ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶವಿಲ್ಲ

Social Share

ಬೆಂಗಳೂರು, ಜ.24- ಕೊರೊನಾ ಸೋಂಕು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವಕ್ಕೂ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದ್ದು, ಉಳಿದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಗಣರಾಜ್ಯೋತ್ಸವ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಇಂದಿಲ್ಲಿ ತಿಳಿಸಿದರು.
ಗಣರಾಜ್ಯೋತ್ಸವ ಆಚರಿಸಲಾಗುವ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೇಡ್ ಮೈದಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, 60 ಸಿಸಿ ಕ್ಯಾಮೆರಾ ವ್ಯವಸ್ಥೆ, ಎರಡು ಬ್ಯಾಗೇಜ್ ಸ್ಕ್ಯಾನರ್ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ವಿವರಣೆ ನೀಡಿದರು.
26ರಂದು ಬೆಳಗ್ಗೆ 8.58ಕ್ಕೆ ಸ್ಥಳಕ್ಕೆ ಗೌರವಾನ್ವಿತ ರಾಜ್ಯಪಾಲರು ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಭಾರತೀಯ ರಕ್ಷಣಾ ಸೇವೆಯ ಮೂವರು ಹಿರಿಯ ಅಧಿಕಾರಿಗಳನ್ನು ರಾಜ್ಯಪಾಲರಿಗೆ ಪರಿಚಯಿಸಲಾಗುವುದು. 9 ಗಂಟೆಗೆ ರಾಜ್ಯಪಾಲ ತಾವರ್‍ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಧ್ವಜಾರೋಹಣದ ನಂತರ ಗೌರವ ರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ.
ಕೆಎಸ್‍ಆರ್‍ಪಿ, ಸಿಆರ್‍ಪಿಎಫ್, ಸಿಎಆರ್, ಕೆಎಸ್‍ಐಎಸ್‍ಎಫ್, ಟ್ರಾಫಿಕ್ ಪೊಲೀಸ್, ಹೋಂಗಾರ್ಡ್, ಅಗ್ನಿಶಾಮಕ ದಳದ ಸಿಬ್ಬಂದಿ, ಡಾಗ್‍ಸ್ಕ್ವಾಡ್ ಹಾಗೂ ಬ್ಯಾಂಡ್‍ನ 21 ತುಕಡಿಗಳಲ್ಲಿ ಸುಮಾರು 500 ಮಂದಿ ಪೊಲೀಸರು ಪಥ ಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ. ಭದ್ರತಾ ದೃಷ್ಟಿಯಿಂದ ಪರೇಡ್‍ಗೆ ಆಗಮಿಸುವ ಆಹ್ವಾನಿತರು ಮೊಬೈಲ್ ಫೋನ್, ಹೆಲ್ಮೆಟ್, ಕ್ಯಾಮೆರಾ, ರೇಡಿಯೋ, ಕೊಡೆ ಮುಂತಾದ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ.
ನಾಡಗೀತೆ ಮತ್ತು ರೈತಗೀತೆ ಮೂಲಕ ಗಣರಾಜ್ಯೋತ್ಸವ ಆರಂಭವಾಗಲಿದೆ. ಆಚರಣೆ ಸಂದರ್ಭದಲ್ಲಿ ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸದಂತೆ ನೋಡಿಕೊಳ್ಳಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೈದಾನದ ಸಮೀಪ ಆ್ಯಂಬುಲೆನ್ಸ್‍ಗಳು, ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ನಗರದ ಹಲವು ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ.
ಆಕಸ್ಮಿಕ ಬೆಂಕಿ ಅವಘಡ ನಿಭಾಯಿಸಲು ಅಗ್ನಿಶಾಮಕ ವಾಹನ ದಳಗಳನ್ನು ಸಿದ್ಧಪಡಿಸಲಾಗಿದ್ದು, ಕಾರ್ಯಕ್ರಮ ವೀಕ್ಷಣೆಗೆ ಬರುವ ಅತಿಗಣ್ಯ, ಗಣ್ಯ ಮತ್ತಿತರ ಆಹ್ವಾನಿತರಿಗೆ 200 ಆಸನಗಳನ್ನು ವ್ಯವಸ್ಥೆ ಮಾಡಲಾಗಿದೆ.
ಜನಪ್ರತಿನಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ವೇದಿಕೆಯ ಬಲಭಾಗದಲ್ಲಿ ಮತ್ತು ಮಾಧ್ಯಮದವರಿಗೆ ವೇದಿಕೆಯ ಎಡಭಾಗದಲ್ಲಿ ಆಸನ ವ್ಯವಸ್ಥೆ ಮಾಡಲಾಗಿದೆ. ಆಹ್ವಾನಿತರು ಕಡ್ಡಾಯವಾಗಿ ಮುಖಗವಸು ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಇದರ ಜತೆಗೆ ಸರ್ಕಾರ ನೀಡಿರುವ ಪಾಸ್‍ಗಳಿಗೆ ಮೀಸಲಿಟ್ಟಿರುವ ದ್ವಾರಗಳ ಮೂಲಕ ತೆರಳಿ ತಮಗೆ ನಿಗದಿಪಡಿಸಿರುವ ಸ್ಥಳಗಳಲ್ಲಿ ಆಸೀನರಾಗಬೇಕೆಂದು ಗೌರವ್ ಗುಪ್ತ ಅವರು ಮನವಿ ಮಾಡಿಕೊಂಡಿದ್ದಾರೆ.

Articles You Might Like

Share This Article