ಮೈಸೂರು,ಸೆ.28- ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರು ತಾಲ್ಲೂಕಿನಲ್ಲಿ ಗ್ರಾಮೀಣ ದಸರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಿಗ್ಗೆ 9 ಗಂಟೆಗೆ ದಾರಿಪುರ ಗ್ರಾಮದ ದೇವಸ್ಥಾನದಿಂದ ಸುಮಾರು 2 ಕಿ.ಮೀ. ಅದ್ಧೂರಿ ಮೆರವಣಿಗೆ ಸಾಗಲಿದ್ದು, ಈ ಮೆರವಣಿಗೆಯಲ್ಲಿ ಸರ್ಕಾರದ ವಿವಿಧ ಯೋಜನೆಗಳ 25 ಟ್ಯಾಬ್ಲೂ (ಮಾಹಿತಿ ರಥ), ಹತ್ತು ಸಾಂಸ್ಕøತಿಕ ಕಲಾ ತಂಡಗಳು, ಸುಮಾರು 3 ಸಾವಿರಕ್ಕೂ ಹೆಚ್ಚು ಜನರು, 101 ಕುಂಬಮೇಳ ಸ್ವಾಗತ ಇರುತ್ತದೆ.
ನಾಳೆ ಬೆಳಿಗ್ಗೆ 10 ಗಂಟೆಗೆ ತಾಲ್ಲೂಕಿನ ಜಯಪುರ ಗ್ರಾಮದ ಗುಜ್ಜಮ್ಮ ದೇವಸ್ಥಾನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ರವರು ಉದ್ಘಾಟಿಸಲಿದ್ದು, ಸಂಸದರಾದ ಪ್ರತಾಪ್ ಸಿಂಹ ಅವರು ಹಾಗೂ ಶಾಸಕರುಗಳು ಉಪಸ್ಥಿತರಿರಲಿದ್ದಾರೆ.
ಈ ವೇಳೆ ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ. ನಾರಾಯಣಸ್ವಾಮಿ ದೇವಸ್ಥಾನದ ಆವರಣದಲ್ಲಿ ನುರಿತ ವೈದ್ಯರಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ, ಪಶುಸಂಗೋಪನೆ ಇಲಾಖೆಯಿಂದ ಉಚಿತ ಜಾನುವಾರು ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಮಾರಮ್ಮನ ದೇವಸ್ಥಾನದ ಆವರಣದಲ್ಲಿ ವಿವಿಧ ಇಲಾಖೆಗಳಿಂದ ದೊರಕುವ ಸರ್ಕಾರಿ ಸವಲತ್ತುಗಳ ಮಾಹಿತಿ ಕೇಂದ್ರ ಇರಲಿದೆ.
ಈ ಗ್ರಾಮೀಣ ದಸರಾ ಕಾರ್ಯಕ್ರಮಕ್ಕೆ ತಾಲ್ಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.