ಹಾಪುರ್, ಆ.31 (ಪಿಟಿಐ)- ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಗಂಗಾ ಎಕ್ಸ್ಪ್ರೆಸ್ವೇಯಲ್ಲಿ ವೇಗವಾಗಿ ಚಲಿಸುತ್ತಿದ್ದ ಥಾರ್ ಕಾರು ಉರುಳಿಬಿದ್ದ ಪರಿಣಾಮ ನಾಲ್ವರು ಯುವಕರು ಮೃತಪಟ್ಟಿದ್ದು, 17 ವರ್ಷದ ಬಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಡರಾತ್ರಿ 11.56ರ ಸುಮಾರಿಗೆ ಬುದೌನ್ ಜಿಲ್ಲೆಯಿಂದ ಐವರು ಪ್ರಯಾಣಿಸುತ್ತಿದ್ದ ದೆಹಲಿ ನೋಂದಣಿಯ ಎಸ್ಯುವಿ ದೆಹಲಿ ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ವಾಹನ ರಸ್ತೆಬದಿಗೆ ಉರುಳುವ ಮುನ್ನ ಐದರಿಂದ ಆರು ಬಾರಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ತೀವ್ರತೆಗೆ ಎಸ್ಯುವಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಪ್ರಯಾಣಿಕರು ವಾಹನದೊಳಗೆ ಸಿಲುಕಿಕೊಂಡಿದ್ದರು. ಮಾಹಿತಿ ಪಡೆದ ಪೊಲೀಸರು ಹಾಗೂ ಡಯಲ್-112 ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಗಾಯಾಳುಗಳನ್ನು ಸಿಖೇಡಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದರೆ, ಪರೀಕ್ಷಿಸಿದ ವೈದ್ಯರು ನಾಲ್ವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಮೃತರನ್ನು ಜೋಗಿಂದರ್ (26), ಸುಖಬೀರ್ (25), ಜಸ್ವಂತ್ (20) ಹಾಗೂ ರವಿ (20) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಪಾಲ್ಪುರ ನಿವಾಸಿ ವಿಷ್ಣು (17) ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸಿಂಭವೋಲಿ ಠಾಣೆಯ ಠಾಣಾಧಿಕಾರಿ ಅರವಿಂದ್ ಚೌಧರಿ ತಿಳಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
