Sunday, May 5, 2024
Homeರಾಜ್ಯಮುಸ್ಲಿಂ ಮೀಸಲಾತಿ ಕುರಿತು ಮೋದಿ ಗೊಂದಲ ಮೂಡಿಸುತ್ತಿದ್ದಾರೆ : ಸಿಎಂ ಗರಂ

ಮುಸ್ಲಿಂ ಮೀಸಲಾತಿ ಕುರಿತು ಮೋದಿ ಗೊಂದಲ ಮೂಡಿಸುತ್ತಿದ್ದಾರೆ : ಸಿಎಂ ಗರಂ

ಬೀದರ್,ಏ.25- ಮುಸ್ಲಿಂ ಮೀಸಲಾತಿ ವಿಷಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಟೀಕೆ ಮಾಡಿ ಗೊಂದಲ ಮೂಡಿಸುತ್ತಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಶೇ.4 ರಷ್ಟು ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ಯಥಾರೀತಿಯಾಗಿ ಮುಂದುವರೆಸುವುದಾಗಿ ಸುಪ್ರೀಂಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿರುವುದನ್ನು ಮರೆತಂತೆ ವರ್ತಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಬೀದರ್ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಎಸ್ಸಿ, ಎಸ್ಟಿಗೆ ನೀಡಲಾಗಿರುವ ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ನೀಡಲಿದೆ ಎಂದು ಮೋದಿಯವರು ಟೀಕಿಸಿದ್ದಾರೆ. ಚಿನ್ನಪ್ಪ ರೆಡ್ಡಿ ಆಯೋಗದ ಶಿಫಾರಸ್ಸಿನಂತೆ ಮುಸ್ಲಿಂ ಸಮುದಾಯಕ್ಕೆ ಶೇ.4 ರಷ್ಟು ಮೀಸಲಾತಿ 1994 ರಿಂದ ಜಾರಿಗೆ ಬಂದಿದೆ ಎಂದರು.

ರಾಜ್ಯದಲ್ಲಿ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಈ ಮೀಸಲಾತಿಯನ್ನು ಹಿಂಪಡೆಯಲಾಗಿತ್ತು. ಮುಸ್ಲಿಂ ಸಮುದಾಯ ಸುಪ್ರೀಂಕೋರ್ಟ್ನ ಮೊರೆ ಹೋಗಿದೆ. ವಿಚಾರಣೆಯ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಸುಪ್ರೀಂಕೋರ್ಟ್ನ ಮುಂದೆ ಶೇ.4 ಮೀಸಲಾತಿಯನ್ನು ಮುಂದುವರೆಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದೆ, ಈ ಮೀಸಲಾತಿ ಈಗಲೂ ಮುಂದುವರೆಯುತ್ತಿದೆ ಎಂದು ತಿಳಿಸಿದರು.

ಹುಬ್ಬಳಿಯ ವಿದ್ಯಾರ್ಥಿನಿ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿಯವರು ಒತ್ತಾಯ ಮಾಡುತ್ತಿದ್ದಾರೆ. ಅವರ ಅಧಿಕಾರವಧಿಯಲ್ಲಿ ಯಾವುದಾದರೂ ಪ್ರಕರಣವನ್ನು ಸಿಬಿಐಗೆ ವಹಿಸಿದ ಉದಾಹರಣೆ ಇದೆಯೇ? ಎಂದು ಪ್ರಶ್ನಿಸಿದರು.

ನಾನು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೇನೆ. ಬಿಜೆಪಿಯವರಿಗೆ ಕೇಳಲು ಯಾವ ನೈತಿಕ ಹಕ್ಕಿದೆ. ಇದರಲ್ಲಿ ರಾಜಕೀಯ ಮಾಡಬಾರದು. ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದು, ಸರ್ಕಾರ ಈಗಾಗಲೇ ಆರೋಪಿಯನ್ನು ಬಂಧಿಸಿದೆ. ಸಿಐಡಿ ತನಿಖೆ ನಡೆದಿದ್ದು ಆರೋಪಪಟ್ಟಿಯನ್ನು ತಯಾರಿಸಲಿದೆ ಎಂದರು.

ನೇಹಾ ಹತ್ಯೆ ಪ್ರಕರಣದಲ್ಲಿ ರಾಜಕೀಯ ಬೇಡ :
ನೇಹಾ ತಂದೆಯವರು ತಮ್ಮ ಮಗಳ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವೇ ರಾಜಕೀಯ ಮಾಡುತ್ತಿದೆ ಹಾಗೂ ಬಿಜೆಪಿಯವರೂ ಇದೇ ಧೋರಣೆಯನ್ನು ಹೊಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನೇಹಾ ಕೊಲೆ ಅನ್ಯಾಯವಾದುದು. ಅದನ್ನು ನಾವು ಖಂಡಿಸಿದ್ದೇವೆ. ಇತರೆ ಪಕ್ಷಗಳು ಅದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸುವ ಪ್ರಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದರು.

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ :
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನರ ಆಸ್ತಿ ಕಸಿದುಕೊಂಡು ಸಂಪತ್ತು ಹಂಚುವ ಬಗ್ಗೆ ಮೋದಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೋದಿಯವರು ನೀಡಿರುವ ಭರವಸೆಗಳನ್ನು ಈಡೇರಿಸಿಲ್ಲ. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ., 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದ್ವಿಗುಣಗೊಳಿಸುವ ಭರವಸೆಗಳನ್ನು ಈಡೇರಿಸಿದರೇ ಅಗತ್ಯವಸ್ತುಗಳ ಬೆಲೆಯನ್ನು ಮೋದಿಯವರು ಕಡಿಮೆ ಮಾಡಿದ್ದಾರೆಯೇ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

RELATED ARTICLES

Latest News