ಬೆಂಗಳೂರು, ಜ.16- ವಿದೇಶಿ ಪ್ರವಾಸದಿಂದ ವಾಪಸ್ಸಾದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.ನಗರದ ಶಿವಾನಂದ ವೃತ್ತದ ಬಳಿ ಹೆಚ್.ಸಿ. ಮಹದೇವಪ್ಪ ಮತ್ತು ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸಗಳು ಅಕ್ಕಪಕ್ಕದಲ್ಲಿವೆ. ಇಬ್ಬರು ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ ಬಣದಲ್ಲಿ ಗುರುತಿಸಿಕೊಂಡಿದ್ದಾರೆ.
ಒಂದು ವಾರದಿಂದ ದಕ್ಷಿಣ ಆಫ್ರಿಕಾದ ಪ್ರವಾಸದಲ್ಲಿದ್ದ ಸತೀಶ್ ಜಾರಕಿಹೊಳಿ ಬೆಂಗಳೂರಿಗೆ ವಾಪಾಸ್ಸಾಗಿದ್ದಾರೆ. ಇಂದು ಬೆಳಿಗ್ಗೆ ಮಹದೇವಪ್ಪ ಅವರು, ಜಾರಕಿಹೊಳಿಯವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಸಂದರ್ಭದಲ್ಲಿ, ಇತ್ತ ಬೆಂಗಳೂರಿನಲ್ಲಿ ಮಹದೇವಪ್ಪ ಮತ್ತು ಸತೀಶ್ ಜಾರಕಿಹೊಳಿಯವರ ಭೇಟಿ ಗಮನ ಸೆಳೆದಿದೆ.
ಸಿದ್ದರಾಮಯ್ಯ ಅವರು 5 ವರ್ಷ ಮುಖ್ಯಮಂತ್ರಿಯಾಗಿರಬೇಕು. ಯಾವುದೇ ಕಾರಣಕ್ಕೂ ಅಧಿಕಾರ ಬದಲಾವಣೆಯಾಗಬಾರದು ಎಂದು ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ ಪದೇ ಪದೇ ಪ್ರತಿಪಾದಿಸುತ್ತಿದ್ದಾರೆ.
ಡಿ.ಕೆ.ಶಿವಕುಮಾರ್ ತಮ ಹಠ ಬಿಡದೆ ದೆಹಲಿ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ. ಈ ಹಂತದಲ್ಲಿ ಇಬ್ಬರು ನಾಯಕರ ಭೇಟಿ ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ.
