ಬೆಂಗಳೂರು, ಫೆ.14- ಹೊಸ ಪಡಿತರ ಚೀಟಿಯನ್ನು ವಿತರಿಸುವ ಕಾರ್ಯ ಜಾರಿಯಲ್ಲಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ವಿಧಾನಸಭೆಗಿಂದು ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಶಾಸಕ ಎಂ.ವಿ.ವೀರಭದ್ರಯ್ಯಅವರ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಉತ್ತರಿಸಿದ ಸಚಿವರು, ಆದ್ಯತಾ ಪಡಿತರ ಚೀಟಿಯನ್ನು ಕೋರಿ ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಹ ಕುಟುಂಬಗಳ ವಾಸಸ್ಥಳ ಪರಿಶೀಲನೆ ಕೈಗೊಂಡು ಹೊಸ ಆದ್ಯತಾ ಪಡಿತರ ಚೀಟಿ ನೀಡಲಾಗುತ್ತಿದೆ ಎಂದರು.
ಮಧುಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ಆದ್ಯತಾ ಪಡಿತರ ಚೀಟಿಗಾಗಿ 2524 ಅರ್ಜಿಗಳು ಸಲ್ಲಿಕೆಯಾಗಿದ್ದು, 1845 ಅರ್ಜಿಗಳು ವಿಲೇವಾರಿಯಾಗಿದ್ದು, 679 ಅರ್ಜಿಗಳು ಬಾಕಿ ಉಳಿದಿವೆ.
ಆದ್ಯತೇತರ ಪಡಿತರ ಚೀಟಿಗೆ 348 ಅರ್ಜಿಗಳು ಸಲ್ಲಿಕೆಯಾಗಿದ್ದು, 285 ಅರ್ಜಿ ವಿಲೇವಾರಿ ಆಗಿವೆ. 63 ಅರ್ಜಿಗಳು ಬಾಕಿ ಉಳಿದಿವೆ ಎಂದು ಮಾಹಿತಿ ನೀಡಿದರು.ಮಧುಗಿರಿ ತಾಲ್ಲೂಕಿನಲ್ಲಿ 125 ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸುತ್ತಿವೆ.
ಅಗತ್ಯಕ್ಕೆ ಅನುಗುಣವಾಗಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯುವ ಬಗ್ಗೆ ಕ್ರಮ ಕೈಗೊಳ್ಳಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.