ನವದೆಹಲಿ, ಮೇ 31:ದಕ್ಷಿಣ ದೆಹಲಿಯ ಸಾಕೇತ್ ಮೆಟ್ರೋ ನಿಲ್ದಾಣದ ಸಮೀಪ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡ ಕುಸಿದ ಪರಿಣಾಮ ನಾಲ್ವರು ಯುವಕರು ಮೃತಪಟ್ಟಿದ್ದಾರೆ.ಸೈದುಲಾಜಾಬ್ ಪ್ರದೇಶದ ವೆಸ್ಟರ್ನ್ ಮಾರ್ಗ್ನಲ್ಲಿರುವ ಈ ಕಟ್ಟಡ ಕಳೆದ ರಾತ್ರಿ ಕುಸಿದಿತ್ತು. ಕಟ್ಟಡದಲ್ಲಿ ಕೋಚಿಂಗ್ ಸಂಸ್ಥೆ, ಕೆಫೆಗಳು ಹಾಗೂ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದವು. ಘಟನೆ ಸಂಭವಿಸಿದ ವೇಳೆ ಮೇಲಿನ ಮಹಡಿಯಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟಡ ಸಂಪೂರ್ಣವಾಗಿ ನೆಲಸಮವಾಗಿದ್ದು, ಅದರ ಅವಶೇಷಗಳು ನೀಟ್ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಗಳು ಆಗಾಗ್ಗೆ ಬಳಸುತ್ತಿದ್ದ ಪಕ್ಕದ ಟಿನ್ಶೆಡ್ ಕ್ಯಾಂಟೀನ್ ಮೇಲೂ ಬಿದ್ದಿವೆ ಅಲ್ಲಿ ಸುಮಾರು 30 ವಿದ್ಯಾರ್ಥಿಗಳಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.ಮೃತರಲ್ಲಿ ಒಬ್ಬನನ್ನು ರವಿ (26) ಎಂದು ಗುರುತಿಸಲಾಗಿದೆ ಇನ್ನು ಮೂವರ ಗುರುತು ಪತ್ತೆ ಕಾಐರ ನಡೆದಿದೆ .ಗಾಯಗೊಂಡಿರುವ 12 ಮಂದಿಯನ್ನು ಆಸ್ಪತ್ರೆಗೆ ದಾಖಲಾಗಿದೆ.
ಸ್ಥಳೀಯರ ಪ್ರಕಾರ 100 ಕ್ಕೂ ಹೆಚ್ಚಿ ಮಂದಿ ಅವಶೇಷದಡಿ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆ ,ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಿಬ್ಬಂದಿ ಅವಶೇಷಗಳಡಿ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ತಂಡಗಳು ಭಾರೀ ಯಂತ್ರೋಪಕರಣಗಳು, ಹೈಡ್ರಾಲಿಕ್ ಕಟರ್ಗಳು, ಸಂತ್ರಸ್ತರ ಸ್ಥಳ ಪತ್ತೆ ಕ್ಯಾಮೆರಾಗಳು ಹಾಗೂ ಶ್ವಾನ ದಳಗಳನ್ನು ಬಳಸಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ಘಟನೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಹಾಗೂ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲು ಆದೇಶ ನೀಡಿದ್ದಾರೆ.
ಮುಖ್ಯಮಂತ್ರಿಯ ಸೂಚನೆಯ ಮೇರೆಗೆ, ಈ ಸಂಬಂಧ ಮೆಹ್ರೌಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ದಾಖಲಿಸಲಾಗಿದೆ
ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಪ್ರಗತಿಯನ್ನು ಪರಿಶೀಲಿಸಿ, ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ರೀತಿಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರದೇಶದಲ್ಲಿನ ಅನಧಿಕೃತ ನಿರ್ಮಾಣಗಳು ಮತ್ತು ಸುರಕ್ಷತಾ ಕ್ರಮಗಳ ಕೊರತೆ ಕುರಿತು ನಿವಾಸಿಗಳು ತೀವ್ರ ಆತಂಕ ವ್ಯಕ್ತಪಡಿಸಿದರು.
ಎಲ್ಲ ಅನಧಿಕೃತ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅವುಗಳಿಗೆ ಹೊಣೆಗಾರರಾಗಿರುವ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮ ಜರುಗಿಸಲಾಗುವುದು ಎಂದು ರೇಖಾ ಗುಪ್ತಾ ಹೇಳಿದರು.ಱಱಅವಶೇಷಗಳಡಿ ಸಿಲುಕಿರುವವರನ್ನು ಸುರಕ್ಷಿತವಾಗಿ ಹೊರತೆಗೆದು, ಪೀಡಿತ ಕುಟುಂಬಗಳಿಗೆ ತಕ್ಷಣದ ನೆರವು ಒದಗಿಸಲು ಲಭ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ಬಳಸಲಾಗುತ್ತಿದೆ. ಯಾವುದೇ ಅಡ್ಡಿಯಿಲ್ಲದೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿದರು.
ಪರಿಸ್ಥಿತಿಯ ಮೇಲೆ ಆಡಳಿತವು ನಿಕಟ ನಿಗಾ ವಹಿಸಿದ್ದು, ರಕ್ಷಣಾ ಕಾರ್ಯಾಚರಣೆಗೆ ಅತ್ಯುನ್ನತ ಆದ್ಯತೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.ಕಟ್ಟಡ ಕುಸಿತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
