Sunday, September 8, 2024
Homeರಾಜ್ಯರಾಜ್ಯದ ಏಳು ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಸ್ಥಾಪನೆ

ರಾಜ್ಯದ ಏಳು ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಸ್ಥಾಪನೆ

ಬೆಳಗಾವಿ ಜೂ 26- ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ತಿಳಿಸಿದ್ದಾರೆ.ಬೆಳಗಾವಿ ಸುವರ್ಣ ಸೌಧ ಸಭಾಂಗಣದಲ್ಲಿ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗ ಮಟ್ಟದ ಸಭೆ ನಡೆಸಿ ಅವರು ಮಾತನಾಡಿದರು.

ಕೃಷಿಕರಿಗೆ ಯೋಜಿತ ತರಬೇತಿ ನೀಡಿ ಸಾಮರ್ಥ್ಯ ಅಭಿವೃದ್ಧಿಗೆ ಕ್ರಮವಹಿಸಲಾಗುತ್ತಿದೆ. ವಿಜಯ ನಗರ ಯಾದಗಿರಿ, ಗದಗ , ಕೋಲಾರ, ಚಾಮರಾಜನಗರ, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ಕೃಷಿ ಹೊಸ ತರಬೇತಿ ಕೇಂದ್ರ ಪ್ರಾರಂಭ ಮಾಡಲಾಗುವುದು ಎಂದರು.

ಇಲಾಖೆಯಲ್ಲಿ ತರಬೇತಿ ಹಾಗೂ ಗುಣ ನಿಯಂತ್ರಣಕ್ಕೆ ಒತ್ತು ನೀಡಲಾಗುತ್ತಿದೆ. ಪ್ರಯೋಗಾಲಯಗಳನ್ನು ಎನ್.ಎ.ಬಿ.ಎಲ್ . ಮಾನ್ಯತೆಗೆ ಒಳಪಡಿಸಲಾಗುವುದು. ಬೈಲಹೊಂಗಲ ಪರತಂತ್ರ ಜೀವಿ ಪ್ರಯೋಗಾಲಯ ಉನ್ನತೀಕರಣಕ್ಕೆ ಕ್ರಮ ವಹಿಸಲಾಗುವುದು ಎಂದರು.

ಕಬ್ಬಿನಲ್ಲಿ ಕೀಟ ನಿಯಂತ್ರಣಕ್ಕೆ ಅವಶ್ಯವಿರುವ ಟ್ರೈಕೋಗ್ರಾಮಾ ಪರತಂತ್ರ ಜೀವಿಯ ಉತ್ಪಾದನೆಯಲ್ಲಿ ನೂತನ ತಾಂತ್ರಿಕತೆ ಅಳವಡಿಕೆಗೆ ಸೂಚಸಿದ ಅವರು, ಮುಂದಿನ 6 ತಿಂಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಿ ರೈತರಿಗೆ ಒದಗಿಸುವಂತೆ ನಿರ್ದೇಶನ ನೀಡಿದರು.

ಪ್ರತಿ ಸಾಲಿನಲ್ಲಿ ಜಿಲ್ಲೆಗೆ ಅವಶ್ಯವಿರುವ ಬಿತ್ತನೆ ಬೀಜವನ್ನು ಆಯಾ ಜಿಲ್ಲೆಗಳ ಬೀಜೋತ್ಪಾದನಾ ಕೇಂದ್ರ ಮತ್ತು ಪ್ರಗತಿಪರ ರೈತರ ಹೊಲದಲ್ಲೇ ಉತ್ಪಾದಿಸುವಂತೆ ಅವರು ತಿಳಿಸಿದರು.ಅಧಿಕಾರಿಗಳು ಪರಸ್ಪರ ಸಮನ್ವಯದಿಂದ, ಜವಾಬ್ದಾರಿಯುತವಾಗಿ ಕೆಲಸ ಮಾಡಿ ಎಂದು ಸಚಿವರು ಸೂಚಿಸಿದರು.

ಬಿತ್ತನೆ ಬೀಜ ರಸಗೊಬ್ಬರಗಳನ್ನು ಬೇಡಿಕೆಗಿಂತಲೂ ಹೆಚ್ಚು ಸರಬರಾಜು ಮಾಡಲಾಗಿದೆ. ಗೊಂದಲ ಇಲ್ಲದಂತೆ ವಿತರಣೆಮಾಡಿ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೆರವನ್ನೂ ಪಡೆಯಿರಿ ಎಂದು ನಿರ್ದೇಶನ ನೀಡಿದರು. ರೈತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಹೊಸ ಆವಿಷ್ಕಾರ, ವಿಜ್ಞಾನ, ತಂತ್ರಜ್ಞಾನಗಳ ಬಗ್ಗೆ ಅರಿವು ಮೂಡಿಸಿ, ಕೃಷಿ ಜಮೀನುಗಳಿಗೆ ಅವುಗಳನ್ನು ವರ್ಗಾವಣೆ ಮಾಡಿ ಎಂದು ತಿಳಿಸಿದರು.

ಬೆಳೆ ವಿಮೆ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ, ನೋಂದಣಿ ಜಾಸ್ತಿ ಮಾಡಿ, ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಗೆ ಗಮನ ಹರಿಸಿ. ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಿ ಎಂದು ಸಲಹೆ ನೀಡಿದರು.ಹೈಟೆಕ್ ಹಾರ್ವೆಸ್ಟ್ ಹಬ್, ಕೃಷಿ ನವೋದ್ಯಮಗಳಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.ಇದರಿಂದಾಗುವ ಪರಿಣಾಮಕಾರಿ ಬದಲಾವಣೆಗಳ ಬಗ್ಗೆ ಕೃಷಿಕರಿಗೆ ಮಾಹಿತಿ ನೀಡಿ ಎಂದು ಅವರು ಹೇಳಿದರು.

ಸುಸ್ಥಿರ, ಸಮಗ್ರ ಕೃಷಿ ಬಗ್ಗೆ ತರಬೇತಿ, ಮಾರ್ಗದರ್ಶನ ನೀಡಿ ಬಜೆಟ್ನಲ್ಲಿ ಘೋಷಿಸಿರುವ ಎಲ್ಲಾ ಯೋಜನೆಗಳನ್ನು ಶೀಘ್ರದಲ್ಲೇ ಅನುಷ್ಠಾನಗೊಳಿಸಿ ಎಂದು ನಿರ್ದೇಶನ ನೀಡಿದರು.ಕೃಷಿ ಆಯುಕ್ತ ವೈ.ಎಸ್.ಪಾಟೀಲ್, ಜಲಾನಯನ ಇಲಾಖೆ ಆಯುಕ್ತ ಗಿರೀಶ್, ನಿರ್ದೇಶಕ ಪದ್ಮಯ್ಯ ನಾಯಕ್, ಕೃಷಿ ನಿರ್ದೇಶಕ ಡಾ. ಜಿ.ಟಿ ಪುತ್ರ, ಅಪರ ನಿರ್ದೇಶಕ ವೆಂಕಟರಮಣ ರೆಡ್ಡಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

RELATED ARTICLES

Latest News