ಬೆಂಗಳೂರು, ಮೇ 3– ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಯಾರಿಗೂ ನೆಮದಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ಕೆಎಎಸ್ ಪರೀಕ್ಷೆಗೆ ಸಂಬಂಧಿಸಿದಂತೆ ನೊಂದವರ ದನಿಯಾಗಿ ರಾಜ್ಯ ಬಿಜೆಪಿ ನಿಲ್ಲಲಿದೆ ಎಂದಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗವು ನಡೆಸಿದ ಕೆಎಎಸ್ ಪೂರ್ವಭಾವಿ ಪರೀಕ್ಷೆಯಲ್ಲಿನ ಭಾಷಾಂತರ ಎಡವಟ್ಟಿನಿಂದ ಅನ್ಯಾಯಕ್ಕೊಳಗಾಗಿದ್ದ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿ ಇಂದಿನಿಂದ ಆರಂಭವಾಗಿರುವ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ಪಡೆದಿದ್ದರು. ಆದರೆ, ಮಧ್ಯರಾತ್ರಿ ಅರ್ಜಿ ತುಂಬಿ ಪ್ರವೇಶ ಪತ್ರ ಪಡೆಯುವಂತೆ ಗೊಂದಲ ಸೃಷ್ಟಿಸಿರುವ ಕೆಪಿಎಸ್ಸಿ ಕಾರ್ಯವೈಖರಿ ಪರೀಕ್ಷಾರ್ಥಿಗಳಿಗೆ ಅನಗತ್ಯ ಕಿರುಕುಳ ನೀಡುವ ದುರುದ್ದೇಶವನ್ನು ಪ್ರತಿಬಿಂಬಿಸಿದೆ.
ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳ ಭವಿಷ್ಯದ ಜೊತೆ ಕೆಪಿಎಸ್ಸಿ ಚೆಲ್ಲಾಟವಾಡುತ್ತಿದ್ದರೆ ರಾಜ್ಯ ಸರ್ಕಾರ ಕಣ್ಣುಮುಚ್ಚಿಕೊಂಡು ನೋಡುತ್ತಿದೆ ಎಂದು ಟೀಕಿಸಿದ್ದಾರೆ.ಮೇ 2ರ ಮಧ್ಯರಾತ್ರಿ 12 ಗಂಟೆಯವರೆಗೆ ಕೆಪಿಎಸ್ಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಮಧ್ಯರಾತ್ರಿ ಹಾಲ್ ಟಿಕೆಟ್ ಪಡೆದು, ಮರುದಿನ ಬೆಳಗ್ಗೆಯೇ ಪರೀಕ್ಷಾ ಕೇಂದ್ರಕ್ಕೆ ಹೋಗಿ ಪರೀಕ್ಷೆ ಬರೆಯುವಂತೆ ಮಾಡಿರುವ ಗೊಂದಲದ ವ್ಯವಸ್ಥೆಯಿಂದ ಹಿಂಸೆ ಅನುಭವಿಸುತ್ತಿರುವ ಪರೀಕ್ಷಾರ್ಥಿಗಳು ಹಾಗೂ ಅವರ ಕುಟುಂಬದವರ ಶಾಪ ರಾಜ್ಯ ಸರ್ಕಾರಕ್ಕೆ ತಟ್ಟದೇ ಬಿಡದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ಕನ್ನಡ ಮಾಧ್ಯಮ ಅಭ್ಯರ್ಥಿಗಳ ಹಿತಾಸಕ್ತಿ ಕಾಪಾಡುವುದಾಗಿ ಸ್ವತಃ ಮುಖ್ಯಮಂತ್ರಿಗಳೇ ಮಾತು ಕೊಟ್ಟು, ಪರೀಕ್ಷಾರ್ಥಿಗಳಿಗೆ ನ್ಯಾಯ ಒದಗಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.