ಢಾಕಾ, ಮೇ.1- ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ಸಮೀಕ್ಷೆಗಳು ನೆರೆಯ ಬಾಂಗ್ಲಾ ದೇಶದಲ್ಲಿ ತಲ್ಲಣ ಸೃಷ್ಟಿಸಿದೆ.ಈ ಬೆಳವಣಿಗೆಯು ಬಾಂಗ್ಲಾದೇಶಕ್ಕೆ ದೊಡ್ಡ ಮಟ್ಟದ ಆರ್ಥಿಕ ಮತ್ತು ಸಾಮಾಜಿಕ ಸವಾಲನ್ನು ತಂದೊಡ್ಡಲಿದೆ ಎಂದು ಬಾಂಗ್ಲಾ ಸಂಸದ ಅಖ್ತರ್ ಹೊಸ್ಸೇನ್ ಕಳವಳ ವ್ಯಕ್ತಪಡಿಸಿದ್ದಾರೆ.
ಅಧಿವೇಶನದಲ್ಲಿ ಮಾತನಾಡಿದ ಅವರು, ಈ ಎಕ್ಸಿಟ್ ಪೋಲ್ ಫಲಿತಾಂಶಗಳನ್ನು ಬಾಂಗ್ಲಾದೇಶಕ್ಕೆ ಬಂದಿರುವ ಎಚ್ಚರಿಕೆಯ ಗಂಟೆ ಎಂದು ಕರೆದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಅಲ್ಲಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಮರಳಿ ಕಳುಹಿಸುವ ಪ್ರಕ್ರಿಯೆ ಆರಂಭವಾಗಬಹುದು. ಇದು ಬಾಂಗ್ಲಾದೇಶದ ಮೇಲೆ ಮತ್ತೊಂದು
ಭೀಕರ ನಿರಾಶ್ರಿತರ ಹೊರೆ ಹೇರಲಿದೆ ಎಂದು ಅವರು ಎಚ್ಚರಿಸಿದ್ದಾರೆ.
ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ರಾಷ್ಟ್ರೀಯ ನಾಗರಿಕರ ನೋಂದಣಿ ಜಾರಿಗೊಳಿಸಿದರೆ ಮತ್ತು ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮ ಕೈಗೊಂಡರೆ ದೊಡ್ಡ ಸಂಖ್ಯೆಯಲ್ಲಿ ಜನರು ಗಡಿ ದಾಟಿ ಬಾಂಗ್ಲಾಕ್ಕೆ ನುಗ್ಗುವ ಸಾಧ್ಯತೆಯಿದೆ. ಈಗಾಗಲೇ ಲಕ್ಷಾಂತರ ರೋಹಿಂಗ್ಯಾ ನಿರಾಶ್ರಿತರಿಗೆ ಆಶ್ರಯ ನೀಡಿ ಹೈರಾಣಾಗಿರುವ ನಮಗೆ ಇದು ಹೊರೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಭಾರತದ ಗಡಿ ರಾಜ್ಯವೊಂದರಲ್ಲಿ ನಡೆಯುವ ರಾಜಕೀಯ ಬದಲಾವಣೆಗಳು ಬಾಂಗ್ಲಾದೇಶದ ಆಂತರಿಕ ಭದ್ರತೆ ಮತ್ತು ಗಡಿ ನಿರ್ವಹಣೆಯ ಮೇಲೆ ನೇರ ಪರಿಣಾಮ ಬೀರಲಿವೆ ಎಂದು ಅವರು ಸಂಸತ್ತಿನಲ್ಲಿ ತಿಳಿಸಿದ್ದಾರೆ.
ಭಾರತದಲ್ಲಿನ ಬಿಜೆಪಿ ನಾಯಕರು ಅಕ್ರಮ ವಲಸಿಗರನ್ನು ಗುರಿಯಾಗಿಸಿಕೊಂಡು ನೀಡಿರುವ ಹೇಳಿಕೆಗಳು ಬಾಂಗ್ಲಾದೇಶದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪಶ್ಚಿಮ ಬಂಗಾಳದ ಗಡಿ ಭಾಗಗಳಲ್ಲಿನ ಜನಸಂಖ್ಯಾ ಬದಲಾವಣೆಯ ಬಗ್ಗೆ ಬಿಜೆಪಿ ದಶಕಗಳಿಂದ ಧ್ವನಿ ಎತ್ತುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ, ಚುನಾವಣಾ ಫಲಿತಾಂಶವು ಒಂದು ವೇಳೆ ಸಮೀಕ್ಷೆಗಳಂತೆಯೇ ಬಂದರೆ, ಅದು ದಕ್ಷಿಣ ಏಷ್ಯಾದ ಭೌಗೋಳಿಕ ರಾಜಕೀಯದ ಮೇಲೆ ಭಾರಿ ಪರಿಣಾಮ ಬೀರುವುದು ಖಚಿತ ಎಂದೇ ವಿಶ್ಲೇಷಿಸಲಾಗುತ್ತಿದೆ.
