ಬೆಂಗಳೂರು, ಜೂ.10– ಚಿನ್ನಸ್ವಾಮಿ ಕ್ರೀಡಾಂಗಣದ ಆಡಳಿತ ಮಂಡಳಿಯನ್ನು ರದ್ದುಗೊಳಿಸಿ ಸರ್ಕಾರವೇ ಆಡಳಿತಾಧಿಕಾರಿಯನ್ನು ನೇಮಿಸುವ ಸಾಧ್ಯತೆಗಳಿವೆ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಅಮಾಯಕರು ಜೀವ ಕಳೆದುಕೊಂಡಿರುವುದರನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಚಿನ್ನಸ್ವಾಮಿ ಕ್ರೀಡಾಂಗಣದ ಆಡಳಿತ ಮಂಡಳಿಯ ಒಂದೊಂದೆ ಹುಳುಕುಗಳನ್ನು ಹೊರ ತೆಗೆಯಲು ಮುಂದಾಗಿದೆ.
ಈ ಸಂದರ್ಭದಲ್ಲಿ ಕೆಎಸ್ಸಿಎ ವಿರುದ್ಧ ಹಲವಾರು ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇಷ್ಟು ದಿನ ಅಂಧ ದರ್ಬಾರು ನಡೆಸುತ್ತಿದ ಕೆಎಸ್ ಸಿಎ ಅಧಿಕಾರಿಗಳಿಗೆ ಚುರುಕು ಮುಟ್ಟಿಸಲು ಸರ್ಕಾರ ಮುಂದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸರ್ಕಾರದ ಈ ನಿರ್ಧಾರದಿಂದ ಕೆಎಸ್ಸಿಎ ಅಧಿಕಾರಿಗಳಿಗೆ ನಡುಕ ಶುರು ಆಗಿದೆ. ಅಧಿಕಾರಿಗಳ ದರ್ಬಾರಿಗೆ ಬ್ರೇಕ್ ಹಾಕಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.ವಿಪಕ್ಷಗಳು ಕೂಡ ಸಂಸ್ಥೆಯ ಲೆಕ್ಕಪತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿವೆ.
ಇನ್ನೂ ಕೆಎಸ್ ಸಿಎ ಗೆ ಪ್ರತಿ ವರ್ಷ ನೂರಾರು ಕೋಟಿ ಅದಾಯ ಬಂದರು ತೆರಿಗೆ ಪಾವತಿಸಲು ಅವರು ಮುಂದೆ ಬರುತ್ತಿಲ್ಲ. ಹೀಗಾಗಿ ಅವರ ಎಲ್ಲ ಅಕ್ರಮಗಳನ್ನು ಬಯಲು ಮಾಡುವ ಉದ್ದೇಶದಿಂದ ಕೆಎಸ್ಸಿಎಗೆ ಆಡಳಿತಾಧಿಕಾರಿ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.ಹಿರಿಯ ಐಎಎಸ್ ಅಧಿಕಾರಿಯೊಬ್ಬರನ್ನು ಕೆಎಸ್ಸಿಎ ಆಡಳಿತಾಧಿಕಾರಿಯಾಗಿ ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳು ಖಚಿತಪಡಿಸಿವೆ.