ಬೆಂಗಳೂರು, ಜೂ.5– ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಿನ್ನೆ ಮಧ್ಯಾಹ್ನ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಬಹುತೇಕರು ಉಸಿರುಗಟ್ಟಿ ಸಾವನ್ನಪ್ಪಿರುವುದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಈ ಪ್ರಕರಣದಲ್ಲಿ ಸಾವನ್ನಪ್ಪಿರುವ 11 ಮಂದಿಯ ಮರಣೋತ್ತರ ಪರೀಕ್ಷೆ ಮುಗಿದಿದ್ದು,ಮೃತರ ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗಿದೆ.ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟಿರುವವರ ಪೈಕಿ ಬಹು ತೇಕರು ಉಸಿರುಗಟ್ಟಿ, ಎದೆಯ ಭಾಗದಲ್ಲಿ ಹೆಚ್ಚು ಒತ್ತಡದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಕೆಲವರಿಗೆ ಮೂಳೆಗಳು ಮುರಿದಿವೆ ಇದನ್ನು ಹೊರತು ಪಡಿಸಿದರೆ ಯಾವುದೇ ಅಂಶಗಳು ಕಂಡು ಬಂದಿಲ್ಲ ಎಂದು ವೈದ್ಯರ ತಂಡ ಪೊಲೀಸರಿಗೆ ತಿಳಿಸಿದ್ದಾರೆ.ಬೌರಿಂಗ್ ಆಸ್ಪತ್ರೆಯಲ್ಲಿ 6 ಶವಗಳು ಹಾಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 5 ಶವಗಳ ಮರಣೋತ್ತರ ಪರೀಕ್ಷೆ ನಡೆಸಿ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ದುಃಖದ ಮಡುವಿನಲ್ಲೇ ಮೃತದೇಹಗಳನ್ನು ತಮ ತಮ ಮನೆಗಳಿಗೆ ಕೊಂಡೋಯ್ದ ದೃಶ್ಯ ಮನಕಲಕುವಂತಿತ್ತು. ಕಾಲ್ತುಳಿತದಲ್ಲಿ ಗಾಯಗೊಂಡಿರುವ 56 ಮಂದಿ ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ,6 ಮಂದಿ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ.