ಬೆಂಗಳೂರು ಜ.18- ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರವಾಗಿ ಪ್ರಬಲವಾದ ಮಂಡಿಸುತ್ತಿರುವ ಶಾಸಕ ಬಸವರಾಜ್ ಶಿವಗಂಗಾ ಅವರ ಸ್ವಕ್ಷೇತ್ರ ಚನ್ನಗಿರಿಯಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಸಚಿವ ಸತೀಶ್ ಜಾರಕಿಹೊಳಿ ಅವರೇ ಮುಂದಿನ ಸಿಎಂ ಎಂಬ ಘೋಷಣೆ ಕೂಗಲಾಗಿದೆ.
ನಾಯಕತ್ವ ಬದಲಾವಣೆ ವಿಷಯವಾಗಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಭಾರೀ ಪೈಪೋಟಿಗಳು ನಡೆಯುತ್ತಿವೆ. ಡಿ.ಕೆ.ಶಿವಕುಮಾರ್ ಪರವಾಗಿ ಶಾಸಕ ಬಸವರಾಜ್ ಶಿವಗಂಗಾ ಅವರು ಹೇಳಿಕೆಗಳನ್ನು ನೀಡುವ ಮೂಲಕ ವಕಾಲತ್ತು ವಹಿಸುತ್ತಿದ್ದಾರೆ.
ಸಿದ್ದರಾಮಯ್ಯ ಅವರ ಆಪ್ತ ಬಣದಲ್ಲಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಾಯಕತ್ವ ಬದಲಾವಣೆಯ ಪ್ರಸ್ತಾಪವೇ ಇಲ್ಲ ಎಂದು ಹೇಳುವ ಮೂಲಕ ಡಿ.ಕೆ.ಶಿವಕುಮಾರ್ ಬಣಕ್ಕೆ ತಿರುಗೇಟು ನೀಡುತ್ತಿದ್ದಾರೆ.
ಕಾರ್ಯಕ್ರಮ ನಿಮಿತ್ತ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಚನ್ನಗಿರಿಗೆ ಆಗಮಿಸಿದ್ದ ವೇಳೆ ಅವರ ಬೆಂಬಲಿಗರು ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ಘೋಷಣೆ ಕೂಗಿದ್ದಾರೆ.ಈ ಬಗ್ಗೆ ಮಾತನಾಡಿರುವ ಜಾರಕಿಹೊಳಿ, ಜನರು ಪ್ರೀತಿಯಿಂದ ಈ ರೀತಿಯ ಘೋಷಣೆಗಳನ್ನು ಕೂಗುತ್ತಾರೆ. ಅದಕ್ಕೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸದ್ಯಕ್ಕೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾರೆ. ಕುರ್ಚಿ ಖಾಲಿ ಇಲ್ಲ. ಈ ಅವಧಿಯಲ್ಲಿ ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಅಲ್ಲ. 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಆಗಿರುವುದಾಗಿ ಪುನರುಚ್ಚರಿಸಿದ್ದಾರೆ.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಅವಧಿಯಲ್ಲಿ ನಾಯಕತ್ವ ಬದಲಾವಣೆಯಾಗಬೇಕು. ತಮಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಅದರ ಸಾಧ್ಯ-ಸಾಧ್ಯತೆಗಳ ಬಗ್ಗೆ ತೀವ್ರ ಚರ್ಚೆಗಳು ನಡೆಯುತ್ತಿವೆ.
ಪ್ರಸಕ್ತ ಸಂದರ್ಭದಲ್ಲಿ ಸಿದ್ದರಾಮಯ್ಯ ನಾಯಕತ್ವ ಬದಲಾವಣೆಯ ಸಾಧ್ಯತೆಗಳು ಕ್ಷೀಣವಾಗಿದೆ. ಒಂದು ವೇಳೆ ಈ ಅವಧಿಯಲ್ಲಿ ತಮ ಪ್ರಯತ್ನ ಫಲಿಸದೇ ಇದ್ದರೆ ಮುಂದಿನ ಅವಧಿಗಾದರೂ ಅದು ಕೈಗೂಡಲ್ಲಿ ಎಂಬ ದೂರಾಲೋಚನೆಯಿಂದ ಡಿ.ಕೆ.ಶಿವಕುಮಾರ್ ರಾಜಕೀಯ ನಡೆಸಿದಂತೆ ಕಂಡುಬರುತ್ತಿದೆ.
ಡಿ.ಕೆ.ಶಿವಕುಮಾರ್ ಅವರ ಕಟ್ಟಾ ಬೆಂಬಲಿಗನ ಕ್ಷೇತ್ರದಲ್ಲಿ ಸಚಿವ ಸತಿ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಘೋಷಣೆ ಕೂಗಿರುವುದು ಕಾಂಗ್ರೆಸ್ನಲ್ಲಿ ಎರಡು ಬಣಗಳ ನಡುವಿನ ಸಂಘರ್ಷಕ್ಕೆ ಸಾಕ್ಷಿಯಾಗಿದೆ.
