ಬೆಂಗಳೂರು,ನ.5- ಸಾಂಸ್ಕೃತಿಕ ನಗರಿ ಮೈಸೂರು ನಗರದೊಳಗೆ ಎರಡು ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ Xನಲ್ಲಿ ಪೋಸ್ಟ್ ಮಾಡಿರುವ ಅವರು, ಜೆಎಲ್ಬಿ ರಸ್ತೆ, ವಿನೋಬಾ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ ರಸ್ತೆಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು. ಜನಾಭಿಪ್ರಾಯ ಪಡೆಯದೇ ಈ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣ ಕಾರ್ಯಕ್ಕೆ ಮುಂದಾ ಗಿದ್ದಾರೆ. ಡಿಪಿಆರ್ ಕೂಡ ಸಿದ್ಧಪಡಿಸುತ್ತಿದ್ದಾರೆ. ಇದಕ್ಕೆ ನಮ ತೀವ್ರ ವಿರೋಧವಿದೆ ಎಂದಿದ್ದಾರೆ.
ವಿನೋಬಾ ರಸ್ತೆಯಲ್ಲಿ ಫ್ಲೈಓವರ್ ನಿರ್ಮಿಸಲು ಮುಂದಾದರೆ ಮರಗಳ ಹರಣವಾಗಲಿದೆ. ಹಾಗಾಗಿ ಈ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣ ಮಾಡಬಾರದು. ಅಭಿವೃದ್ಧಿ ನೆಪದಲ್ಲಿ ಮೈಸೂರಿನ ಸೌಂದರ್ಯ ಹಾಳು ಮಾಡಬಾರದು. ಪಾರಂಪರಿಕ ನಗರಿಯ ಗುರುತು ಉಳಿಸಿಕೊಳ್ಳಬೇಕು. ಸಿಎಂ ಕೂಡ ಗ್ರೇಟರ್ ಮೈಸೂರು ಸಭೆಯಲ್ಲಿ ಮೈಸೂರಿನ ಪಾರಂಪರಿಕತೆ ಉಳಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಅವರ ಸಲಹೆಯಂತೆ ಅಧಿಕಾರಿಗಳು ನಡೆದುಕೊಳ್ಳಬೇಕೆಂದು ಹೇಳಿದ್ದಾರೆ.
ಫ್ಲೈಓವರ್ ನಿರ್ಮಾಣವೇ ಶಾಶ್ವತ ಪರಿಹಾರವಲ್ಲ. ಮೆಟ್ರೋ ಮಾರ್ಗ ನಿರ್ಮಾಣಕ್ಕೆ ನಮ ವಿರೋಧವಿಲ್ಲ. ಮುಂಬೈ ಮಾದರಿಯಲ್ಲಿ ಅಂಡರ್ ಗ್ರೌಂಡ್ನಲ್ಲಿ ಮೆಟ್ರೋ ನಿರ್ಮಾಣ ಮಾಡಲಿ. ಮೈಸೂರಿನ ಜನಸಂಖ್ಯೆಗನುಗುಣವಾಗಿ ಕಾಮಗಾರಿ ಕೈಗೊಳ್ಳಲಿ, ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಸ್ಥಳೀಯರಿಗೆ ಅನುಕೂಲವಾಗುವಂತೆ ಅಭಿವೃದ್ಧಿ ಕಾಮಗಾರಿ ಮಾಡಲಿ, ಜನರ ವಿರೋಧದ ನಡುವೆ ಫ್ಲೈಓವರ್ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತಕ ಹೋರಾಟ ಮಾಡುತ್ತೇವೆ. ಜನರ ಸಹಕಾರದೊಂದಿಗೆ ಹೋರಾಟ ರೂಪಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.
ಗ್ರೇಟರ್ ಮೈಸೂರಿನಿಂದ ಒಳಿತಾಗಲಿದೆ. ಆದರೆ ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಬೆಂಗಳೂರು ಮಾದರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಬಾರದು ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.
