ಶಿರಾಡಿ ರಸ್ತೆ ಬಂದ್ ಮಾಡಲ್ಲ : ಸಚಿವ ಸಿ.ಸಿ.ಪಾಟೀಲ್

Social Share

ಹಾಸನ, ಜು.12- ಬೆಂಗಳೂರು- ಮಂಗಳೂರು ಸಂಪರ್ಕದ ಪ್ರಮುಖ ಹೆದ್ದಾರಿಯಾಗಿರುವ ಶಿರಾಡಿ ರಸ್ತೆ ಬಂದ್ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು.

ಸಕಲೇಶಪುರ ಬಳಿಯ ದೋಣಿಗಾಲ್ ಸಮೀಪದ ಹೆದ್ದಾರಿ ಕುಸಿತದ ಸ್ಥಳ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ-75 ನೆಲಮಂಗಲದಿಂದ ಹಾಸನದವರೆಗೆ ಅಚ್ಚುಕಟ್ಟಾಗಿ ಮಾಡಲಾಗಿದೆ. ಆದರೆ ಹಾಸನದಿಂದ ಸಕಲೇಶಪುರ ಮಾರ್ಗದ ರಸ್ತೆ ಕಾಮಗಾರಿ ಹಲವು ವರ್ಷಗಳಿಂದ ಮಂದಗತಿಯಲ್ಲಿ ಸಾಗುತ್ತಿದೆ. ಅಲ್ಲದೆ ಕಳಪೆ ಕಾಮಗಾರಿ ನಡೆದಿರುವುದನ್ನು ವೀಕ್ಷಿಸಿದ್ದೇನೆ ಎಂದು ತಿಳಿಸಿದರು.

ಮಂಗಳೂರು ಸಂಪರ್ಕದ ಪ್ರಮುಖ ರಸ್ತೆಯಾದ ಕಾರಣ ಬಂದ್ ಮಾಡದಂತೆ ರಸ್ತೆ ಕಾಮಗಾರಿ ನಿರ್ವಹಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ. ಕೋವಿಡ್ ಹಾಗೂ ಮಳೆ ಕಾರಣ ಕಾಮಗಾರಿ ವಿಳಂಬವಾಗಿದೆ. ಕೆಲವು ಕಡೆ ಕಳಪೆ ಕಾಮಗಾರಿ ನಡೆದಿದ್ದು, ಸಮರ್ಪಕವಾಗಿ ದುರಸ್ತಿ ನಡೆಸಲು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು.

ಈ ಹೆದ್ದಾರಿ ಕಾಮಗಾರಿ ವಿಚಾರವಾಗಿ ವಿಧಾನಸಭೆಯಲ್ಲಿ ಸಹ ಪ್ರಸ್ತಾಪವಾದ ಕಾರಣ ಖುದ್ದು ವೀಕ್ಷಣೆಗೆ ಬಂದಿದ್ದೇನೆ. ಕಳಪೆ ಕಾಮಗಾರಿ ನಡೆಯಲು ಅವಕಾಶ ನೀಡುವುದಿಲ್ಲ. 2024ರ ಮಾರ್ಚ್ ವೇಳೆಗೆ ಕಾಮಗಾರಿ ಪೂರ್ಣ ಗೊಳಿಸುವ ಬಗ್ಗೆ ಗುತ್ತಿಗೆದಾರರು ಭರವಸೆ ನೀಡಿದ್ದಾರೆ ಎಂದರು.

ಹೆದ್ದಾರಿ ಕಾಮಗಾರಿ ನೆಪದಲ್ಲಿ ಮರಳು ಅಕ್ರಮ ಸಾಗಾಣಿಕೆ ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಸಚಿವ ಹಾಲಪ್ಪ ಆಚಾರ್ ಅವರ ಬಳಿ ಮಾತನಾಡಿದ್ದು ಅಗತ್ಯ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದರು.

ಗಡ್ಕರಿ ಗಮನಕ್ಕೆ ತರುವೆ: ಹೆದ್ದಾರಿ ಕಾಮಗಾರಿ ವಿಷಯದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ-75 ಕಾಮಗಾರಿ ವಿಚಾರವಾಗಿಯೂ ಸಹ ಗಡ್ಕರಿ ಅವರ ಗಮನಕ್ಕೆ ತರಲಾಗುವುದು ಎಂದು ಸಿ.ಸಿ.ಪಾಟೀಲ್ ತಿಳಿಸಿದರು.

ಅಧಿಕಾರಿ ನೇಮಕ: ಹೆದ್ದಾರಿ ಕಾಮಗಾರಿ ವೀಕ್ಷಣೆಗೆ ಗುಣಮಟ್ಟ ತಪಾಸಣೆಗೆ ಅಧಿಕಾರಿಯನ್ನು ನೇಮಿಸಿ ಉಸ್ತುವಾರಿ ವಹಿಸಲಾಗುವುದು. ಯಾವುದೇ ಸಾರ್ವಜನಿಕ ದೂರು ಹಾಗೂ ಇತರೆ ಹೆದ್ದಾರಿ ಕಾಮಗಾರಿ ಸಮಸ್ಯೆ ಇದ್ದರೂ ಅವರು ಗಮನಹರಿಸಲಿದ್ದಾರೆ ಎಂದರು.

Articles You Might Like

Share This Article