ಬೆಂಗಳೂರು : RCB ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆಯ ಬಗ್ಗೆ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರಾದ ನ್ಯಾ. ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳ ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದರು.
ಸಚಿವ ಸಂಪುಟ ಸಭೆಯಲ್ಲಿ ಆರ್ ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಆರ್ ಸಿಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ಅವರು ತಿಳಿಸಿದರು.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ದಯಾನಂದ್ ಅವರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ ಸಿಬಿಐ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು. ನಾನು ಶಾಸಕರು, ಸಚಿವರು, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ ಎಂದರು.