Wednesday, December 3, 2025
Homeರಾಜಕೀಯಸಿಎಂ ಕುರ್ಚಿ ಖಾಲಿ ಇಲ್ಲ : ಸತೀಶ್‌ ಜಾರಕಿಹೊಳಿ ಹೇಳಿಕೆಗೆ ಎಂ.ಬಿ.ಪಾಟೀಲ್‌ ಕಿಡಿ ತಿರುಗೇಟು

ಸಿಎಂ ಕುರ್ಚಿ ಖಾಲಿ ಇಲ್ಲ : ಸತೀಶ್‌ ಜಾರಕಿಹೊಳಿ ಹೇಳಿಕೆಗೆ ಎಂ.ಬಿ.ಪಾಟೀಲ್‌ ಕಿಡಿ ತಿರುಗೇಟು

CM's chair not vacant: M.B. Patil hits back at Satish Jarkiholi's statement

ಬೆಂಗಳೂರು, ಡಿ.3- ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡುವುದು ಪಕ್ಕಾ ಎಂದು ಆಪ್ತ ಬಣದಲ್ಲಿರುವ ಸತೀಶ್‌ ಜಾರಕಿಹೊಳಿ ಅವರೇ ಹೇಳಿದ ಹೊರತಾಗಿಯೂ, ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್‌ ಅಪ್ಪಸ್ವರ ತೆಗೆದಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸತೀಶ್‌ ಜಾರಕಿಹೊಳಿ ಹೇಳಿರಬಹುದು. ಆದರೆ ಯಾವಾಗ ಎಂಬ ಪ್ರಶ್ನೆ ಉದ್ಭವಿಸಿದೆ ಎಂದು ವ್ಯತಿರಿಕ್ತವಾಗಿ ಮಾತನಾಡಿದ್ದಾರೆ.

ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಎರಡು ಬಾರಿ ಉಪಾಹಾರಕೂಟ ನಡೆಸಿದ್ದಾರೆ. ಅಲ್ಲಿಗೆ ಎಲ್ಲವೂ ಬಗೆಹರಿದಿದೆ. ಕಾಂಗ್ರೆಸ್‌‍ ಶಾಸಕರು ದೆಹಲಿಗೆ ಭೇಟಿ ನೀಡಿದ್ದು ಸಚಿವ ಸ್ಥಾನ ಕೇಳಲಿಕ್ಕಾಗಿ. ಅದನ್ನು ನಾಯಕತ್ವ ಬದಲಾವಣೆಗಾಗಿ ನಡೆದ ಯಾತ್ರೆ ಎಂದು ಮಾಧ್ಯಮಗಳು ಬಿಂಬಿಸುತ್ತಿವೆ. ಎಲ್ಲಾ ರಾಜಕೀಯ ಗೊಂದಲಗಳು ಮಾಧ್ಯಮಗಳ ಸೃಷ್ಟಿಯಾಗಿದೆ ಎಂದು ಆಕ್ಷೇಪಿಸಿದರು.

ಗೃಹಸಚಿವ ಡಾ.ಜಿ.ಪರಮೇಶ್ವರ್‌, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸಭೆ ನಡೆಸಿರುವುದರಲ್ಲಿ ತಪ್ಪೇನೂ ಇಲ್ಲ. ನಾನು ಮತ್ತು ಸತೀಶ್‌ ಜಾರಕಿಹೊಳಿ ಹಾಗೂ ಪರಮೇಶ್ವರ್‌ ಹಲವಾರು ಬಾರಿ ಸಭೆ ನಡೆಸಿದ್ದೇವೆ ಎಂದರು.

ನಿನ್ನೆ ಮುಖ್ಯಮಂತ್ರಿ ಅವರನ್ನು ನಾನು ಭೇಟಿ ಮಾಡಿದ್ದೆ. ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಬಳಿ ಕೆಲಸ ಇದೆ. ಅವರ ಭೇಟಿಗೆ ಪ್ರಯತ್ನಿಸುತ್ತಿದ್ದೇನೆ ಎಂದರು. ಅಧಿಕಾರ ಬಿಟ್ಟು ಕೊಡುವ ಬಗ್ಗೆ ಸಿದ್ದರಾಮಯ್ಯ ಮಾತು ಕೊಟ್ಟಿರುವ ಕುರಿತು ತಮಗೆ ಮಾಹಿತಿ ಇಲ್ಲ. ಹೈಕಮಾಂಡ್‌ ನಾಯಕರೇ ಈ ಬಗ್ಗೆ ಹೇಳಿಕೆ ನೀಡಬೇಕು ಎಂದು ನುಡಿದರು.

ಮುಖ್ಯಮಂತ್ರಿ ಹುದ್ದೆಯಂತೂ ಸದ್ಯಕ್ಕೆ ಖಾಲಿ ಇಲ್ಲ. ಜನವರಿ ವೇಳೆಗೆ ನಾಯಕತ್ವ ಬದಲಾವಣೆಯಾಗಲಿದೆ ಎಂಬುದು ಮಾಧ್ಯಮಗಳ ಊಹೆ. ನಮಲ್ಲಿ ಅಂತಹ ಚರ್ಚೆಗಳು ನಡೆದಿಲ್ಲ. ನಮಲ್ಲಿ ಶಾಸಕರು, ಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಎಲ್ಲರೂ ಒಟ್ಟಾಗಿದ್ದೇವೆ ಎಂದರು.ಮುಖ್ಯಮಂತ್ರಿ ಹುದ್ದೆಗೆ ತಾವು ಆಕಾಂಕ್ಷಿಯಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಪುನರುಚ್ಚರಿಸಿದರು.

ಉಪಾಹಾರ ಕೂಟದ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ನಮ ಮನೆಗೂ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರನ್ನು ಊಟಕ್ಕೆ ಕರೆಯುತ್ತೇನೆ. ಅದರಲ್ಲಿ ತಪ್ಪೇನಿದೆ ಎಂದರು. ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ಕಾಂಗ್ರೆಸ್‌‍ ಪಕ್ಷಕ್ಕೆ ಹಾನಿಯಾಗಲಿದೆ ಎಂಬುದು ಊಹಾತಕವಾದ ಚರ್ಚೆ. ಎಲ್ಲದಕ್ಕೂ ರಾಜಕೀಯ ತಳುಕು ಹಾಕಲಾಗುತ್ತಿದೆ. ದೆಹಲಿಯಲ್ಲಿ ಚಳಿಗಾಲದ ಸಂಸತ್‌ ಅಧಿವೇಶನದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಸಭೆ ನಡೆಸಿದ್ದಾರೆ. ಅದಕ್ಕೂ ಕರ್ನಾಟಕ ರಾಜಕಾರಣವನ್ನು ಜೋಡಿಸಲಾಗಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.

ಮನೆ ಎಂದ ಮೇಲೆ ಸಣ್ಣ ಗೊಂದಲಗಳು ಸಹಜ. ಅದನ್ನು ಬಗೆಹರಿಸಿಕೊಳ್ಳುತ್ತೇವೆ. ಬಿಜೆಪಿಯಲ್ಲಿ ವಿಜಯೇಂದ್ರ, ಆರ್‌.ಅಶೋಕ್‌, ವಿ.ಸೋಮಣ್ಣ, ರಮೇಶ್‌ ಜಾರಕಿಹೊಳಿ, ಡಾ.ಸಿ.ಎನ್‌ ಅಶ್ವಥ್ ನಾರಾಯಣ, ಪ್ರಹ್ಲಾದ್‌ ಜೋಷಿ ಸೇರಿದಂತೆ 20ಕ್ಕೂ ಹೆಚ್ಚು ಬಾಗಿಲುಗಳಿವೆ. ಒಮೆ ಅದನ್ನು ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್‌‍ ಪಕ್ಷದಲ್ಲಿ ಲಿಂಗಾಯತ, ಒಕ್ಕಲಿಗ, ಅಹಿಂದ ಎಂಬ ಚರ್ಚೆಗಳಿಲ್ಲ. ಕಾಂಗ್ರೆಸ್‌‍ ಸಮುದಾಯವೇ ಒಂದು ವರ್ಗ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.ಡಿ.ಕೆ.ಶಿವಕುಮಾರ್‌ ಬೆಂಬಲಿಗರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಘೋಷಣೆ ಕೂಗಿರುವುದರಲ್ಲಿ ತಪ್ಪಿಲ್ಲ. ಎಲ್ಲಾ ಬೆಂಬಲಿಗರಿಗೂ ತಮ ನಾಯಕರಿಗೆ ಅವಕಾಶಗಳು ಸಿಗಬೇಕು ಎಂಬ ಅಭಿಲಾಷೆಗಳಿರುತ್ತವೆ, ಅದಕ್ಕಾಗಿ ಘೋಷಣೆ ಕೂಗುತ್ತಾರೆ. ಅದು ಮುಖ್ಯ ಅಲ್ಲ. ನಮಲ್ಲಿ ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ ಎಂದರು.

ಕಾಂಗ್ರೆಸ್‌‍ ಹೈಕಮಾಂಡ್‌ ಬಲಿಷ್ಠವಾಗಿದೆ. ಕಾಲಕಾಲಕ್ಕೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ರಾಜಕೀಯದ ಎಲ್ಲಾ ಬೆಳವಣಿಗೆಗಳ ಮೇಲೂ ನಿಗಾ ಇಟ್ಟಿದೆ. ರಾಜಕೀಯ ಶಾಶ್ವತ ಅಲ್ಲ ಎಂದು ಸಿದ್ದರಾಮಯ್ಯ ಹೇಳಿರುವುದು ಸರಿ ಇದೆ. ಜೀವವೇ ಶಾಶ್ವತ ಅಲ್ಲ ಅಲ್ಲವೇ ಎಂದು ಮರು ಪ್ರಶ್ನಿಸಿದರು.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರು ಉಪಾಹಾರಕೂಟ ನಡೆಸಿದ್ದರಿಂದಾಗಿ ಎಲ್ಲಾ ಗೊಂದಲಗಳು ಬಗೆಹರಿದಿವೆ. ಹೈಕಮಾಂಡ್‌ ಪ್ರತ್ಯೇಕವಾಗಿ ಹೇಳುವ ಅಗತ್ಯ ಏನಿದೆ ಎಂದು ಪ್ರಶ್ನಿಸಿದರು. ತಮ ವಿದೇಶ ಪ್ರವಾಸದ ಬಗ್ಗೆ ಇದೇ ವೇಳೆ ಮಾಹಿತಿ ನೀಡಿದ ಎಂ.ಬಿ.ಪಾಟೀಲ್‌, ವಿದೇಶದಲ್ಲಿ ಹಲವಾರು ಪ್ರಮುಖ ಉದ್ದಿಮೆದಾರರನ್ನು ಭೇಟಿ ಮಾಡಿದ್ದೇನೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಅವರು ಆಸಕ್ತಿ ತೋರಿಸಿದ್ದಾರೆ. ವಾಣಿಜ್ಯವಲಯದಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ ಎಂದರು.

RELATED ARTICLES

Latest News