Wednesday, June 18, 2025
Homeರಾಜ್ಯರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರ, ಅನಾಹುತಗಳ ಸರಮಾಲೆ, ಜನ ಜೀವನ ದುಸ್ತರ

ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರ, ಅನಾಹುತಗಳ ಸರಮಾಲೆ, ಜನ ಜೀವನ ದುಸ್ತರ

Monsoon rains across the state, disrupting people's lives

ಬೆಂಗಳೂರು,ಜೂ.18- ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅನಾಹುತಗಳ ಸರಮಾಲೆಯನ್ನೇ ತಂದೊಡ್ಡಿದೆ. ಮಡಿಕೇರಿ, ಹಾಸನ, ಚಿಕ್ಕಮಂಗಳೂರು, ಕೊಡಗು, ಮಂಗಳೂರು, ಭಟ್ಕಳ, ಉಡುಪಿ, ಶಿವಮೊಗ್ಗ, ಕಾರವಾರ, ಬಳ್ಳಾರಿ, ಬೆಳಗಾವಿ ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಡಿಕೇರಿ:
ವರ್ಣನ ಆರ್ಭಟಕ್ಕೆ ಕೊಡಗಿನ ಬಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಮುಳುಗಡೆಯಾಗಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಹಾರಂಗಿ ಡ್ಯಾಮ್‌ನಿಂದ ಸುಮಾರು 18 ಸಾವಿರ ಕ್ಯೂಸೆಕ್‌ ನೀರನ್ನು ಕಾವೇರಿ
ನದಿಗೆ ಹರಿಸಲಾಗುತ್ತಿದೆ.

ಕಾವೇರಿಯ ಉಗಮಸ್ಥಾನ ತಲಕಾವೇರಿಯಲ್ಲಿ ನೀರು ಉಕ್ಕಿ ಹರಿಯುತ್ತಿದೆ. ತ್ರಿವೇಣಿ ಸಂಗಮದ ಉದ್ಯಾನವನ, ಭಂಗಂಡೇಶ್ವರ ದೇವಾಲಯ ಆವರಣಕ್ಕೂ ನೀರು ನುಗ್ಗಿದೆ. ಆವರಣದಲ್ಲಿನ ಅಂಗಡಿ ಮುಗ್ಗಟ್ಟುಗಳನ್ನು ತೆರವು ಮಾಡುವಂತೆ ಸೂಚನೆ ನೀಡಲಾಗಿದೆ.

ನಾಪೊಕ್ಲು, ಅಯ್ಯಂಗೇರಿ, ಸಣ್ಣಪುಲಿಕೊಟ್ಟು ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಸಂಪರ್ಕ ಕಡಿತಗೊಂಡಿದೆ. ಹಾರಂಗಿ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ಭದ್ರತಾ ದೃಷ್ಟಿಯಿಂದ ಈಗಾಗಲೇ 4 ಕ್ರಸ್ಟ್‌ ಗೇಟ್‌ಗಳ ಮೂಲಕ ನೀರು ಹರಿಬಿಡಲಾಗುತ್ತಿದೆ.

ಬೆಳಗಾವಿ:
ಮಹಾರಾಷ್ಟ್ರದ ಪಶ್ಚಿಮಘಟ್ಟ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಮಳೆ ಜೋರಾಗಿ ಸುರಿಯುತ್ತಿದ್ದು, ಸಪ್ತನದಿಗಳು ಉಕ್ಕಿ ಹರಿಯುತ್ತಿವೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯಿಂದ ಕೃಷ್ಣ, ವೇದಗಂಗ, ದೂದ್‌ಗಂಗ ನದಿಗಳಲ್ಲಿ ಒಳಹರಿವು ಹೆಚ್ಚಾಗಿದೆ.

ಚಿಕ್ಕೋಡಿ ವಿಭಾಗ ವ್ಯಾಪ್ತಿಯ ಆರು ತಳಹಂತದ ಸೇತುವೆಗಳು ಜಲಾವೃತವಾಗಿದ್ದು, 12 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಕೃಷ್ಣಾನದಿಯ ಒಳಹರಿವು ಕೂಡ ದಿನೇ ದಿನೇ ಹೆಚ್ಚಾಗುತ್ತಿದೆ. ಖಾನಾಪುರದ ಕಾಡಂಚಿನಲ್ಲಿ ಮಳೆಯಾಗುತ್ತಿರುವುದರಿಂದ ಮಲಪ್ರಭ ನದಿ ಉಕ್ಕಿ ಹರಿಯುತ್ತಿದ್ದು, ಖಾನಾಪುರ ತಾಲ್ಲೂಕಿನ ಹಬ್ಬಾನಟ್ಟಿ ಗ್ರಾಮದಲ್ಲಿ ಆಂಜನೇಯ ಜಲಾವೃತಗೊಂಡಿದೆ.

ಚಿಕ್ಕಮಗಳೂರು:
ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ತಡರಾತ್ರಿ ಸುರಿದ ಮಳೆಗೆ ಗಿಡ್ಡಪ್ಪ ಎಂಬುವರ ಮನೆಯ ಗೋಡೆ ಕುಸಿದಿದ್ದು, ಧವಸಧಾನ್ಯ, ಪೀಠೋಪಕರಣಗಳು ನಾಶವಾಗಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಕಳಸಾ ತಾಲ್ಲೂಕಿನ ನೇರಸಣಿಗೆಯಲ್ಲಿ ಮರ ಬಿದ್ದು ಮನೆಯ ಮೇಲ್ಛಾವಣಿಗೆ ಹಾನಿಯಾಗಿದೆ. ತರಿಕೇರಿ ತಾಲ್ಲೂಕಿನ ಪ್ರವಾಸಿತಾಣ ಕಲತ್ತಗಿರಿ ಫಾಲ್‌್ಸ ಧುಮುಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತಿದೆ.

ಶೃಂಗೇರಿ ತಾಲ್ಲೂಕಿನ ನೆಮಾರು, ತನಿಕೋಡು ಬಳಿ ಗುಡ್ಡ ಕುಸಿದಿದ್ದು, ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಜೂ.20ರ ಬೆಳಗ್ಗೆ 8 ಗಂಟೆವರೆಗೂ ಸಂಚಾರ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ತಿಳಿಸಿದ್ದಾರೆ.

ಶಿವಮೊಗ್ಗ:
ನಿರಂತರ ಮಳೆಯಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದ್ದು, ಈಗಾಗಲೇ ಡ್ಯಾಮ್‌ನಿಂದ 37 ಸಾವಿರ ಕ್ಯೂಸೆಕ್‌ ನೀರು ಹೊರಬಿಟ್ಟಿದ್ದು, ನದಿಪಾತ್ರದಲ್ಲಿ ಪ್ರವಾಹದ ಆತಂಕ ಮನೆ ಮಾಡಿದೆ.
ಹೊಸನಗರ ತಾಲ್ಲೂಕಿನ ಹುಲಿಕಲ್‌ಘಾಟ್‌ ಬಳಿ ಗುಡ್ಡ ಕುಸಿದಿದ್ದು, ಮತ್ತೆ ಅದೇ ಜಾಗದಲ್ಲಿ ಲಾರಿಯೊಂದು ಕೆಟ್ಟು ನಿಂತಿದ್ದರಿಂದ ಕಿಲೋಮೀಟರ್‌ಗಟ್ಟಲೇ ವಾಹನಗಳು ನಿಂತಿದ್ದ ದೃಶ್ಯ ಕಂಡುಬಂತು.

ಹಾಸನ:
ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಹೇಮಾವತಿ ಜಲಾಶಯದ ಒಳಹರಿವು ಹೆಚ್ಚಳವಾಗಿದೆ. 26.120 ಟಿಎಂಸಿ ನೀರು ಸಂಗ್ರಹವಾಗಿದ್ದು, ಭದ್ರತಾ ದೃಷ್ಟಿಯಿಂದ ಯಾವುದೇ ಸಮಯದಲ್ಲಾದರೂ ನೀರು ಹೊರ ಬಿಡಲಾಗುವುದು. ನದಿಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಬಳ್ಳಾರಿ:
ತಾಲ್ಲೂಕಿನ ಶಿರಾವಾರ ಗ್ರಾಮದ ಸರ್ಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಕುಸಿದು ವಿದ್ಯಾರ್ಥಿ ತಲೆಗೆ ಪೆಟ್ಟಾಗಿದೆ. ಕಲಬುರಗಿ: ತಾಲ್ಲೂಕಿನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಗೋಡೆಗೆ ನೀರು ಇಳಿದು ಕುಸಿದು ಬಿದ್ದ ಪರಿಣಾಮ ಗುಡೂರು ಗ್ರಾಮದ ಚಂದ್ರಶೇಖರ್‌ ಎಂಬ ಬಾಲಕ ಮೃತಪಟ್ಟಿದ್ದಾನೆ.

RELATED ARTICLES

Latest News