Thursday, May 2, 2024
Homeರಾಜ್ಯಪಬ್ಲಿಕ್ ಪರೀಕ್ಷೆ ತಡೆ ಪ್ರಶ್ನಿಸಿ ಹೈಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಕೆ

ಪಬ್ಲಿಕ್ ಪರೀಕ್ಷೆ ತಡೆ ಪ್ರಶ್ನಿಸಿ ಹೈಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಕೆ

ಬೆಂಗಳೂರು,ಮಾ.7- ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5, 7, 8, 9 ಮತ್ತು 11ನೇ ತರಗತಿಗೆ ನಿಗದಿಯಾಗಿದ್ದ ಪಬ್ಲಿಕ್ ಪರೀಕ್ಷೆ ಸುತ್ತೋಲೆಯನ್ನು ರದ್ದುಪಡಿಸಿರುವ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನಿಲಯ್ ವಿಪಿನ್‍ಚಂದ್ರ ಅಂಜೇರಿಯಾ ಹಾಗೂ ನ್ಯಾಯಮೂರ್ತಿ ಟಿ.ಜೆ.ಶಿವಶಂಕರೇಗೌಡ ಅವರನ್ನೊಳಗೊಂಡ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಮೂರ್ತಿ ರವಿ ಹೊಸಮನಿ ಅವರ ಏಕಸದಸ್ಯ ಪೀಠ ನೀಡಿರುವ ಆದೇಶವನ್ನು ಮರುಪರಿಶೀಲನೆ ಮಾಡುವಂತೆ ಮೇಲ್ಮನೆಯಲ್ಲಿ ಮನವಿ ಮಾಡಿದೆ.

ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ್ ಅವರು ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಬುಧವಾರ ಹೈಕೋರ್ಟ್ ನ್ಯಾಯಮೂರ್ತಿ ರವಿ.ಎಸ್ ಹೊಸಮನಿ ಅವರನ್ನೊಳಗೊಂಡ ಏಕಸದಸ್ಯ ಪೀಠ 5, 7, 8, 9 ಮತ್ತು 11ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು 2023 ಡಿಸೆಂಬರ್ ತಿಂಗಳಿನಲ್ಲಿ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿ ಆದೇಶ ನೀಡಿತ್ತು.

ಮಾರ್ಚ್ 11ರಿಂದ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯು ಎಲ್ಲಾ ರೀತಿಯ ಸಿದ್ಧತೆ ನಡೆಸಿಕೊಂಡಿದೆ. ಈ ಹಂತದಲ್ಲಿ ಏಕಸದಸ್ಯ ಪೀಠ, ಶಿಕ್ಷಣ ಇಲಾಖೆ ಸುತ್ತೋಲೆ ರದ್ದುಪಡಿಸಿರುವ ಕಾರಣ ಪರೀಕ್ಷೆ ನಡೆಸಲು ಹಲವು ಸಮಸ್ಯೆ ಎದುರಾಗಲಿದೆ. ಆದ್ದರಿಂದ ತುರ್ತಾಗಿ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು. ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು. ಪರೀಕ್ಷಾ ವೇಳಾಪಟ್ಟಿ ಸಿದ್ಧಗೊಂಡಿದೆ ಎಂದು ಕೋರಿದರು. ಈ ವೇಳೆ ಪ್ರತಿಕ್ರಿಯಿಸಿದ ಮುಖ್ಯನ್ಯಾಯಮೂರ್ತಿಗಳು, ಈ ಪೀಠ ಇರುವುದಿಲ್ಲ. ಹೀಗಾಗಿ, ಮತ್ತೊಂದು ಪೀಠವನ್ನು ರಚನೆ ಮಾಡಿ ಇಂದೇ ವಿಚಾರಣೆಗೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ, ರಾಜ್ಯ ಸರ್ಕಾರ ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9 ರಂದು ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ, ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳಿಗಾಗಿ ಸಂಸ್ಥೆ ಸಲ್ಲಿಸಿದ್ದ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ಬುಧವಾರ ಸುತ್ತೋಲೆ ರದ್ದುಪಡಿಸಿ ತೀರ್ಪು ಪ್ರಕಟಿಸಿತ್ತು.

ಹೈಕೋರ್ಟ್‍ನ ಈ ಆದೇಶದಿಂದ ಮಾರ್ಚ್ 13ರಿಂದ 19 ರವರೆಗೂ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ. ಅಲ್ಲದೆ ಸೆಕ್ಷನ್ 22ರ ಪ್ರಕಾರ ವಿದ್ಯಾರ್ಥಿಗಳ ಪರೀಕ್ಷಾ ವ್ಯವಸ್ಥೆಯ ಮೂಲಕ ಆಂತರಿಕ ಅಥವಾ ಬಾಹ್ಯ ಮೌಲ್ಯಮಾಪನ ಮಾಡುವುದಕ್ಕಾಗಿ ನಿಯಮಗಳಿಗೆ ತಿದ್ದುಪಡಿ ಮಾಡಬೇಕು. ಸೆಕ್ಷನ್ 145 (4)ರ ಪ್ರಕಾರ ಯಾವುದೇ ನಿಯಮಗಳಲ್ಲಿ ಬದಲಾವಣೆ ಮಾಡಬೇಕಾದಲ್ಲಿ ಶಾಸನ ಸಭೆಯಲ್ಲಿ ಚರ್ಚಿಸಿದ ಬಳಿಕ ಕ್ರಮಕ್ಕೆ ಮುಂದಾಗಬೇಕು ಎಂದು ಹೇಳಲಾಗಿದೆ.

ಆದರೆ, ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಈ ರೀತಿಯ ಯಾವುದೇ ನಿಯಮಗಳಿಗೆ ತಿದ್ದುಪಡಿ ಮಾಡಿಲ್ಲ. ಆದ್ದರಿಂದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಮುಂದಾಗಿರುವ ಕ್ರಮ ಶಿಕ್ಷಣ ಕಾಯ್ದೆ ಸೆಕ್ಷನ್ 22ಕ್ಕೆ ತದ್ವಿರುದ್ಧವಾಗಿದೆ ಎಂದು ನ್ಯಾಯಪೀಠ ತಿಳಿಸಿತ್ತು. ದೊಡ್ಡಮಟ್ಟದ ವಿದ್ಯಾರ್ಥಿಗಳಿರುವ ಶಿಕ್ಷಣ ವ್ಯವಸ್ಥೆಯಲ್ಲಿ ಸರ್ಕಾರ ಬದಲಾವಣೆ ತರಬೇಕಾದರೆ ಯಾವುದೇ ಆಕ್ಷೇಪಗಳು ಇಲ್ಲದಂತೆ ಮತ್ತು ಕಡ್ಡಾಯವಾಗಿ ನಿಗದಿಪಡಿಸಿರುವ ಕಾರ್ಯವಿಧಾನದ ಮೂಲಕ ತರಬೇಕು. ಹೀಗಾಗಿ, ಶಿಕ್ಷಣ ಇಲಾಖೆ ಸುತ್ತೋಲೆ ದೋಷಪೂರಿತವಾಗಿದೆ ಎಂದು ಪೀಠ ತಿಳಿಸಿತ್ತು.

RELATED ARTICLES

Latest News