Tuesday, June 24, 2025
Homeರಾಜ್ಯಕಂದಾಯ ಇಲಾಖೆಯಲ್ಲಿ ಅಧಿಕಾರಿಗಳ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲ : ಸಚಿವ ಕೃಷ್ಣಭೈರೇಗೌಡ ಅಸಮಾಧಾನ

ಕಂದಾಯ ಇಲಾಖೆಯಲ್ಲಿ ಅಧಿಕಾರಿಗಳ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲ : ಸಚಿವ ಕೃಷ್ಣಭೈರೇಗೌಡ ಅಸಮಾಧಾನ

Revenue Department officials' information does not match with each other

ತುಮಕೂರು, ಜೂ.24: ಕಂದಾಯ ಇಲಾಖೆಯಲ್ಲಿನ ಪ್ರಗತಿಯ ಕುರಿತು ಅಧಿಕಾರಿಗಳು ನೀಡುತ್ತಿರುವ ಮಾಹಿತಿಗಳು ಒಂದಕ್ಕೊಂದು ತಾಳೆಯಾಗುತ್ತಿಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಲ್ಲಾ ತಾಲ್ಲೂಕು ಕಂದಾಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಮಾತನಾಡಿದ ಅವರು, ವರದಿಯನುಸಾರ ಜಿಲ್ಲೆಯಲ್ಲಿ ದಾಖಲೆಗಳಿಲ್ಲದ 522 ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಿರುವುದು ಅಭಿನಂದನಾರ್ಹ. ಆದರೆ ಕೈಬಿಟ್ಟು ಹೋಗಿರುವ ಹಟ್ಟಿ, ತಾಂಡಾಗಳೆಲ್ಲದೆ ಸಾಮಾನ್ಯ ರೈತರು ವಾಸಿಸುವ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಗುರುತಿಸಿ ಕಂದಾಯ ಗ್ರಾಮಗಳನ್ನಾಗಿಸಲು ಪ್ರಸ್ತಾವನೆ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಂದಾಯ ಇಲಾಖೆಯಲ್ಲಿ ಎಷ್ಟು ಕೆಲಸ ಮಾಡಿದರೂ ಕಡಿಮೆಯೇ! ಜನಸಾಮಾನ್ಯರಿಗೆ ಕಂದಾಯ ಸೌಲಭ್ಯಗಳನ್ನು ಒದಗಿಸುವಲ್ಲಿ ಅಧಿಕಾರಿಗಳಿಗೆ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ. ಅಧಿಕಾರಿಗಳು ಸಕಾಲದಲ್ಲಿ ಜನಸಾಮಾನ್ಯರ ಕೆಲಸ ಮಾಡಿಕೊಟ್ಟಲ್ಲಿ ಇಲಾಖೆಯ ಬಗ್ಗೆ ಅವರಿಗೆ ಒಳ್ಳೆಯ ಅಭಿಪ್ರಾಯ ಬರುತ್ತದೆ ಎಂದು ಹೇಳಿದರು.

ಜಿಲ್ಲಾಧಿಕಾರಿಗಳ ಡಿಜಿಟಲ್ ಸಹಿ ದುರುಪಯೋಗವಾಗಿರುವ ಬಗ್ಗೆ ಮಾತನಾಡಿದ ಸಚಿವರು, ಇಲಾಖೆಯಲ್ಲಿ ಇಂತಹ ವಂಚನೆಗಳನ್ನು ಮಾಡುವಂತಹ ಅಧಿಕಾರಿ/ಸಿಬ್ಬಂದಿಯನ್ನು ಕಿತ್ತು ಹಾಕಬೇಕು. ವಂಚನೆ ಮಾಡುವಂತಹವರ ವಿರುದ್ಧ ತನಿಖೆ ನಡೆಸಿ ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಭೂಮಿ ಪೆಂಡೆನ್ಸಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲಿಸಿದ ಸಚಿವರು, ಭೂಮಿ ತಂತ್ರಾ ಆರದಲ್ಲಿ ಈವರೆಗೆ ಸ್ವೀಕೃತವಾದ ಒಟ್ಟು 28629 ಅರ್ಜಿಗಳ ಪೈಕಿ 21045 ಅರ್ಜಿಗಳು ತಿರಸ್ಕೃತಗೊಂಡಿವೆ. ಜಿಲ್ಲೆಯ ಇತರೆ ತಾಲ್ಲೂಕುಗಳಿಗೆ ಹೋಲಿಸಿದರೆ ಕುಣಿಗಲ್ ತಾಲ್ಲೂಕಿನಲ್ಲಿ ಅತಿ ಹೆಚ್ಚು ಭೂಮಿ ಪೆಂಡೆನ್ಸಿ ಅರ್ಜಿಗಳು ಬಾಕಿ ಇವೆ. ಬಾಕಿಯಿರುವ 777 ಅರ್ಜಿಗಳನ್ನು ವಿಲೇವಾರಿ ಮಾಡಲು ವಿಳಂಬಕ್ಕೆ ಕಾರಣವೇನು ಎಂದು ತಹಶೀಲ್ದಾರ್ ರಡ್ಡಿ ಅವರನ್ನು ತರಾಟೆಗೆ ತೆಗೆದುಕೊಂಡ ಸಚಿವರು ಎಲ್ಲಾ ಅರ್ಹ ಅರ್ಜಿಗಳ ನೈಜತೆ ಪರಿಶೀಲಿಸಿ ಸಕಾಲದಲ್ಲಿ ವಿಲೇವಾರಿ ಮಾಡಬೇಕು ಎಂದು ನಿರ್ದೇಶಿಸಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಕಂದಾಯ ಗ್ರಾಮಗಳೆಂದು ಗುರುತಿಸಿರುವ 522 ಗ್ರಾಮಗಳ ನಿವಾಸಿಗಳಿಗೆ 7653 ಹಕ್ಕುಪತ್ರಗಳನ್ನು ವಿತರಿಸಲು ಅಂತಿಮ ಅಧಿಸೂಚನೆ ನೀಡಲಾಗಿದೆ.

ಈಗಾಗಲೇ ಗುರುತಿಸಿರುವ ಉಪ ಗ್ರಾಮ/ಕಂದಾಯ ಗ್ರಾಮಗಳನ್ನು ಹೊರತುಪಡಿಸಿ ಹೊಸದಾಗಿ 683 ದಾಖಲೆ ರಹಿತ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಗುರುತಿಸಲಾಗಿದೆ. ಬಗರ್ ಹುಕುಂಗಾಗಿ 6(2) ಅಡಿ ಸ್ವೀಕೃತವಾದ 1,47,478 ಅರ್ಜಿಗಳ ಪೈಕಿ 5,089 ಅರ್ಜಿಗಳು ಮಾತ್ರ ಅರ್ಹವಾಗಿವೆ ಎಂದು ಸಚಿವರಿಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಜನವರಿಯಿಂದ ದರಖಾಸ್ತು ಪ್ರಗತಿಯಿಲ್ಲದೆ ನಿರೀಕ್ಷಿತ ಸಾಧನೆಯಾಗಿಲ್ಲ, ಜನರಿಗೆ, ಮುಖ್ಯಮಂತ್ರಿಗಳಿಗೆ, ವಿಧಾನಸಭೆಗೆ ಏನೆಂದು ಉತ್ತರ ನೀಡಬೇಕು? ಎಂದು ಅಧಿಕಾರಿಗಳಿಗೆ ಮಾತಿನ ಚಾಟಿ ಬೀಸಿದ ಸಚಿವರು, ರಾಜ್ಯದಲ್ಲಿ ಬಗರ್ ಹುಕುಂ ಅರ್ಜಿಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿ 1 ತಿಂಗಳು ಕಳೆದಿದೆ. ಉಳಿದಿರುವ ಇನ್ನೆರಡು ತಿಂಗಳೊಳಗಾಗಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿಯನ್ನು ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.

ಭೂ ಸುರಕ್ಷಾ ಯೋಜನೆಯಡಿ ಹಳೆಯ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡುತ್ತಿರುವ ಕಾರ್ಯದಲ್ಲಿ ಈವರೆಗೆ ಶಿರಾ ತಾಲ್ಲೂಕು ಹೊರತುಪಡಿಸಿ ಜಿಲ್ಲೆಯಲ್ಲಿ 83,59,764 ಕಡತ ಹಾಗೂ ವಹಿಗಳ ಪುಟಗಳನ್ನು ಗಣಕೀಕರಣಗೊಳಿಸಲಾಗಿದೆ. ಅನಗತ್ಯ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡುತ್ತಿರುವುದರಿಂದಲೇ ಕಂದಾಯ ಪ್ರಗತಿ ವಿಳಂಬಕ್ಕೆ ಕಾರಣವೆಂದ ಅವರು, ಇನ್ನಾರು ತಿಂಗಳೊಳಗೆ ಹಳೆಯ ದಾಖಲೆಗಳ ಗಣಕೀಕರಣ ಕಾರ್ಯ ಪೂರ್ಣಗೊಳಿಸಬೇಕೆಂದು ತಾಕೀತು ಮಾಡಿದರು. ಲ್ಯಾಂಡ್ ಬೀಟ್, ಭೂ ದಾಖಲೆಗಳ ನ್ಯಾಯಾಲಯ ಪ್ರಕರಣ, ಭೂ ಪರಿವರ್ತನೆ, ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ, ಇ-ಆಫೀಸ್ ಅನುಷ್ಠಾನ ಸೇರಿದಂತೆ ಮತ್ತಿತರ ಕಂದಾಯ ವಿಷಯಗಳ ಪ್ರಗತಿಯನ್ನು ಸಚಿವರು ಪರಿಶೀಲಿಸಿದರು.

ಸಭೆಯಲ್ಲಿ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ ಹಾಗೂ ಬಿ.ಸುರೇಶ್ ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಕಂದಾಯ ಆಯುಕ್ತ ಮಂಜುನಾಥ್ ಸೇರಿದಂತೆ ಜಿಲ್ಲೆಯ ವಿವಿಧ ಅಧಿಕಾರಿಗಳು ಭಾಗಿಯಾಗಿದ್ದರು.

RELATED ARTICLES

Latest News