ಲಖನೌ, ಜುಲೈ 5- 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ 2017ರಂತೆಯೇ ಭರ್ಜರಿ ಗೆಲುವು ಸಾಧಿಸುವ ಗುರಿಯೊಂದಿಗೆ ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡಲಿವೆ ಎಂದು ಬಿಜೆಪಿ ನಾಯಕರು ತಿಳಿಸಿದರು.ಎರಡು ದಿನಗಳ ಲಖನೌ ಪ್ರವಾಸದಲ್ಲಿರುವ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಅವರು ಇಂದು ಬೆಳಿಗ್ಗೆ ಪಕ್ಷದ ಮಾಜಿ ರಾಜ್ಯಾಧ್ಯಕ್ಷರೊಂದಿಗೆ ಚಹಾ ಕೂಟದಲ್ಲಿ ಸಭೆ ನಡೆಸಿದರು. ಈ ವೇಳೆ 2027ರ ವಿಧಾನಸಭೆ ಚುನಾವಣೆಯ ಕಾರ್ಯತಂತ್ರ ಕುರಿತು ಚರ್ಚೆ ನಡೆಸಲಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇದೇ ದಿನ ಎನ್ಡಿಎ ಮಿತ್ರಪಕ್ಷಗಳ ನಾಯಕರೊಂದಿಗೂ ನಬಿನ್ ಸಭೆ ನಡೆಸಲಿದ್ದು, ಮೈತ್ರಿಯನ್ನು ಮತ್ತಷ್ಟು ಬಲಪಡಿಸುವುದು, ಸಂಘಟನಾ ವಿಸ್ತರಣೆ ಹಾಗೂ 2027ರಲ್ಲಿ ಎನ್ಡಿಎ ಮತ್ತೆ ಅಧಿಕಾರಕ್ಕೆ ಬರಲು ರೂಪುರೇಷೆ ಸಿದ್ಧಪಡಿಸುವ ಕುರಿತು ಚರ್ಚೆ ನಡೆಯಲಿದೆ.ನಂತರ ಅವರು ಉಪಮುಖ್ಯಮಂತ್ರಿಗಳಾದ ಕೇಶವ ಪ್ರಸಾದ್ ಮೌರ್ಯ ಹಾಗೂ ಬ್ರಜೇಶ್ ಪಾಠಕ್ ಅವರ ನಿವಾಸಗಳಿಗೆ ಭೇಟಿ ನೀಡಿ ಪ್ರತ್ಯೇಕ ಸಭೆ ನಡೆಸಲಿದ್ದಾರೆ.
ಸಭೆಯ ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಲದ ಮೇಲೆ 2027ರಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಉತ್ತರ ಪ್ರದೇಶದಲ್ಲಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಉತ್ತರ ಪ್ರದೇಶದ ಜನರು ಗುಂಡಾರಾಜ್, ಮಾಫಿಯಾ ರಾಜ್, ವಂಶಪಾರಂಪರ್ಯ ರಾಜಕೀಯ ಅಥವಾ ಗಲಭೆಗಳನ್ನು ಬಯಸುವುದಿಲ್ಲ. ಅವರಿಗೆ ಅಭಿವೃದ್ಧಿ, ಸುಶಾಸನ ಮತ್ತು ಭದ್ರತೆ ಬೇಕು, ಎಂದು ಅವರು ಹೇಳಿದರು.
ಸಮಾಜವಾದಿ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಗುಂಡಾಗಿರಿ, ಭೂ ಕಬಳಿಕೆ ಮತ್ತು ಕಾನೂನು ಸುವ್ಯವಸ್ಥೆ ಹದಗೆಡಲಿದೆ ಎಂದು ಆರೋಪಿಸಿದ ಅವರು, 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತ ಮತ್ತು ಅಭಿವೃದ್ಧಿ ಹೊಂದಿದ ಉತ್ತರ ಪ್ರದೇಶ ನಿರ್ಮಿಸುವುದು ನಮ್ಮ ಗುರಿಯಾಗಿದ್ದು, ಮುಂದಿನ 21 ವರ್ಷಗಳವರೆಗೆ ಸಮಾಜವಾದಿ ಪಕ್ಷ ಅಧಿಕಾರದ ಸಮೀಪಕ್ಕೂ ಬರುವುದಿಲ್ಲ ಎಂದು ಹೇಳಿದರು.
ಬಿಜೆಪಿ ಅಧ್ಯಕ್ಷರೊಂದಿಗಿನ ಸಭೆಯಲ್ಲಿ ಸರ್ಕಾರ ಮತ್ತು ಪಕ್ಷದ ಸಂಘಟನೆ ಒಟ್ಟಾಗಿ ಕಾರ್ಯನಿರ್ವಹಿಸಿ 2017ರ ಸಾಧನೆಯನ್ನು ಪುನರಾವರ್ತಿಸಿ 2027ರಲ್ಲಿ ಇನ್ನೂ ದೊಡ್ಡ ಗೆಲುವು ಸಾಧಿಸುವ ಬಗ್ಗೆ ಚರ್ಚೆ ನಡೆದಿದೆ. ಎನ್ಡಿಎಯ ಎಲ್ಲಾ ಮಿತ್ರಪಕ್ಷಗಳು ಒಗ್ಗಟ್ಟಿನಿಂದ ಮುಂದುವರಿಯಲಿವೆ ಎಂದರು.
ಮಾಜಿ ರಾಜ್ಯಾಧ್ಯಕ್ಷ ಹಾಗೂ ಸಚಿವ ಸ್ವತಂತ್ರ ದೇವ್ ಸಿಂಗ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಲ್ಯಾಣ ಯೋಜನೆಗಳನ್ನು ಪ್ರತಿಯೊಂದು ಗ್ರಾಮಕ್ಕೂ ತಲುಪಿಸುವುದೇ ಪಕ್ಷದ ಪ್ರಮುಖ ಸಂದೇಶ ಎಂದು ಹೇಳಿದರು. ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷವಾಗಿದೆ. ನಮ್ಮ ಕಾರ್ಯಕರ್ತರು ಜಾತಿವಾದ, ಪ್ರಾದೇಶಿಕತೆ, ವ್ಯಕ್ತಿಪೂಜೆ ಹಾಗೂ ಕುಟುಂಬ ರಾಜಕಾರಣಕ್ಕಿಂತ ರಾಷ್ಟ್ರಭಕ್ತಿಗೆ ಆದ್ಯತೆ ನೀಡುತ್ತಾರೆ. ಪಕ್ಷವು ತನ್ನ ಕಾರ್ಯಕರ್ತರನ್ನು ಸದಾ ಗೌರವಿಸುತ್ತದೆ. ಇಂದಿನ ಕಾರ್ಯಕರ್ತನೇ ನಾಳೆಯ ನಾಯಕ, ಎಂದು ಅವರು ಹೇಳಿದರು.
ಮತ್ತೋರ್ವ ಮಾಜಿ ರಾಜ್ಯಾಧ್ಯಕ್ಷ ಭೂಪೇಂದ್ರ ಸಿಂಗ್ ಚೌಧರಿ ಮಾತನಾಡಿ, ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ. ಈ ಒಗ್ಗಟ್ಟಿನ ಮನೋಭಾವ ಮುಂದೆಯೂ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸಾಧನೆ ನಿರೀಕ್ಷಿತ ಮಟ್ಟದಲ್ಲಿರಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕಸಭೆ ಚುನಾವಣೆಯ ಬಳಿಕ ನಡೆದ ಉಪಚುನಾವಣೆಗಳಲ್ಲಿ ಬಿಜೆಪಿ ಎಲ್ಲ ಸ್ಥಾನಗಳನ್ನೂ ಗೆದ್ದಿದೆ. ನಾವು ಸಂಪೂರ್ಣ ಸಜ್ಜಾಗಿದ್ದೇವೆ. ನಕಾರಾತ್ಮಕ ರಾಜಕೀಯ ದೀರ್ಘಕಾಲ ಯಶಸ್ವಿಯಾಗುವುದಿಲ್ಲ. 2017ಕ್ಕಿಂತಲೂ ಹೆಚ್ಚಿನ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ, ಎಂದರು.
