ಬೆಂಗಳೂರು, ಜೂ.6- ನಿನ್ನೆ ತಡರಾತ್ರಿ ನಗರ ಪೊಲೀಸ್ ಆಯುಕ್ತರಾಗಿ ಜವಾಬ್ದಾರಿ ವಹಿಸಿಕೊಂಡ ಸೀಮಂತ್ ಕುಮಾರ್ ಸಿಂಗ್ ಇಂದು ಬೆಳಿಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹಸಚಿವರನ್ನು ಭೇಟಿ ಮಾಡಿದ್ದಾರೆ.
ಈವರೆಗೂ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ ಅಮಾನತುಗೊಂಡಿದ್ದು, ಸಂಕೀರ್ಣ ಪರಿಸ್ಥಿತಿಯಲ್ಲಿ ರಾಜ್ಯಸರ್ಕಾರ ತೆಗೆದುಕೊಂಡ ಆಚಾನಕ್ ನಿರ್ಧಾರದಿಂದ ನಿನ್ನೆ ರಾತ್ರಿಯಷ್ಟೇ ಸೀಮಂತ್ಕುಮಾರ್ ಸಿಂಗ್ ಪೊಲೀಸ್ ಆಯುಕ್ತರಾಗಿ ನಿಯೋಜಿತರಾಗಿದ್ದಾರೆ.
ಅಧಿಕಾರ ಸ್ವೀಕರಿಸಿದ ಅವರು, ತತ್ಕ್ಷಣದಿಂದಲೇ ಕಾರ್ಯ ಆರಂಭಿಸಿದರು. ರಾತ್ರಿಯೇ ನಗರದಲ್ಲಿ ಕೆಲ ಪ್ರದೇಶಗಳಲ್ಲಿ ಆಯುಕ್ತರು ಗಸ್ತು ನಡೆಸಿದರು. ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಮನೆಗೆ ಭೇಟಿ ನೀಡಿದರು. ಅದಕ್ಕೂ ಮುನ್ನ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಆಯುಕ್ತರು ತುರ್ತು ಸಭೆ ನಡೆಸಿದರು.
ನಗರದಲ್ಲಿ ಇತ್ತೀಚೆಗೆ ರೌಡಿ ಚಟುವಟಿಕೆಗಳು ತಲೆ ಎತ್ತಿದ್ದು ಸಾರ್ವಜನಿಕವಾಗಿ ಮಾರಕ ಆಯುಧಗಳ ಪ್ರದರ್ಶನ, ಅಮಾಯಕರು ಹಾಗೂ ಅಂಗಡಿ ಮುಗ್ಗಟ್ಟುಗಳ ಮೇಲೆ ದಾಳಿಯಂತಹ ಪ್ರಕರಣಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.
ಇಂತಹ ಚಟುವಟಿಕೆಗಳನ್ನು ಮಟ್ಟ ಹಾಕಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಭದ್ರವಾಗಿಡಬೇಕು. ಬಕ್ರೀದ್ ಆಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪ್ರತಿಯೊಂದು ಸಂದರ್ಭದಲ್ಲೂ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕೆಂದು ನೂತನ ಪೊಲೀಸ್ ಆಯುಕ್ತರು ತಮ್ಮ ಸಹದ್ಯೋಗಿಗಳಿಗೆ ಸೂಚನೆ ನೀಡಿದ್ದಾಗಿ ತಿಳಿದುಬಂದಿದೆ.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸೀಮಂತ್ ಕುಮಾರ್ ಸಿಂಗ್, ಪೊಲೀಸ್ ಕೆಲಸ ಸದಾಕಾಲ ಸವಾಲಿನದ್ದಾಗಿದೆ. ಈವರೆಗೂ ಎಲ್ಲರೂ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಪೊಲೀಸ್ ಸಿಬ್ಬಂದಿಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ನಗರಕ್ಕೆ ಉತ್ತಮ ಪೊಲೀಸಿಂಗ್ ನೀಡುವುದಾಗಿ ತಿಳಿಸಿದ್ದಾರೆ.
ಈಗಷ್ಟೇ ನಾನು ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಎಲ್ಲಾ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದೆ ಯಾವ ರೀತಿ ಹೆಜ್ಜೆಯಿಡಬೇಕು ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ. ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ದುರಂತಕ್ಕೆ ಸಂಬಂಧಪಟ್ಟಂತೆ ಎಫ್ಐಆರ್ಗಳು ದಾಖಲಾಗಿವೆ. ತನಿಖಾ ತಂಡ ಇಡೀ ರಾತ್ರಿ ಕೆಲಸ ಮಾಡಿ ಕಾರ್ಯಾಚರಣೆ ನಡೆಸಿದೆ. ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ದಾಖಲಾಗಿರುವ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸುವ ಮೊದಲು ನಮ್ಮ ಕೆಲಸವನ್ನು ನಾವು ಮಾಡುತ್ತೇವೆ. ಈಗಾಗಲೇ ತಂಡ ರಚನೆಯಾಗಿದೆ ಎಂದು ಹೇಳಿದರು.