Friday, July 18, 2025
Homeರಾಜ್ಯರೌಡಿ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

ರೌಡಿ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

New twist in the murder case of rowdy Biklu Shiva

ಬೆಂಗಳೂರು,ಜು.17- ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಬರ್ಭರವಾಗಿ ಕೊಲೆಯಾದ ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌‍ ಬಿಕ್ಲುಶಿವ ಪ್ರಕರಣ ಸ್ಫೋಟಕ ತಿರುವು ಪಡೆದಿದ್ದು, ನಾನು ಯಾರ ವಿರುದ್ಧವೂ ದೂರು ಕೊಟ್ಟಿಲ್ಲ ಎಂದು ಅವರ ತಾಯಿಯೇ ಹೇಳಿಕೆ ನೀಡಿದ್ದಾರೆ.

ಈ ಕೊಲೆ ಪ್ರಕರಣದಲ್ಲಿ ಕೆ.ಆರ್‌.ಪುರಂ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್‌ ಅವರನ್ನು ಐದನೇ ಆರೋಪಿಯನ್ನಾಗಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಬಿಕ್ಲುಶಿವು ತಾಯಿ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಹೇಳಲಾಗಿತ್ತು.ಆದರೆ ಇದೀಗ ಅವರ ತಾಯಿಯೇ ಈ ಬಗ್ಗೆ ಸ್ಪಷ್ಟನೆ ನೀಡಿ, ನಾನು ಭೈರತಿ ಬಸವರಾಜ್‌ ಸೇರಿದಂತೆ ಯಾರ ವಿರುದ್ಧವೂ ದೂರು ಕೊಟ್ಟಿಲ್ಲ. ಪೊಲೀಸರು ಅವರ ವಿರುದ್ಧ ಏಕೆ ಎಫ್‌ಐಆರ್‌ ಹಾಕಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.

ನನ್ನ ಮಗನಿಗೆ ಕೆಲವರಿಂದ ಪ್ರಾಣಬೆದರಿಕೆ ಇತ್ತೆಂಬುದು ನಿಜ. ಆದರೆ ಈ ಪ್ರಕರಣಕ್ಕೂ, ಭೈರತಿ ಬಸವರಾಜ್‌ ಅವರಿಗೂ ಯಾವುದೇ ಸಂಬಂಧ ಇಲ್ಲ. ಪೊಲೀಸರೇ ಅವರ ಹೆಸರನ್ನು ಬರೆದುಕೊಂಡಿದ್ದಾರೆ. ನಾನು ಯಾರ ಮೇಲೂ ದೂರು ಕೊಟ್ಟಿಲ್ಲ ಎಂದ ಮೇಲೆ ಹೇಗೆ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಕೇಳಿದರು.

ನನ್ನ ಮಗ ಕೊಲೆಯಾದ ನಂತರ ನಾವು ಚಿಂತಾಕ್ರಾಂತರಾಗಿದ್ದೇವೆ. ಪತ್ನಿ ಹಾಗೂ ಮಕ್ಕಳಿಗೆ ಮುಂದಿನ ಭವಿಷ್ಯವೇನು ಎಂದು ಚಿಂತೆ ಮಾಡುತ್ತಿದ್ದೇವೆ. ಅಂತ್ಯಸಂಸ್ಕಾರ ಹೇಗೆ ನಡೆಸಬೇಕು ಎಂಬುದು ನಮಗೆ ತಿಳಿದಿರಲಿಲ್ಲ. ನಮ ಕುಟುಂಬಕ್ಕೆ ಆಸರೆಯಾದ ಮಗ ಹೋದನೆಂಬ ಚಿಂತನೆ ಇರುವಾಗ ಬೇರೆಯವರ ವಿರುದ್ಧ ದೂರು ಕೊಡುವ ಅಗತ್ಯವಿಲ್ಲ ಎಂದು ತಾಯಿ ಸ್ಪಷ್ಟಪಡಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್‌ ಮಾತನಾಡಿ, ರೌಡಿಶೀಟರ್‌ ಬಿಕ್ಲುಶಿವು ಕೊಲೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ರಾಜಕೀಯ ಷಡ್ಯಂತ್ರದಿಂದ ಈ ರೀತಿ ಏಕೆ ನಡೆದಿದೆ ಎಂಬುದು ತಮಗೂ ಆಶ್ಚರ್ಯವುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನನಗೂ ಬಿಕ್ಲು ಶಿವ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ, ಕೊಲೆಯಾದವನ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ದೂರು ಕೊಟ್ಟ ತಕ್ಷಣ ಏಕಾಏಕಿ ನನ್ನ ವಿರುದ್ಧ ಕೇಸ್‌‍ ದಾಖಲಿಸಿದ್ದಾರೆ. ಈ ಪ್ರಕರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಯಾರೇ ದೂರು ಕೊಟ್ಟರೂ ಎಫ್‌ಐಆರ್‌ ದಾಖಲಿಸಬಹುದಾ? ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದರು.

ಈ ರೀತಿ ಒಬ್ಬರ ತೇಜೋವಧೆ ಮಾಡುವಂಥದ್ದು ಬಹಳ ನೋವಾಗುತ್ತದೆ. ನನ್ನ ಕುರಿತು ಈ ರೀತಿ ಪ್ರಚಾರ ಮಾಡುತ್ತಿರುವುದು ತುಂಬಾ ಬೇಸರ ತರಿಸಿದೆ. ಕ್ಷೇತ್ರದ ಕೆಲಸ ಜನರ ಕೆಲಸ ಬಿಟ್ಟರೆ ಬೇರೆ ಯಾವುದೇ ವ್ಯವಹಾರ ನನಗೆ ಗೊತ್ತಿಲ್ಲ. ಈ ವಿಚಾರಕ್ಕೂ ನನಗೂ ಸಂಬಂಧ ಇಲ್ಲ. ಯಾವುದೇ ಮಾಹಿತಿ ನನಗೆ ಕೇಳದೆ ನನ್ನ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲೆ ಮಾಡುತ್ತಾರೆ. ಯಾರೋ ದೂರು ಕೊಟ್ಟ ತಕ್ಷಣ ನನ್ನ ಮೇಲೆ ಪೊಲೀಸರು ಕೇಸ್‌‍ ದಾಖಲಿಸುತ್ತಾರ? ನನ್ನ ವಿರುದ್ಧ ಯಾರು ಷಡ್ಯಂತ್ರ ಮಾಡಿದ್ದಾರೋ ಅವರ ವಿರುದ್ಧವಾಗಿ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.ಬಿಕ್ಲು ಶಿವ ಬರ್ಭರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಸೇರಿ ಐವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬೆಂಗಳೂರಿನಲ್ಲಿ ಬಿಕ್ಲು ಶಿವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್‌, ಜಗದೀಶ್‌, ವಿಮಲ್‌‍, ಕಿರಣ್‌‍, ಅನಿಲ್‌ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್‌‍ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ರೌಡಿ ಕೊಲೆ ಪ್ರಕರಣದಲ್ಲಿ ಶಾಸಕರ ಹೆಸರು ತಳುಕು : ಎಸಿಪಿ ಹಂತದ ಅಧಿಕಾರಿಯಿಂದ ತನಿಖೆ ರೌಡಿ ಶಿವಪ್ರಕಾಶ್‌ ಕೊಲೆ ಪ್ರಕರಣದಲ್ಲಿ ಕೆಆರ್‌ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ ಅವರ ಹೆಸರು ಕೇಳಿ ಬಂದಿರುವುದರಿಂದ ಅದು ಗಂಭೀರ ಸ್ವರೂಪ ಪಡೆದುಕೊಂಡಿದೆ ಎಂದು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಗಂಭೀರ ಪ್ರಕರಣವಾಗಿರುವುದರಿಂದ ಎಸಿಪಿ ಹಂತದ ಅಧಿಕಾರಿಯಿಂದ ತನಿಖೆ ಮಾಡಿಸಲಾಗುತ್ತಿದೆ ಎಂದು ಹೇಳಿದರು.ಎಫ್‌ಐಆರ್‌ನಲ್ಲಿ ದಾಖಲಾಗಿರುವ ಅಂಶಗಳ ಆಧಾರದ ಮೇಲೆ ತನಿಖೆ ನಡೆಯುತ್ತಿದೆ. ನಗರದ ಇತರ ಪೊಲೀಸ್‌‍ ಠಾಣೆಗಳಲ್ಲಿ ಬಂಧಿತ ಆರೋಪಿಗಳ ಮೇಲೆ ಅಪರಾಧ ಪ್ರಕರಣಗಳು ದಾಖಲಾಗಿದೆಯೇ ಎಂಬ ಅಂಶಗಳನ್ನು ಸಹ ಪರಿಗಣಿಸಲಾಗುತ್ತಿದೆ ಎಂದು ಆಯುಕ್ತರು ತಿಳಿಸಿದರು.

ಈ ಪ್ರಕರಣದಲ್ಲಿ ಐದು ಮಂದಿಯನ್ನು ಭಾರತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಶಾಸಕರಾದ ಭೈರತಿ ಬಸವರಾಜು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸದ್ಯದಲ್ಲೇ ನೋಟೀಸ್‌‍ ನೀಡಲಾಗುವುದೆಂದು ಹಿರಿಯ ಪೊಲೀಸ್‌‍ ಅಧಿಕಾರಿ ಈ ಸಂಜೆಗೆ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ರೌಡಿ ಶಿವಪ್ರಕಾಶ್‌ ಅಲಿಯಾಸ್‌‍ ಬಿಕ್ಲು ಶಿವ ತಮ ಮನೆ ಮುಂದೆ ನಿಂತಿದ್ದಾಗ ಸ್ಕಾರ್ಪಿಯೋ ವಾಹನದಲ್ಲಿ ಬಂದ ಏಳೆಂಟು ಮಂದಿ ದುಷ್ಕರ್ಮಿಗಳು ಅವರ ಮೇಲೆ ಲಾಂಗು, ಮಚ್ಚುಗಳಿಂದ ದಾಳಿ ಮಾಡಿ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದರು. ದಾಳಿಯಿಂದ ಗಂಭೀರ ಗಾಯಗೊಂಡು ತೀವ್ರ ರಕ್ತಸಾವ್ರದಿಂದ ರೌಡಿ ಸಾವನ್ನಪ್ಪಿದ್ದಾನೆ. ಸುದ್ದಿ ತಿಳಿದ ಭಾರತಿನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES

Latest News