ಬೆಂಗಳೂರು, ಮಾ.7- ಕರ್ನಾಟಕದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ಹೊಸ ಐಟಿ ನೀತಿಯನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಜೆಟ್ ಭಾಷಣದಲ್ಲಿ ಕೌಡ್ ಕಂಪ್ಯೂಟಿಂಗ್ ಮತ್ತು ನೂತನ ತಂತ್ರಜ್ಞಾನಗಳ ಅಭಿವೃದ್ಧಿಗೆ ಒತ್ತು ನೀಡುವುದರ ಜೊತೆ ಶ್ರೇಣಿ 2 ಮತ್ತು ಶ್ರೇಣಿ 3 ನಗರಗಳಿಗೂ ಮಾಹಿತಿ ತಂತ್ರಜ್ಞಾನ
ಕ್ಷೇತ್ರ ವಿಸ್ತರಿಸಿ ರಾಜ್ಯವನ್ನು ಜಾಗತಿಕ ತಂತ್ರಜ್ಞಾನ ಕೇಂದ್ರವಾಗಿ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಮುಂದಿನ 5 ವರ್ಷಗಳಲ್ಲಿ 50 ಕೋಟಿ ರೂ. ಹೂಡಿಕೆ ಮಾಡಲಾಗುವುದು. ಇದಲ್ಲದೆ ಸೆಂಟ್ ಫಾರ್ ಅಪ್ರೈಡ್ ಎಐ ಫಾರ್ ಟೆಕ್ ಸೆಲ್ಯೂಷನ್ಸ್ (ಕಾಟ್ಸ್) ಸ್ಥಾಪಿಸಲಾಗುವುದು ಎಂದಿದ್ದಾರೆ. ಬೆಂಗಳೂರಿನ ಐಎಎಸ್ಸಿ ಸಹಯೋಗದೊಂದಿಗೆ ಕ್ವಾಂಟಮ್ ರಿಸರ್ಚ್ ಫಾರ್ ಹಂತ-2 ಅನ್ನು 48 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಜೈವಿಕ ತಂತ್ರಜ್ಞಾನ ನೀತಿ ಎಂಎಸ್ಎಂಇ ಮತ್ತು ದೊಡ್ಡ ಉದ್ಯಮದಲ್ಲಿ 1,500 ಕೋಟಿ ರೂ. ಹೂಡಿಕೆಯನ್ನು ಆಕರ್ಷಿಸುವ ಉದ್ದೇಶ ಹೊಂದಲಾಗಿದ್ದು, ಇದಕ್ಕಾಗಿ 220 ಕೋಟೆ ರೂ. ಪ್ರೋತ್ಸಾಹ ನೀಡಲಾಗುವುದು. ಬೆಂಕಿ ಅನಾಹುತಗಳನ್ನು ತಪ್ಪಿಸಲು ಬೆಂಗಳೂರಿನಲ್ಲಿ ಬಯೋ ಇನ್ನೋವೇಷನ್ ಸೆಂಟರ್ನ ಪುನರ್ ನಿರ್ಮಾಣಕ್ಕೆ 57 ಕೋಟಿ ರೂ. ನೆರವು ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 20 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.
ಜಾಗತಿಕ ಸಾಮರ್ಥ್ಯ ಕೇಂದ್ರಗಳ ವಲಯವನ್ನು ಮತ್ತಷ್ಟು ಬಲಪಡಿಸಲು ಕಿಯೋನಿಕ್ಸ್ ಮೂಲಕ ಗ್ಲೋಬಲ್ ಇನ್ನೋವೇಷನ್ ಡಿಸ್ಟ್ರಿಕ್ಟ್ ಅನ್ನು ಮೈಸೂರು, ಬೆಳಗಾವಿ, ಧಾರವಾಡ ಮತ್ತು ಬೆಂಗಳೂರಿನಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಕೋಲಾರ, ರಾಮನಗರ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಿ ಪ್ರಸಕ್ತ ಸಾಲಿನಲ್ಲಿ 9 ಕೋಟಿ ನೀಡಲಾಗುವುದು. ಎಲೆಕ್ಟ್ರಾನಿಕ್ಸ್ ಉತ್ಪಾದನೆಗೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸಲು ಮೈಸೂರಿನಲ್ಲಿ 150 ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ ಪಾರ್ಕ್ ಅಭಿವೃದ್ಧಿಪಡಿಸಲಾಗುವುದು ಎಂದು ಘೋಷಿಸಿದ್ದಾರೆ.
ಸಂಶೋಧನೆ, ಕೌಶಲ್ಯ ಮತ್ತು ಪರಿಸರ ವ್ಯವಸ್ಥೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಸೆನ್ಸಾರ್ಟೆಕ್ ಇನ್ನೋವೇಷನ್ ಹಬ್ ಅನ್ನು 99 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ. ಕಿಯೋನಿಕ್ಸ್ ಮೂಲಕ ಮಂಗಳೂರು, ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ಪ್ಲಗ್ ಅಂಡ್ ಪ್ಲೇ ಸೌಲಭ್ಯಗಳನ್ನೊಳಗೊಂಡ 3 ಹೊಸ ಜಾಗತಿಕ ತಂತ್ರಜ್ಞಾನ ಕೇಂದ್ರ ಸ್ಥಾಪಿಸಲಾಗುವುದು ಎಂದರು.