ಬೆಂಗಳೂರು, ಫೆ.21- ನಾಯಕತ್ವದ ಗೊಂದಲದ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮತ್ತೊಬ್ಬ ಪರಮಾಪ್ತ ಶಾಸಕ ಕೆ.ಎನ್.ರಾಜಣ್ಣ ಬಹಳ ದಿನಗಳ ನಂತರ ದೆಹಲಿಗೆ ಭೇಟಿ ನೀಡಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಅಚ್ಚರಿಯ ಬೆಳವಣಿಗೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಜೊತೆಯಲ್ಲಿ ಉಪಾಹಾರಕೂಟ ನಡೆಸಿದ್ದಾರೆ.
ಕೆ.ಎನ್.ರಾಜಣ್ಣ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಬಹಿರಂಗ ಹೇಳಿಕೆಗಳನ್ನು ನೀಡುವ ಮೂಲಕ ಡಿ.ಕೆ.ಶಿವಕುಮಾರ್ ಅವರಿಗೆ ಕಾಲಕಾಲಕ್ಕೆ ತಿರುಗೇಟು ನೀಡುತ್ತಿರುತ್ತಾರೆ.
ಅಸ್ಸಾಂ ವಿಧಾನಸಭಾ ಚುನಾವಣೆ ತಯಾರಿಗಾಗಿ ಡಿ.ಕೆ.ಶಿವಕುಮಾರ್ ಎರಡು ದಿನಗಳ ಕಾಲ ದೆಹಲಿಯಲ್ಲಿ ಬೀಡು ಬಿಟ್ಟು ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಿದ್ದರು. ಅದರ ಬೆನ್ನಲ್ಲೇ ಸಿದ್ದರಾಮಯ್ಯ ಅವರ ಆಪ್ತರಾಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿನ್ನೆ ದೆಹಲಿಗೆ ಆಗಮಿಸಿ, ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ಪ್ರಯತ್ನ ನಡೆಸಿದ್ದರು. ಸತೀಶ್ ಜಾರಕಿಹೊಳಿ ಅವರ ಬೆನ್ನಲ್ಲೇ ಕೆ.ಎನ್.ರಾಜಣ್ಣ ಕೂಡ ಕೂಡ ದೆಹಲಿಗೆ ಆಗಮಿಸಿದ್ದಾರೆ.
ಮತಗಳ್ಳತನ ವಿವಾದದಲ್ಲಿ ವ್ಯತಿರಿಕ್ತ ಹೇಳಿಕೆ ನೀಡಿದ್ದ ಕೆ.ಎನ್. ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಲಾಗಿತ್ತು. ಆಗ ತಾವು ಹೇಳಿದ್ದನ್ನು ತಿರುಚಿ ಹೈಕಮಾಂಡ್ಗೆ ತಪ್ಪು ಮಾಹಿತಿ ನೀಡಲಾಗಿದೆ ಎಂದು ರಾಜಣ್ಣ ಆಕ್ಷೇಪಿಸಿದ್ದರು. ತಮ ಹೇಳಿಕೆಯ ಸರಿಯಾದ ಅರ್ಥವನ್ನು ಹೈಕಮಾಂಡ್ಗೆ ಮನವರಿಕೆ ಮಾಡಿಕೊಡಲು ದೆಹಲಿಗೆ ಭೇಟಿ ನೀಡುವುದಾಗಿ ಹೇಳಿದ್ದರು. ಆದರೆ ರಾಹುಲ್ ಗಾಂಧಿಯವರ ಸಮಯ ಸಿಗದಿದ್ದರಿಂದ ದೆಹಲಿ ಭೇಟಿ ಮುಂದೂಡಿಕೆಯಾಗಿತ್ತು. ಈಗ ಸ್ನೇಹಿತರೊಬ್ಬರ ಮೊಮಗನ ಮದುವೆಯಲ್ಲಿ ಭಾಗವಹಿಸಬೇಕೆಂಬ ನೆಪ ಮಾಡಿಕೊಂಡು ರಾಜಣ್ಣ ಏಕಾಏಕಿ ದೆಹಲಿಗೆ ಭೇಟಿ ನೀಡಿದ್ದಾರೆ.
ರಾಜಣ್ಣ 3-4 ದಿನ ದೆಹಲಿಯಲ್ಲೇ ಠಿಕಾಣಿ ಹೂಡಲಿದ್ದಾರೆ. ಈ ಸಂದರ್ಭದಲ್ಲಿ ಎಐಸಿಸಿ ಪ್ರಮುಖರಾಗಿರುವ ಕೆ.ಸಿ.ವೇಣುಗೋಪಾಲ್, ರಣದೀಪ ಸಿಂಗ್ ಸುರ್ಜೇವಾಲ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರ ಪ್ರಮುಖ ನಾಯಕರನ್ನು ಭೇಟಿ ಮಾಡುವ ಪ್ರಯತ್ನ ನಡೆಸಿದ್ದಾರೆ.
ರಾಜಣ್ಣ ಅವರ ಭೇಟಿ ಡಿ.ಕೆ.ಶಿವಕುಮಾರ್ ಬಣವನ್ನು ಮತ್ತಷ್ಟು ಚುರುಕುಗೊಳ್ಳುವಂತೆ ಮಾಡಿದೆ. ಈ ಹಿಂದೆ ರಾಜಣ್ಣ ಹೆಚ್ಚುವರಿ ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಯಾಗಬೇಕು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗಬೇಕು, ಒಬ್ಬರಿಗೆ ಒಂದೇ ಹುದ್ದೆ ಎಂಬ ಮಾನದಂಡ ಜಾರಿಯಾಗಬೇಕು ಎಂಬೆಲ್ಲಾ ಬೇಡಿಕೆಗಳನ್ನು ಮುಂದಿಟ್ಟಿದ್ದರು.
ಅದರ ಆಧಾರದ ಮೇಲೆ ಡಿ.ಕೆ.ಶಿವಕುಮಾರ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಅಥವಾ ಉಪಮುಖ್ಯಮಂತ್ರಿಯನ್ನಾಗಿ ಎರಡರಲ್ಲಿ ಯಾವುದಾದರೂ ಒಂದು ಹುದ್ದೆಯಲ್ಲಿ ಮಾತ್ರ ಮುಂದುವರಿಸಬೇಕು ಎಂದು ಪ್ರತಿಪಾದಿಸಿದ್ದರು. ರಾಜಣ್ಣ ಅವರ ಈ ಹೇಳಿಕೆಗೆ ಸಿದ್ದರಾಮಯ್ಯ ಅವರ ಬೆಂಬಲಿಗರು ಧ್ವನಿಗೂಡಿಸಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯನ್ನು ಹುಟ್ಟು ಹಾಕಿತ್ತು. ಸೆಪ್ಟಂಬರ್ನಲ್ಲಿ ರಾಜಕೀಯ ಕ್ರಾಂತಿಯಾಗಲಿದೆ ಎಂದಿದ್ದ ರಾಜಣ್ಣ ಅವರ ಹೇಳಿಕೆಯಲ್ಲಿ ಬೇರೆ ಬೇರೆ ವ್ಯಾಖ್ಯಾನಗಳಿದ್ದವು.
ಡಿ.ಕೆ.ಶಿವಕುಮಾರ್ ಅವರ ಎರಡು ಪ್ರಮುಖ ಹುದ್ದೆಗಳ ಪೈಕಿ ಒಂದು ಕಡಿತವಾಗಲಿದೆ, ಉಪಮುಖ್ಯಮಂತ್ರಿ ಅಥವಾ ಪಕ್ಷದ ಪಕ್ಷದ ಅಧ್ಯಕ್ಷ ಯಾವುದಾದರೂ ಒಂದರಲ್ಲಿ ಮಾತ್ರ ಮುಂದುವರೆಯುತ್ತಾರೆ ಎಂದು ನಂಬಲಾಗಿತ್ತು.
ಆದರೆ ಇದಕ್ಕೆ ಪ್ರತಿಯಾಗಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಾದ ಒಪ್ಪಂದದಂತೆ ತಮಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕೆಂದು ತಗಾದೆ ತೆಗೆದರು. ಇದು ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗೊಂದಲಗಳಿಗೆ ಮುನ್ನುಡಿ ಬರೆದಿದೆ. ಈಗ ಹೈಕಮಾಂಡ್ ಇಕ್ಕಟ್ಟಿಗೆ ಸಿಲುಕಿದೆ.
ನಿನ್ನೆ ದೆಹಲಿಗೆ ಆಗಮಿಸಿದ ಸತೀಶ್ ಜಾರಕಿಹೊಳಿ ವರಿಷ್ಠರ ಜೊತೆ ಮಾತುಕತೆ ನಡೆಸಿದ್ದಾರೆ. ರಾಜಣ್ಣ ಕೂಡ ದೆಹಲಿಗೆ ಆಗಮಿಸುವ ಮೂಲಕ ಸಿದ್ದರಾಮಯ್ಯ ಪರವಾಗಿ ದೆಹಲಿಯಲ್ಲಿ ಭಾರೀ ಲಾಬಿ ನಡೆಯುತ್ತಿದೆ. ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿದರೆ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಉಳಿಗಾಲವಿಲ್ಲ ಎಂಬ ಸಂದೇಶವನ್ನು ಹೈಕಮಾಂಡ್ಗೆ ರವಾನಿಸುವ ಪ್ರಯತ್ನಗಳಾಗಿವೆ.
ಒಂದು ವೇಳೆ ಬದಲಾವಣೆ ಮಾಡುವುದಾದರೆ ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬುದು ಸಿದ್ದರಾಮಯ್ಯ ಬೆಂಬಲಿಗರ ಪ್ರತಿಪಾದನೆಯಾಗಿದೆ. ರಾಜಣ್ಣ ಮತ್ತು ಸತೀಶ್ ಜಾರಕಿಹೊಳಿ ಅವರ ಜಂಟಿ ದೆಹಲಿ ಯಾತ್ರೆ ಕುರಿತು ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕೆ.ಎನ್.ರಾಜಣ್ಣ, ತಾವು ಇನ್ನೂ 3-4 ದಿನ ದೆಹಲಿಯಲ್ಲೇ ಉಳಿಯಲಿದ್ದು, ಲಭ್ಯ ಇರುವ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.
ಕರ್ನಾಟಕದಲ್ಲಿ ನಾಯಕತ್ವದ ಗೊಂದಲ ಇಲ್ಲ ಎಂದು ಹೇಳುತ್ತಲೇ ರಾಜಣ್ಣ, ಪಕ್ಷದ ವಿರುದ್ಧ ತಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ನಾಯಕತ್ವದ ಗೊಂದಲವನ್ನು ಹೈಕಮಾಂಡ್ ಶೀಘ್ರವೇ ಇತ್ಯರ್ಥ ಪಡಿಸಬೇಕು. ಇಲ್ಲವಾದರೆ ಪಕ್ಷ ಮತ್ತು ಸರ್ಕಾರದ ಮೇಲೆ ಪರಿಣಾಮವಾಗಲಿದೆ ಎಂದು ಎಚ್ಚರಿಸಿದ್ದಾರೆ.
ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಎಲ್ಲಾ ನಾಯಕರು ಹೇಳಿದ್ದಾರೆ. ಹಾಗಿದ್ದ ಮೇಲೆ ಯಾವುದೋ ಒಂದು ತೀರ್ಮಾನವನ್ನು ತೆಗೆದುಕೊಳ್ಳಬೇಕು, ವಿಳಂಬ ಏಕೆ? ಎಂದು ಪ್ರಶ್ನಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಹೇಳುವವರು, ಕೇಳುವವರು ಇಲ್ಲದಂತಾಗಿದೆ ಎಂದು ದೆಹಲಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಭವನಕ್ಕಾಗಿ ದೆಹಲಿಯಲ್ಲಿ ಸುಮಾರು 12 ವಾಹನಗಳನ್ನು ಖರೀದಿಸಲಾಗಿದೆ. ಆದರೆ ಎಲ್ಲವನ್ನೂ ದೆಹಲಿಯ ಸಾರಿಗೆ ಇಲಾಖೆಯಲ್ಲಿ ನೋಂದಣಿ ಮಾಡಿಸಿದ್ದಾರೆ. ಕರ್ನಾಟಕದಲ್ಲಿ ನೋಂದಣಿ ಮಾಡಿಸಿದ್ದರೆ ಕನಿಷ್ಠ ಒಂದು ಕೋಟಿ ರೂಪಾಯಿಯಾದರೂ ತೆರಿಗೆ ಬರುತ್ತಿತ್ತು. ದೆಹಲಿಯಲ್ಲಿರುವ ಅಧಿಕಾರಿಗಳು ಕರ್ನಾಟಕದ ಹಿತರಕ್ಷಣೆಗಾಗಿ ಕೆಲಸ ಮಾಡುತ್ತಿದ್ದಾರೋ ಅಥವಾ ದೆಹಲಿ ಸರ್ಕಾರಕ್ಕೆ ಕೆಲಸ ಮಾಡುತ್ತಿದ್ದಾರೋ ಎಂಬ ಅನುಮಾನ ಕಾಡುತ್ತಿದೆ. ಇಂತಹ ಸಣ್ಣಪುಟ್ಟ ಲೋಪಗಳ ಬಗ್ಗೆ ಕೇಳುವವರಿಲ್ಲವಾಗಿದೆ ಎಂದಿದ್ದಾರೆ.
ಸುಮಾರು 2 ವರ್ಷಗಳ ಬಳಿಕ ದೆಹಲಿಗೆ ಭೇಟಿ ನೀಡಿರುವ ಕೆ.ಎನ್.ರಾಜಣ್ಣ ಕೇಂದ್ರ ಸಚಿವ ವಿ.ಸೋಮಣ್ಣ ಅವರೊಂದಿಗೆ ಉಪಾಹಾರ ಕೂಟ ನಡೆಸುವ ಮೂಲಕ ಬಿಜೆಪಿ ಸೇರ್ಪಡೆಯ ಮುನ್ಸೂಚನೆ ನೀಡಿದ್ದಾರೆ.
