Friday, October 25, 2024
Homeರಾಜಕೀಯ | Politicsಚುನಾವಣಾ ಪ್ರಚಾರವೇ ಮೋದಿಯವರ ಕೊನೇ ಭಾಷಣವಾಗಲಿದೆ, ಈಗಲಾದರೂ ಸತ್ಯ ಹೇಳಿ : ಸಿದ್ದರಾಮಯ್ಯ ತಿರುಗೇಟು

ಚುನಾವಣಾ ಪ್ರಚಾರವೇ ಮೋದಿಯವರ ಕೊನೇ ಭಾಷಣವಾಗಲಿದೆ, ಈಗಲಾದರೂ ಸತ್ಯ ಹೇಳಿ : ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು, ಏ.29- ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ನಿರಂತರ ಅನ್ಯಾಯವಾಗುತ್ತಿದೆ ಎಂದು ದೂರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಯುಷಾನ್‌ ಭಾರತ್‌, ಪ್ರಧಾನಮಂತ್ರಿ ಫಸಲ್‌ಬೀಮಾ, ಕೃಷಿ ಸನಾನ್‌ ಯೋಜನೆಗಳಲ್ಲಿ ಅವ್ಯವಹಾರವಾಗಿದೆ ಎಂದು ಕೇಂದ್ರ ಸಚಿವರ ಹೇಳಿಕೆಗಳನ್ನು ಉಲ್ಲೇಖಿಸಿ ತಿರುಗೇಟು ನೀಡಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಲೋಕಸಭೆ ಚುನಾವಣಾ ಪ್ರಚಾರ ಕೊನೆಯ ಭಾಷಣವಾಗಿರಬಹುದು. ಇನ್ನಾದರೂ ಸತ್ಯ ಮಾತನಾಡಿ, ಜಾತಿ-ಜಾತಿ, ಧರ್ಮ-ಧರ್ಮಗಳ ನಡುವೆ ದ್ವೇಷ ಹುಟ್ಟಿಸಿ ರಾಜಕೀಯ ಲಾಭ ಪಡೆಯುವ ದುಷ್ಟತನವನ್ನು ಕೈಬಿಟ್ಟು, ಹತ್ತು ವರ್ಷಗಳ ಸಾಧನೆಯ ಬಗ್ಗೆ ಮಾತನಾಡಲಿ.

ಕನ್ನಡಿಗರಿಗೆ ಮಾಡಿರುವ ಅನ್ಯಾಯಗಳ ಬಗ್ಗೆ ಉತ್ತರ ಕೊಡಲಿ ಎಂದು ಆಗ್ರಹಿಸಿದ್ದಾರೆ.ಕರ್ನಾಟಕಕ್ಕೆ ಯುಪಿಎ ಸರ್ಕಾರ ಕೊಟ್ಟಿದ್ದು ಕಡಿಮೆ, ಎನ್‌ಡಿಎ ಸರ್ಕಾರ ಎಷ್ಟೊಂದು ಕೊಟ್ಟಿದೆ ಎಂದು ಲೆಕ್ಕ ಹೇಳುತ್ತಿದ್ದಾರೆ.

2018-19ರಲ್ಲಿ ಕೇಂದ್ರ ಬಜೆಟ್‌ ಗಾತ್ರ ರೂ. 24,42,213 ಕೋಟಿ, ಕರ್ನಾಟಕಕ್ಕೆ ನೀಡಿದ್ದ ತೆರಿಗೆ ಪಾಲು ರೂ.35,895 ಕೋಟಿ ಮತ್ತು ಕೇಂದ್ರ ಪುರಸ್ಕೃತ ಯೋಜನೆಯ ಪಾಲು ರೂ. 16,082 ಕೋಟಿ. ಹೀಗೆ ಒಟ್ಟು ರೂ.46,288 ಕೋಟಿ ರಾಜ್ಯಕ್ಕೆ ಬಂದಿತ್ತು. 2023-24ನೇ ಸಾಲಿನ ಕೇಂದ್ರ ಬಜೆಟ್‌ ಗಾತ್ರ ರೂ.45,03,097 ಕೋಟಿ. ಆದರೆ ನಿಮ್ಮ ಸರ್ಕಾರ ಕರ್ನಾಟಕಕ್ಕೆ ತೆರಿಗೆ ಹಂಚಿಕೆ, ಕೇಂದ್ರ ಪುರಸ್ಕೃತ ಯೋಜನೆಯ ಪಾಲು ಸೇರಿ ನೀಡಿದ್ದು ಕೇವಲ ರೂ.55,529 ಕೋಟಿ. ಐದು ವರ್ಷಗಳಲ್ಲಿ ಬಜೆಟ್‌ ಗಾತ್ರ ಹೆಚ್ಚು ಕಡಿಮೆ ದುಪ್ಪಟ್ಟಾದರೂ ಕರ್ನಾಟಕಕ್ಕೆ ನೀಡುವ ಹಣವೂ ದುಪ್ಪಟ್ಟಾಗಬೇಕಿತ್ತು ಅಲ್ಲವೇ? ಅಂದರೆ ಕನಿಷ್ಠ ಒಂದು ಲಕ್ಷ ಕೋಟಿಯನ್ನಾದರೂ ನೀವು ನೀಡಬೇಕಾಗಿತ್ತು ಎಂದು ಹೇಳಿದ್ದಾರೆ.

ಯುಪಿಎ ಸರ್ಕಾರ ಹತ್ತು ವರ್ಷಗಳಲ್ಲಿ 95,21,493 ಲಕ್ಷ ಕೋಟಿ ರೂಪಾಯಿಗಳ ಬಜೆಟ್‌ ರೂಪಿಸಿ ಖರ್ಚು ಮಾಡಿತ್ತು. ನಿಮ ನೇತೃತ್ವದ ಎನ್‌ಡಿಎ ಸರ್ಕಾರ ಹತ್ತು ವರ್ಷಗಳ ಅವಧಿಯಲ್ಲಿ ಒಟ್ಟು 282 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್‌ ಮಾಡಿ ಖರ್ಚು ಮಾಡಿತ್ತು. ಅಂದರೆ ಬಜೆಟ್‌ ಗಾತ್ರ ಮೂರು ಪಟ್ಟು ಹೆಚ್ಚಾದರೂ ಅನುದಾನದ ಪ್ರಮಾಣ ಮಾತ್ರ ಏರಿಕೆಯಾಗಿಲ್ಲ ಎಂದು ಆಕ್ಷೇಪಿಸಿದ್ದಾರೆ.

2014ರ ಯುಪಿಎ ಸರ್ಕಾರದ ಕಾಲದಲ್ಲಿ ದೇಶದ ಸಾಲ 54 ಲಕ್ಷ ಕೋಟಿ ರೂಪಾಯಿಗಳಿತ್ತು, ಈಗ ಒಟ್ಟು ಸಾಲದ ಪ್ರಮಾಣ 172.37 ಲಕ್ಷ ಕೋಟಿ ರೂಪಾಯಿಗಳಾಗಿದೆ. ಇದು ಸಾಧನೆಯೇ ? ರಾಷ್ಟ್ರೀಯ ಹೆದ್ದಾರಿ ನಿರ್ಮಿಸಿರುವುದು ನಿಮ್ಮ ಸಾಧನೆ ಎಂದು ಹೇಳಿಕೊಳ್ಳುತ್ತಿರಲ್ಲಾ ಮೋದಿಯವರೇ, ಇದರಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಪಾಲೆಷ್ಟು? ರಸ್ತೆ ನಿರ್ಮಾಣ ಗುತ್ತಿಗೆದಾರರ ಸಾಲ ಎಷ್ಟು ಎಂದು ಲೆಕ್ಕ ಯಾಕೆ ಹೇಳುವುದಿಲ್ಲ.

ಈ ಹೆದ್ದಾರಿ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಪಾಲು ನೀಡಿದ್ದರೂ ಹೆದ್ದಾರಿ ಟೋಲ್‌ಗಳಲ್ಲಿ ಸಂಗ್ರಹಿಸುವ ದುಡ್ಡ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಯಾಕೆ ಹೋಗಬೇಕು? ಕಳೆದ ವರ್ಷ ಟೋಲ್‌ ಗಳಿಂದ ಸಂಗ್ರಹವಾಗಿರುವ ಹಣದ ಮೊತ್ತ 64,810 ಕೋಟಿ ರೂಪಾಯಿ. ಕರ್ನಾಟಕ ರಾಜ್ಯವೊಂದರಿಂದಲೇ ಸಂಗ್ರಹವಾಗಿರುವ ಟೋಲ್‌ ಹಣ 3,600 ಕೋಟಿ ರೂಪಾಯಿ ಎಂದು ವಿವರಿಸಿದ್ದಾರೆ.

ಕೇಂದ್ರ ಸರ್ಕಾರದ ಸಹಯೋಗದ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ. ಕೃಷ್ಣಾ, ಕಾವೇರಿ, ಮೇಕೆದಾಟು, ಮಹದಾಯಿ ಯೋಜನೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ. ಭದ್ರ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆಯಾಗಿಲ್ಲ ಎಂದು ಆಕ್ಷೇಪಿಸಿದ್ದಾರೆ.

ಪ್ರಧಾನಮಂತ್ರಿ ಸೂರ್ಯ ಘರ್‌ ಮುಫ್ತ ಬಿಜಲಿ ಯೋಜನೆಯ ಮೂಲಕ ಬಡ ಕುಟುಂಬಗಳಿಗೆ ಉಚಿತ ವಿದ್ಯುತ್‌ ಪೂರೈಸುತ್ತೇವೆ ಎನ್ನುವುದು ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ. ಕಳೆದ ವರ್ಷದ ಬಜೆಟ್‌ ನಲ್ಲಿಯೇ ಘೋಷಿಸಿದ್ದ ಈ ಯೋಜನೆ ಸಂಪೂರ್ಣ ಉಚಿತ ಅಲ್ಲ. 1 ಕಿಲೋ ವ್ಯಾಟ್‌ ಉತ್ಪಾದಿಸುವ ರೂಫ್‌ಟಾಪ್‌ ಸೋಲಾರ್‌ ಪ್ಯಾನೆಲ್‌ಗೆ 50000 ರೂ ವೆಚ್ಚವಾಗುತ್ತದೆ. ಈ ಮೊತ್ತವನ್ನು ಶೇ.40ರಷ್ಟು ಹಣವನ್ನು ಖರೀದಿಸುವ ಕುಟುಂಬವೇ ಭರಿಸಬೇಕಾಗುತ್ತದೆ. ಬ್ಯಾಂಕ್‌ಗಳಿಂದ ಸಾಲ ಕೊಡಿಸಲಾಗುತ್ತಿದೆ. ಅಂದರೆ ಸೋಲಾರ್‌ ಪ್ಯಾನೆಲ್‌ ಅಳವಡಿಸುವ ವೆಚ್ಚದ ಹೊರೆ ಬಡ ಕುಟುಂಬದ ಮೇಲೆ ಹೊರಿಸಲಾಗಿದೆ. ಮತ್ತೆ ಎಲ್ಲಿಯ ಉಚಿತ ಎಂದು ಪ್ರಶ್ನಿಸಿದ್ದಾರೆ.

70 ವರ್ಷ ಮೇಲ್ಪಟ್ಟವರಿಗೂ ಆಯಷ್ಮಾನ್‌ ಸೇವೆ ವಿಸ್ತರಿಸಲಾಗುವುದು ಎನ್ನುವುದು ಪ್ರಣಾಳಿಕೆಯಲ್ಲಿ ಬಿಜೆಪಿ ಭರವಸೆ ನೀಡಿದೆ. ವಾಸ್ತವ ಸಂಗತಿ ಎಂದರೆ ಆಯುಷ್ಮಾನ್‌ ಯೋಜನೆಯ ಆರೋಗ್ಯ ವಿಮೆಯಲ್ಲಿ ಅಕ್ರಮ ನಡೆದಿರುವುದನ್ನು ಸಿಎಜಿಯೇ ವರದಿ ಬಹಿರಂಗ ಮಾಡಿದೆ. 8.2 ಲಕ್ಷ ರೋಗಿಗಳು ಆಧಾರ್‌ ಬಯೋಮೆಟ್ರಿಕ್‌ ದಾಖಲೆಗಳಿಲ್ಲದೆ ಎರಡಕ್ಕಿಂತ ಹೆಚ್ಚು ಬಾರಿ ಚಿಕಿತ್ಸೆ ಪಡೆದಿರುವುದನ್ನು ಸಿಎಜಿ ಗುರುತಿಸಿತ್ತು. ನಕಲಿ ವಿಮೆಗಳಿಗೆ ರೂ.1697 ಕೋಟಿವರೆಗೆ ಸರ್ಕಾರದಿಂದ ಹಣ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಪಿಎಂ ಕಿಸಾನ್‌ ಸಮಾನ್‌ ನಿಧಿ ಯೋಜನೆಯಡಿ 11 ಕೋಟಿ ರೈತರಿಗೆ ಸಹಾಯ ಧನ ನೀಡಲಾಗಿದೆ. ಕೃಷಿ ಸಚಿವರೇ ರಾಜ್ಯಸಭೆಯಲ್ಲಿ 4 ಲಕ್ಷ ಅನರ್ಹ ರೈತರಿಗೆ ರೂ. 3 ಸಾವಿರ ಕೋಟಿ ಸಹಾಯ ಧನ ವಿತರಣೆಯಾಗಿದ್ದು, ಮರಳಿ ವಸೂಲಿ ಮಾಡಲಾಗುತ್ತಿದೆ ಎಂದು ಹೇಳಿದ್ಧಾರೆ. ದೇಶದಲ್ಲಿ ಶೇ.55ರಷ್ಟು ಭೂ ರಹಿತ ರೈತರಿದ್ದು, ಅವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎನ್ನುವುದು ಮತ್ತೊಂದು ದುರಂತ.

ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯನ್ನು ತಂತ್ರಜ್ಞಾನದ ಬಳಕೆಯ ಮೂಲಕ ಮತ್ತಷ್ಟು ಬಲಪಡಿಸಿ ನಿಖರ ಪರಿಶೀಲನೆ ನಡೆಸಿ ಪರಿಹಾರದ ಹಣವನ್ನು ವೇಗವಾಗಿ ಪಾವತಿಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ. ವಾಸ್ತವ ಸಂಗತಿ ಎಂದರೆ ಹಿಂದಿನ ಅವಧಿಯಲ್ಲಿ 5 ವರ್ಷಗಳಲ್ಲಿ ಈ ಯೋಜನೆಯಿಂದ ರೈತರಿಗೆ ಆದ ಲಾಭಕ್ಕಿಂತ ವಿಮಾ ಕಂಪನಿಗಳಿಗೆ ಆದ ಲಾಭವೇ ಹೆಚ್ಚು.

ಕೃಷಿ ಸಚಿವ ನರೇಂದ್ರ ತೋಮರ್‌ ರಾಜ್ಯಸಭೆಯಲ್ಲಿ ಉತ್ತರಿಸಿರುವಂತೆ, 2016-17ರಿಂದ 2021-22ರ ಅವಧಿಯಲ್ಲಿ ರೈತರು ರೂ. 1.59 ಲಕ್ಷ ಪ್ರೀಮಿಯಂ ಹಣ ಪಾವತಿಸಿದ್ದರು. ಈ ಪೈಕಿ ವಿಮಾ ಕಂಪನಿಗಳು ರೂ. 1.19 ಲಕ್ಷ ಕೋಟಿ ಹಣವನ್ನು ರೈತರಿಗೆ ಪಾವತಿಸಿದ್ದವು. ಅಂದರೆ ರೂ.40000 ಕೋಟಿಗಳಷ್ಟು ಲಾಭಗಳಿಸಿದ್ದವು ಎಂದು ಅಂಕಿ ಅಂಶ ಹಂಚಿಕೊಂಡಿದ್ದರು ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

RELATED ARTICLES

Latest News