ.15- ಸರ್ಕಾರಿ ಆಸ್ತಿಗಳ ಆವರಣದಲ್ಲಿ ಆರ್ಎಸ್ಎಸ್ನ ಚಡುವಟಿಕೆಗಳನ್ನು ನಿರ್ಬಂಧಿಸುವಂತೆ ಪತ್ರ ಬರೆದಿದ್ದ ಗ್ರಾಮೀಣಾಭಿವವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಮುಂದುವರೆದಿದ್ದು, ವ್ಯಕ್ತಿಯೊಬ್ಬರ ಅಶ್ಲೀಲ ನಿಂದನೆಯನ್ನು ತಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಸಚಿವರು ಹಂಚಿಕೊಂಡಿದ್ದಾರೆ.
ಕರೆ ಮಾಡಿರುವ ವ್ಯಕ್ತಿ ಸಚಿವರನ್ನು ಅವಾಚ್ಯ ಹಾಗೂ ಅಶ್ಲೀಲ ಪದಗಳಿಂದ ನಿಂದಿಸಿದ್ದು, ಸಚಿವರ ಯಾವ ಮಾತುಗಳನ್ನು ಕೇಳಿಸಿಕೊಳ್ಳದೇ ವಾಚಾಮಗೋಚರವಾಗಿ ವಾಗ್ದಾಳಿ ನಡೆಸಿದ್ದಾರೆ.ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪ್ರಿಯಾಂಕ ಖರ್ಗೆ, ಆರ್ಎಸ್ಎಸ್ ಯುವಕರ, ಮಕ್ಕಳ ಮನಸುಗಳಲ್ಲಿ ಕಲಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ ಎಂದಿದ್ದಾರೆ.
ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ. ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ? ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ, ಶಾಸಕ ಸುನಿಲ್ಕುಮಾರ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಂಸದ ಪ್ರತಾಪ್ಸಿಂಹ, ಅವರಂತಹ ಬಿಜೆಪಿ ನಾಯಕರು ಒಪ್ಪುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ನಾಯಕರ ಮಕ್ಕಳು ತಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು, ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ ಎಂದು ಅನುಕಂಪ ವ್ಯಕ್ತಪಡಿಸಿದ್ದಾರೆ.
ನಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, ಆರ್ಎಸ್ಎಸ್ ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ದರನ್ನು ಬ್ರೈನ್ವಾಶ್ ಮಾಡಿ, ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಆರ್ಎಸ್ಎಸ್ನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ, ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ. ಮುಗ್ದ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ ಮತ್ತು ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆಯಷ್ಟೇ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ದಾಂತಿಕ ರಾಜಕಾರಣ, ಮುಗ್ದ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ ಎಂದು ಪುನರುಚ್ಚರಿಸಿದ್ದಾರೆ.