ಬೆಂಗಳೂರು, ಜ.18- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ನಿಂದ ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ.ದೇವೇಗೌಡರ ಬದಲಿಗೆ ಮಾಜಿ ಸಚಿವ ಸಾ.ರಾ.ಮಹೇಶ್ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಮಾಡುವಂತೆ ಮೈಸೂರಿನ ಜೆಡಿಎಸ್ ಮುಖಂಡರು ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯಾಗಿ ಸಾ.ರಾ.ಮಹೇಶ್ ಅವರನ್ನು ಕಣಕ್ಕಿಳಿಸಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಮನವಿ ಮಾಡಲಿದ್ದಾರೆ. ಸಾ.ರಾ.ಮಹೇಶ್ ಅವರು ಕೂಡ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆಗೆ ಒಪ್ಪಿದ್ದಾರೆ ಎನ್ನಲಾಗಿದೆ.
ಅಂತರ ಕಾಯ್ದುಕೊಂಡು ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ಜಿ.ಟಿ.ದೇವೇಗೌಡ ಅವರನ್ನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಬಾರದು ಎಂದು ಮೈಸೂರು ಜಿಲ್ಲಾ ಜೆಡಿಎಸ್ ಮುಖಂಡರು ಕೋರಲಿದ್ದಾರೆ.ಹಾಸನದಲ್ಲಿ ನಡೆಸಲಿರುವ ಜೆಡಿಎಸ್ ಸಮಾವೇಶದ ಪೂರ್ವ ಸಿದ್ಧತೆ ಕುರಿತಂತೆ ದೇವೇಗೌಡರ ನೇತೃತ್ವದಲ್ಲಿಂದು ಪದನಾಭನಗರದ ಗೌಡರ ನಿವಾಸದಲ್ಲಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ಮೈಸೂರು ಜಿಲ್ಲೆಯ ಮುಖಂಡರು ತಮ ಕೋರಿಕೆಯನ್ನು ಪ್ರಸ್ತಾಪಿಸಲಿದ್ದಾರೆ.
ವಿಧಾನ ಪರಿಷತ್ತಿನ ಜೆಡಿಎಸ್ ಸದಸ್ಯ ಮಂಜೇಗೌಡ ಅವರು ಚಾಮುಂಡೇಶ್ವರಿ ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಮಾಡುವ ವಿಚಾರವನ್ನು ದೇವೇಗೌಡರ ಮುಂದೆ ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ. ವಿಧಾನಸಭೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಶಾಸಕ ಸಿ.ಬಿ.ಸುರೇಶ್ಬಾಬು ಅವರನ್ನು ಆಯ್ಕೆ ಮಾಡಿದ ನಂತರ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿದ್ದ ಜಿ.ಟಿ.ದೇವೇಗೌಡರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಲ್ಲದೆ, ಪಕ್ಷದ ಸಭೆ, ಕಾರ್ಯಕ್ರಮಗಳಿಂದಲೂ ದೂರ ಉಳಿದಿದ್ದರು. ಕ್ಷೇತ್ರದ ಕಾರ್ಯಕ್ರಮಗಳಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದರು.
