ಬೆಂಗಳೂರು,ಜೂ.15- ಬೆಂಗಳೂರು ರಾಯಲ್ ಚಾಲೆಂಜರ್ಸ್ ( ಆರ್ಸಿಬಿ) ನ ವಿಜಯೋತ್ಸವದ ಸಂದರ್ಭದಲ್ಲಿ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಅವರಿಗೆ ಎರಡು ಪುಟಗಳ ಪತ್ರ ಬರೆದಿರುವ ಅಶೋಕ್, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಜೂ.4 ರಂದು ನಡೆದ ಕಾಲ್ತುಳಿತ ದುರ್ಘಟನೆಯಿಂದ 11 ಜನರ ದುರದೃಷ್ಟಕರ ಸಾವು ಮತ್ತು 75 ಮಂದಿಗೆ ಗಾಯಗಳಾಗಿರುವ ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.
ಈ ದುರ್ಘಟನೆಯು ಸಾರ್ವಜನಿಕ ಸುರಕ್ಷತೆ, ಗುಂಪು ನಿಯಂತ್ರಣ. ಮತ್ತು ರಾಜ್ಯದಲ್ಲಿ ಕ್ರೀಡಾ ಹಾಗೂ ಇತರೆ ಕಾರ್ಯಕ್ರಮಗಳ ಸಂಘಟನೆಗೆ ಸಂಬಂಧಿಸಿದಂತೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣ ಜನರಲ್ಲಿ ಅತೀವವಾದ ಆತಂಕ ಮತ್ತು ಕಳವಳ ಉಂಟು ಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಆಡಳಿತದಲ್ಲಿ ಆಗಿರುವ ಲೋಪಗಳು, ಘಟನೆ ನಂತರ ಸರ್ಕಾರದ ಕ್ರಮಗಳು ಸಾರ್ವಜನಿಕ ವಲಯದಲ್ಲಿ ಅನೇಕ ಸಂಶಯಗಳನ್ನು ಹುಟ್ಟು ಹಾಕಿದೆ. ಕಾಲ್ತುಳಿತಕ್ಕೆ ಕಾರಣರಾದ ಬಲಾಢ್ಯರ ರಕ್ಷಣೆ ಮಾಡಲಾಗುತ್ತಿದೆ. ಸತ್ಯವನ್ನು ಮುಚ್ಚಿಹಾಕಲು ಮೂರು ರೀತಿಯ ತನಿಖೆಗಳನ್ನು ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಅಸಹಾಯಕ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅಧಿವೇಶನದ ಸಂದರ್ಭದಲ್ಲಿ ಕಾಲ್ತುಳಿತ ಘಟನೆಗೆ ಕಾರಣವಾದ ಸಂದರ್ಭಗಳ ಸಂಪೂರ್ಣ ತನಿಖೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗುಂಪು ನಿಯಂತ್ರಣ ಮತ್ತು ಸುರಕ್ಷತಾ ಕ್ರಮಗಳ ಬಲವರ್ಧನೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ಪರಿಹಾರದ ವ್ಯವಸ್ಥೆ, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಚರ್ಚೆಸುವ ಅಗತ್ಯವಿದೆ ಎಂದು ಗಮನ ಸೆಳೆದಿದ್ದಾರೆ.
ಈ ತುರ್ತು ಅಧಿವೇಶನವು ರಾಜ್ಯದ ಜನತೆಗೆ ಸರ್ಕಾರದ ಬದ್ಧತೆಯನ್ನು ತೋರಿಸಲು ಮತ್ತು ಈ ದುರಂತದಿಂದ ಕಲಿತ ಪಾಠಗಳ ಆಧಾರದಲ್ಲಿ ಭವಿಷ್ಯಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗಲಿದೆ. ಹಾಗೆಯೇ ಘಟನೆಗೆ ಕಾರಣಗಳೇನು ಎಂಬುದನ್ನು ರಾಜ್ಯದ ಜನತೆಗೆ ತಿಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ.
ಇದರ ಜತೆಗೆ ಭವಿಷ್ಯದಲ್ಲಿ ಇಂತಹ ದುರ್ಘಟನೆಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಚರ್ಚೆಯ ಅಗತ್ಯವು ಇದೆ. ಈ ನಿಟ್ಟಿನಲ್ಲಿ, ಕರ್ನಾಟಕ ವಿಧಾನಮಂಡಲದ ಮೂರು ದಿನಗಳ ತುರ್ತು ಅಧಿವೇಶನವನ್ನು ಕರೆಯುವಂತೆ ಅಶೋಕ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.