ಬೆಂಗಳೂರು, ಏ.28-ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ, ಮುಖ್ಯಮಂತ್ರಿ ಗಾದಿಗಾಗಿ ಪೈಪೋಟಿ ನಡೆಯುತ್ತಿರುವ ಸಂದರ್ಭದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಂದೇ ಕಾರಿನಲ್ಲೇ ವಿಧಾನಸೌಧಕ್ಕೆ ಇಂದು ಆಗಮಿಸಿ ತೀವ್ರ ಕುತೂಹಲ ಕೆರಳಿಸಿದರು.
ಲೋಕಭವನದಲ್ಲಿ ನೂತನವಾಗಿ ನಿರ್ಮಿಸಿರುವ ನವೀಕೃತ ಸ್ವಾಗತ ಕೇಂದ್ರ ಮತ್ತು ಕಾಮಧೇನು ಲೋಕ ಗೋಶಾಲೆಯ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಇಬ್ಬರೂ ನಾಯಕರು ಅಲ್ಲಿಂದ ಒಂದೇ ಕಾರಿನಲ್ಲಿ ವಿಧಾನಸೌಧಕ್ಕೆ ಆಗಮಿಸಿದರು.
ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಯವರ ಕೊಠಡಿಯಲ್ಲಿ ಇಬ್ಬರೂ ನಾಯಕರು ಕೆಲ ಕಾಲ ಸಮಾಲೋಚನೆ ನಡೆಸಿದ್ದು, ತೀವ್ರ ಕುತೂಹಲವನ್ನುಂಟು ಮಾಡಿತು. ಯಾವ ವಿಚಾರದ ಬಗ್ಗೆ ಇಬ್ಬರೂ ನಾಯಕರು ಮಾತುಕತೆ ನಡೆಸಿದರು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.
ಬಳಿಕ ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮುಖ್ಯ ಮಾಹಿತಿ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ ಆಯ್ಕೆ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಭಾಗವಹಿಸಿದ್ದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಆಪ್ತರು ಹಾಗೂ ಉಪ ಮುಖ್ಯಮಂತ್ರಿ ಆಪ್ತರು ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡುತ್ತಿದ್ದಾರೆ. ಅಲ್ಲದೆ, ಸಂಪುಟ ಪುನಾರಚನೆಗೂ ಶಾಸಕರು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಹೈ ಕಮಾಂಡ್ನಿಂದ ಸ್ಪಷ್ಟ ಸಂದೇಶ ರವಾನೆಯಾಗದಿರುವುದು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.
ಈ ನಡುವೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಒಂದೇ ಕಾರಿನಲ್ಲಿ ಜೊತೆಯಲ್ಲೇ ವಿಧಾನಸೌಧಕ್ಕೆ ಆಗಮಿಸುವ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲವನ್ನು ಹೆಚ್ಚಿಸಿದ್ದಾರೆ.
